ಪೂರ್ಣಚಂದ್ರ ತೇಜಸ್ವಿ ಅವರ ‘ಜುಗಾರಿ ಕ್ರಾಸ್’ ಕಾದಂಬರಿಯನ್ನು ಕನ್ನಡಿಗರು ಓದದೆ ಇರಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯ ಲೋಕದ ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ ತೇಜಸ್ವಿ.
ಈ ಹಿಂದೆ ಆ ಕಾದಂಬರಿಯನ್ನು ಎರಡು ಬಾರಿ ಚಿತ್ರ ಮಾಡುವ ಪ್ರಯತ್ನಗಳಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಈ ಕಾದಂಬರಿಯನ್ನು ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ ಕೈಗೆತ್ತಿಕೊಮಡಿದ್ದು, ಚಿತ್ರ ಮಾಡುವುದಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷ ತೇಜಸ್ವಿ ಅವರ ಹುಟ್ಟುಹಬ್ಬದ (ಸೆಪ್ಟೆಂಬರ್ 08) ಸಂದರ್ಭದಲ್ಲಿ ಈ ಚಿತ್ರವನ್ನು ಘೋಷಿಸುವುದರ ಜೊತೆಗೆ ಮೊದಲ ಪೋಸ್ಟರ್ ಸಹ ಬಿಡುಗಡೆ ಮಾಡಿದ್ದಾರೆ.
ಇದನ್ನು ಓದಿ: ಸಾರ್ವಜನಿಕ ಜಾಗದಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್
ಈ ಹಿಂದಿನ ಎರಡು ಪ್ರಯತ್ನಗಳಲ್ಲಿ ಇಬ್ಬರು ಜನಪ್ರಿಯ ನಟರ ಹೆಸರು ಕೇಳಿಬಂದಿತ್ತು. ಆದರೆ, ಈ ಹೊಸ ‘ಜುಗಾರಿ ಕ್ರಾಸ್’ನ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಕುತೂಹಲ ಮೂಡಿಸಿತ್ತು. ಆ ಕುತೂಹಲಕ್ಕೆ ಕೊನೆಗೂ ಉತ್ತರ ಸಿಕ್ಕಿದ್ದು, ರಾಜ್ ಬಿ. ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮಾಡಲಿದ್ದಾರೆ. ಸಚಿನ್ ಬಸ್ರೂರು ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತ ಈ ಚಿತ್ರಕ್ಕಿರಲಿದೆ. ಮಿಕ್ಕ ಕಲಾವಿದರು ಮತ್ತು ತಂತ್ರಜ್ಞರು ಇನ್ನಷ್ಟೇ ಆಯ್ಕೆಯಾಗಬೇಕಿದೆ.
ಇನ್ನು, ಪ್ರಜ್ವಲ್ ದೇವರಾಜ್ ಅಭಿನಯದಲ್ಲಿ ಗುರುದತ್ ಗಾಣಿಗ, ‘ಕರಾವಳಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಮುಂದಿನ ವರ್ಷ ಚಿತ್ರ ಬಿಡುಗಡೆ ಆಗಲಿದೆ.





