ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ರ್ಯಾಡಿಸನ್ ಬ್ಲೂ ಹೋಟೆಲ್, ಅರಮನೆ ಹಾಗೂ ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ರಾಷ್ಟ್ರಪತಿ ಮುರ್ಮು ಅವರು ಇಂದು ಮಧ್ಯಾಹ್ನ 3.10ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಸ್ವಾಗತಿಸಲಿದ್ದಾರೆ. ಬಳಿಕ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ನಾಳೆ ಬೆಳಿಗ್ಗೆ ಮೈಸೂರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥರ ಜೊತೆ ಮಾತುಕತೆ ನಡೆಸಲಿದ್ದಾರೆ.





