ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು.
ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ನವೆಂಬರ್.15ರಂದು ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಳೆಗೆ ಇಳಿದಿತ್ತು. ಅಲ್ಲಿ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಅಲ್ಲಿ ಮರಳಿ ಬರಲು ಸಾಧ್ಯವಾಗಿರಲಿಲ್ಲ.
ಈ ವೇಳೆ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಸಂಜೆವರೆಗೂ ಕಾದರೂ ಆನೆ ಮೇಲಕ್ಕೆ ಬರಲಿಲ್ಲ.
ಸ್ಥಳಕ್ಕೆ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗದ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಪ್ರಾರಂಭದಲ್ಲಿ ಅಧಿಕಾರಿಗಳು ಆನೆಗೆ ಅಹಾರ ನೀಡಿ, ಗನ್ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಕ್ರೇನ್ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಯಿತು.
ಆನೆ ಸತತವಾಗಿ ನೀರಿನಲ್ಲಿದ್ದ ಕಾರಣ ಆನೆಯ ಸೊಂಡಿಲಿನ ತುದಿ ಬಿಳಿ ಬಣ್ಣಕ್ಕೆ ತಿರುಗಿದ್ದು ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆಯಿದೆ.





