ಮಂಡ್ಯ: ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ ಉದ್ದೇಶದಿಂದ ಯಾತ್ರೆ ಆಯೋಜನೆ ಮಾಡಲಾಗಿದೆ. ಧರ್ಮಸ್ಥಳದಿಂದ ಸಾಕಷ್ಟು ಸಮಾಜಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ಯಾತ್ರೆ ಕೈಗೊಂಡಿದ್ದೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ದರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ ಎಸ್ಐಟಿ ತನಿಖೆ ಮೇಲೆ ನಿರೀಕ್ಷೆಗಳಿಲ್ಲ. ಹೀಗಾಗಿ ಎನ್ಐಎ ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು ಎನ್ಐಎ ತನಿಖೆ ಅವಶ್ಯಕ ಎಂದು ಆಗ್ರಹಿಸಿದರು.





