ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ತಾವರೆಕಟ್ಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ದರ್ಶನ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 7.30ರಿಂದ 2 ಗಂಟೆಯವರೆಗೆ ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ನಂತರ ರಾತ್ರಿ 8.30ರಿಂದ ಮುಂದುವರಿದು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಈ ಸಂಬಂಧ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರು ಪ್ರಕಟಣೆ ಬಿಡುಗಡೆ ಮಾಡಿ, ರಾಷ್ಟ್ರಪತಿಯವರ ಆಗಮನ ಸಂದರ್ಭದಲ್ಲಿ ಭದ್ರತಾ ಕ್ರಮಗಳ ಭಾಗವಾಗಿ ವಿಧಿಸಿರುವ ನಿಬಂಧನೆಗಳಿಗೆ ಭಕ್ತರು ಸಹಕರಿಸುವಂತೆ ಮನವಿ ಮಾಡಿದ್ದಾರೆ.





