ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಿಡುಗಡೆಗೊಳಿಸಿದರು.
ಇತಿಹಾಸ ಪ್ರಸಿದ್ಧ ಮುಡುಕುತೊರೆ ದೇವಸ್ಥಾನಕ್ಕೆ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾಗಿದ್ದು, ವಿಜೃಂಭಣೆಯಿಂದ ಜರುಗುವ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಜಾತ್ರೆಯು ಜನವರಿ 21 ರಿಂದ(ಇಂದಿನಿಂದ) ಪ್ರಾರಂಭವಾಗಿದ್ದು, 28 ರಂದು ಭ್ರಹ್ಮರಥೋತ್ಸವ, 31 ರಂದು ತೆಪ್ಪೋತ್ಸವ ಹಾಗೂ ಫೆಬ್ರವರಿ 4 ರಂದು ಗಿರಿಪ್ರದಕ್ಷಿಣೆ ನಡೆಯಲಿದೆ. ಫೆ.6 ರಂದು ನಡೆಯುವ ಮಹಾಭಿಷೇಕದೊಂದಿಗೆ ಜಾತ್ರೆಯು ಸಂಪನ್ನಗೊಳ್ಳಲಿದೆ.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್, ರವಿಕುಮಾರ್, ಆಪ್ತಸಹಾಯಕರಾದ ಶ್ರೀನಿವಾಸ್, ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಲಯ ಸಮಿತಿ ಅಧ್ಯಕ್ಷರಾದ ನಾಗರಾಜು, ಲೋಕೇಶ್, ಮಾದೇಶ್, ಶಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.





