Mysore
28
few clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಗೌರಿ-ಗಣೇಶ, ಈದ್‌ ಮಿಲಾದ್‌ ಆಚರಣೆಯಲ್ಲಿ ಶಾಂತಿ ಸೌಹರ್ದತೆ ಇರಲಿ : ಇನ್‌ಸ್ಪೆಕ್ಟರ್ ಆನಂದಮೂರ್ತಿ

gowri ganesha

ಹನೂರು : ಮುಂಬರುವ ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದಯುತವಾಗಿ, ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಆಚರಣೆ ಮಾಡಬೇಕೆಂದು ಪಟ್ಟಣದ ಇನ್‌ಸ್ಪೆಕ್ಟರ್ ಆನಂದಮೂರ್ತಿ ತಿಳಿಸಿದರು.

ಹನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಏಕಾಗವಾಕ್ಷಿ ಸಮಿತಿ ವತಿಯಿಂದ ಅನುಮತಿ ಪಡೆದು ಗಣಪತಿ ಪ್ರತಿಷ್ಠಾಪನೆ ಮಾಡಬೇಕು. ಆಗಸ್ಟ್ 27ರಂದು ಗೌರಿ-ಗಣೇಶ ಹಾಗೂ ಸೆ.5ರಂದು ಈದ್ ಮಿಲಾದ್ ಹಬ್ಬ ನಡೆಯಲಿದೆ. ಎರಡು ಸಮುದಾಯದವರು ಶಾಂತಿ ಸಹ ಬಾಳ್ವೆಯಿಂದ ಹಬ್ಬವನ್ನು ಆಚರಣೆ ಮಾಡಬೇಕು. ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಗಣಪತಿ ಪ್ರತಿಷ್ಠಾಪನೆ ಮಾಡಿದರೆ ಅಂತಹವರ ವಿರುದ್ಧ ಹಾಗೂ ಸಮಾಜದಲ್ಲಿ ಅಶಾಂತಿ ಮೂಡಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಅಗ್ನಿಶಾಮಕ ಠಾಣೆ, ವಿದ್ಯುತ್ ಇಲಾಖೆ ಹಾಗೂ ಧ್ವನಿವರ್ಧಕ ಅಳವಡಿಸಲು ತಹಶೀಲ್ದಾರ್ ಅನುಮತಿ ಪಡೆದು ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು. ಗಣಪತಿ ಪ್ರತಿಷ್ಠಾಪನೆ ಮಾಡುವವರು ಮೊದಲೇ ಎಷ್ಟು ದಿನ ಕೂರಿಸುತ್ತಾರೆ ಯಾವಾಗ ಬಿಡುತ್ತಾರೆ ಎಂಬುದರ ಸಮಗ್ರ ಮಾಹಿತಿಯನ್ನು ನೀಡಬೇಕು. ಮನರಂಜನೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಮುಂಚಿತವಾಗಿ ಮಾಹಿತಿ ನೀಡಬೇಕು. ಗಣಪತಿ ವಿಸರ್ಜನೆ ಮಾಡುವಾಗ ಯಾವುದಾದರೂ ಅವಘಡಗಳು ಸಂಭವಿಸಿದರೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್ ಆಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ವಿಸರ್ಜನೆ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಸಬಾರದು ಎಂದು ತಿಳಿಸಿದರು.

ಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಮಯದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಹಾಗೂ ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ನಿಯಮ ಪಾಲನೆ ಮಾಡಬೇಕು. ಮುಸ್ಲಿಂ ಸಮುದಾಯದವರು ಸಹ ಈದ್ ಮಿಲಾದ್ ಹಬ್ಬವನ್ನು ಸೋದರತೆ ಭಾವನೆಯಿಂದ ಆಚರಣೆ ಮಾಡುವ ಮೂಲಕ ಮಾದರಿ ನಡೆ ಅನುಸರಿಸಬೇಕು ಎಂದು ಸಲಹೆ ನೀಡಿದರು.

ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಪ್ರಕಾಶ್ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಗಣಪತಿ ವಿಸರ್ಜನೆ ಮಾಡಲು ತಹಸಿಲ್ದಾರ್ ಕಚೇರಿ ಮುಂಭಾಗ ಪಟ್ಟಣ ಪಂಚಾಯಿತಿ ವತಿಯಿಂದ ಹೋಂಡಾ ನಿರ್ಮಾಣ ಮಾಡಿ ನೀರು ತುಂಬಿಸಲಾಗುತ್ತದೆ ಪ್ರತಿಯೊಬ್ಬರು ಈ ಹೊಂಡದಲ್ಲಿಯೇ ಗಣಪತಿಯನ್ನು ವಿಸರ್ಜನೆ ಮಾಡುವ ಮೂಲಕ ಪಟ್ಟಣ ಪಂಚಾಯಿತಿಯ ಜೊತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಚೆಸ್ಕಾಂ ಎಇ ಆನಂದ್, ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಮಹೇಶ್, ರಾಜಸ್ವ ನಿರೀಕ್ಷಕ ಶೇಷಣ್ಣ , ಮುಖಂಡರಾದ ಜಸ್ಸಿಂ ಪಾಶಾ, ಇಸ್ಮಾಯಿಲ್, ಮಾದೇಶ್ ಅಭಿಲಾಶ್, ವೆಂಕಟೇಶ್ ನಂದೀಶ್, ಯೋಗೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!