Mysore
26
overcast clouds

Social Media

ಮಂಗಳವಾರ, 12 ಮೇ 2026
Light
Dark

ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

Fraud Rishi

ಒಂದು ಕಾಲಕ್ಕೆ ಸಿಕ್ಕಾಪಟ್ಟೆ ವಿವಾದಕ್ಕೆ ಸಿಲುಕಿದವರು ಋಷಿ. ವಿವಾದಗಳ ಜೊತೆಗೆ ‘ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ …’ ಎಂಬ ಹಾಡು ಬರೆದು ಜನಪ್ರಿಯರೂ ಆಗಿದ್ದರು. ‘ಸೂರ್ಯ ದಿ ಗ್ರೇಟ್‍’, ‘ಕೊಟ್ಲಲ್ಲಪ್ಪೋ ಕೈ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಋಷಿ, ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವೇ ಇದ್ದರು. ಇದೀಗ ಅವರು ಹೊಸ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಚಿತ್ರದಲ್ಲಿ ನಾಯಕನಾಗಿಯೂ ಋಷಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹೆಸರು ‘ಫ್ರಾಡ್‍ ಋಷಿ’. ಈ ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಸಾಮಾನ್ಯವಾಗಿ ಚಿತ್ರೀಕರಣ ಪೂರ್ಣವಾದ ಮೇಲೆ‌ ಹಾಡು ಬಿಡುಗಡೆ ಮಾಡುವುದು ವಾಡಿಕೆ.‌ ಆದರೆ, ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ‌ ಆನಂತರ ಚಿತ್ರೀಕರಣ ಆರಂಭಿಸುತ್ತಿರುವುದು ಈ ಚಿತ್ರದ ವಿಶೇಷ.

‘ಫ್ರಾಡ್ ಋಷಿ ಚಿತ್ರದ ಕುರಿತು ಮಾತನಾಡುವ ಋಷಿ, ‘ಇದೊಂದು ಕಾಮಿಡಿ ಜಾನರ್‌ನ ಚಿತ್ರ. ಜೊತೆಗೆ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಚಿತ್ರವೂ ಹೌದು. ಚಿತ್ರದಲ್ಲಿ ಏಳು ಹಾಡುಗಳಿವೆ. ಅದರಲ್ಲಿ ನಾಲ್ಕು ಹಾಡುಗಳನ್ನು ಬಿಡುಗಡೆ ಮಾಡಿ, ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸುತ್ತೇವೆ.

ನಾನೇ ನಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ ಬೆಂಬಲ ನೀಡುತ್ತಿದ್ದಾರೆ. ನಿರ್ದೇಶನ, ಕಥೆ,‌ ಚಿತ್ರಕಥೆ, ಗೀತರಚನೆ, ಸಂಭಾಷಣೆ ಕೂಡ ನನ್ನದೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಅಭಿನಯಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಕಥೆಯೇ ನಾಯಕ. ಚಿತ್ರದಲ್ಲಿ ಮೂವರು ನಾಯಕಿಯರು ಇರುತ್ತಾರೆ. ಅಂದುಕೊಂಡ ಹಾಗೆ ಆದರೆ ಇದೇ ಡಿಸೆಂಬರ್ ಒಳಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದರು. ‘ಫ್ರಾಡ್ ಋಷಿ’ ಚಿತ್ರಕ್ಕೆ ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಶಂಕರ್ ಛಾಯಾಗ್ರಹಣ ಹಾಗೂ ಸುರೇಶ್ ಸಂಕಲನ ಈ ಚಿತ್ರಕ್ಕಿದೆ.

Tags:
error: Content is protected !!