Mysore
20
clear sky

Social Media

ಶುಕ್ರವಾರ, 16 ಜನವರಿ 2026
Light
Dark

ದಿಲ್ಲಿ ಚಲೋ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಧ್ವನಿ

ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ

ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ಸಮಾವೇಶ

ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಯಾತ್ರೆಯನ್ನು ಫೆ.7ರಿಂದ 40 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.

‘ಮಾರ್ಚ್ 19ರಂದು ಹೊಸದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ದೇಶದ ಎಲ್ಲಾ ರೈತರ ಬೃಹತ್ ಸಮಾವೇಶ ನಡೆಸಲಾಗುವುದು. ರೈತರ ಸಹಿ ಸಂಗ್ರಹದ ಮನವಿಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹೊಸದಿಲ್ಲಿಯ ಗಡಿಯಲ್ಲಿ ರೈತರು ಚಳವಳಿ ನಡೆಸಿ ಸರ್ಕಾರವನ್ನು ಎಚ್ಚರಿಸಿದ್ದರು. ಆದರೂ ಗಂಭೀರವಾದ ಕ್ರಮವಾಗದ ಕಾರಣದಿಂದ ರಾಷ್ಟ್ರೀಯ ಸಂಚಾಲಕ ಜಗಜಿತ್‌ಸಿಂಗ್ ಡಲ್ಲೇವಾಲ್ 131 ದಿನ ಉಪವಾಸ ಸತ್ಯಾಗ್ರಹ ನಡೆಸಿದ ಪರಿಣಾಮ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನವಾಬ್‌ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಮಸ್ಯೆ ಪರಿಹಾರಕ್ಕೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಸಮಿತಿಯು ರೈತರ ಪರವಾಗಿ ವರದಿ ನೀಡಿದೆ. ಕೇಂದ್ರದ 31 ಮಂದಿಯ ಸಂಸದೀಯ ಸಮಿತಿಯೂ, ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಬೆಂಬಲಿಸಿದೆ. ಆದರೆ, ಈ ಬಗ್ಗೆ ಸರ್ಕಾರ ಚಕಾರವನ್ನೇ ಎತ್ತದಿರುವುದನ್ನು ಖಂಡಿಸಿ ಯಾತ್ರೆಗೆ ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

ಎಂಎಸ್‌ಪಿ ಖಾತರಿ ಕಾನೂನು ಇಲ್ಲದ ಕಾರಣ ವರ್ಷಕ್ಕೆ 15 ಲಕ್ಷ ಕೋಟಿ ನಷ್ಟವನ್ನು ನಮ್ಮ ದೇಶದ ರೈತರು ಅನುಭವಿಸುತ್ತಿದ್ದಾರೆ ಎಂದರು.

ಗೋಷ್ಠಿಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್ ಹಾಜರಿದ್ದರು.

 

Tags:
error: Content is protected !!