ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನವೆಂಬರ್ ಕ್ರಾಂತಿಯ ಬಗ್ಗೆ ಅನವಶ್ಯಕ ಚರ್ಚೆ ನಡೆಯುತ್ತಿದೆ. 5 ವರ್ಷ ಆದ ಮೇಲೆ ಚುನಾವಣೆ ನಡೆಯುತ್ತದೆ. ಆಗಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಹೈಕಮಾಂಡ್ ಈ ಕುರಿತು ಚರ್ಚಿಸಬೇಕು ಎಂದು ಹೇಳಿದರು.
ಇನ್ನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಈ ಬಾರಿ ಮಳೆ ಜಾಸ್ತಿ ಆಗಿರುವ ಪರಿಣಾಮ ಪ್ರವಾಹದಿಂದ ಬೆಳೆಗಳು ನಾಶವಾಗಿವೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.
ಇನ್ನು ಬೆಂಗಳೂರಿನಲ್ಲಿ 7 ಕೋಟಿ ದರೋಡೆಯಾಗಿರುವ ಪ್ರಕರಣ ಸಂಬಂಧ ಮಾತನಾಡಿದ ಅವರು, ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರದಲ್ಲಿ ಸಿಕ್ಕಿದೆ. ದರೋಡೆಕೋರರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.





