ಬೆಂಗಳೂರು : ಖಾಸಗಿ ಏಜೆನ್ಸಿಗಳ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಹೀಗಾಗಿ, ಹೊರಗುತ್ತಿಗೆ ವ್ಯವಸ್ಥೆ ರದ್ದು ಮಾಡಿ ಒಳಗುತ್ತಿಗೆ ವ್ಯವಸ್ಥೆ ಜಾರಿಗೆ ತರಲು ಗಂಭೀರ ಚಿಂತನೆಯನ್ನು ಸರ್ಕಾರ ನಡೆಸಿದೆ. ಹೊರಗುತ್ತಿಗೆ ನೌಕರರ ಮೇಲಿನ ದೌರ್ಜನ್ಯ ತಡೆ ಮತ್ತು ಸೇವಾ ಭದ್ರತೆ ಒದಗಿಸುವ ಸಂಬಂಧ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ಹೊರಗುತ್ತಿಗೆ ನೌಕರರ ನೇಮಕವನ್ನು ಖಾಸಗಿ ಏಜೆನ್ಸಿಗಳ ಮೂಲಕ ಮಾಡುವುದನ್ನು ತಪ್ಪಿಸಿ ಅನ್ಯಮಾರ್ಗದ ಮೂಲಕ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿಯೊಂದನ್ನು ರಚಿಸಲಾಗಿದೆ.
ಇದನ್ನು ಓದಿ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ
ಈ ಸಂಪುಟ ಉಪಸಮಿತಿ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಲು ಇರುವ ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ಒಳಗುತ್ತಿಗೆ ಆಧಾರದಲ್ಲಿ ನೇರವಾಗಿ ಸರ್ಕಾರ ಅಥವಾ ಸರ್ಕಾರಿ ಸಂಸ್ಥೆಗಳ ಮೂಲಕ ಸೇವೆಗೆ ಭರ್ತಿ ಮಾಡಿಕೊಳ್ಳಲು ಪರಿಶೀಲನೆ ನಡೆಸಿದೆ. ಇದರ ಸಾಧಕ-ಬಾಧಕಗಳ ಪರಿಶೀಲನೆಗಾಗಿ ಕಾರ್ಮಿಕ ಇಲಾಖೆ, ಕಾನೂನು ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿಯು ವರದಿ ನೀಡಿದ ನಂತರ ಅದನ್ನು ಪರಿಶೀಲಿಸಿ ಹೊರಗುತ್ತಿಗೆ ನೌಕರರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸಚಿವ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.
ಒಳ ಗುತ್ತಿಗೆ ಎಂದರೇನು?
ಖಾಸಗಿ ಏಜೆನ್ಸಿ ಅಥವಾ ಇನ್ಯಾವುದಾದರೂ ಸಂಸ್ಥೆ ಮೂಲಕ ನೌಕರರನ್ನು ನೇಮಿಸುವ ವ್ಯವಸ್ಥೆಯನ್ನು ಹೊರಗುತ್ತಿಗೆ ಎಂದು ಕರೆಯಲಾಗುತ್ತದೆ. ಅದರಲ್ಲಿ ನೌಕರರಿಗೆ ವೇತನ ಪಾವತಿ ಸೇರಿ ಸೌಲಭ್ಯ ನೀಡುವ ಹೊಣೆಗಾರಿಗೆ ಸರ್ಕಾರಕ್ಕಿರುವುದಿಲ್ಲ. ಖಾಸಗಿ ಸಂಸ್ಥೆಗೆ ನಿಗದಿ ಮಾಡಿರುವ ಶುಲ್ಕ ಪಾವತಿಸಿದರೆ ನೌಕರರಿಗೆ ನೀಡಬೇಕಾದ ಸೌಲಭ್ಯ ಆ ಸಂಸ್ಥೆಯೇ ನೀಡುತ್ತದೆ. ಅದೇ ಒಳ ಗುತ್ತಿಗೆ ನೌಕರರು, ಸರ್ಕಾರದಿಂದಲೇ ಗುತ್ತಿಗೆ ಆಧಾರದಲ್ಲಿ ನೇಮಕವಾಗಲಿದ್ದಾರೆ. ಅವರಿಗೆ ವೇತನ, ಪಿಎಫ್ ಸೇರಿ ಇನ್ನಿತರ ಸೌಲಭ್ಯವನ್ನು ಆಯಾ ಇಲಾಖೆಗಳು ನೀಡಲಿವೆ. ಆದರೆ, ಅವರು ಸರ್ಕಾರಿ ನೌಕರರಾಗಿರುವುದಿಲ್ಲ.





