Mysore
24
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ ಸಭಾಂಗಣದಲ್ಲಿ ಜನ ಸುನ್ವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು‌ ಮಾತನಾಡಿದರು. ಮಹಿಳೆಯರು ಯಾವುದೇ ರೀತಿಯ ತೊಂದರೆ ಉಂಟಾದರು ನಿರ್ಭಯವಾಗಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸುವಂತಾಗಬೇಕು ಎಂದರು.

ಕಟ್ಟಕಡೆಯ ಮಹಿಳೆಗೂ ನ್ಯಾಯ ಒದಗಿಸುವುದು ಆಯೋಗದ ಉದ್ದೇಶವಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇಲಾಖೆ ವತಿಯಿಂದ ನಡೆಸಲಾಗುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಸೌಜನ್ಯದಿಂದ ವರ್ತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ. ಮಹಿಳೆಯರು‌ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಅನುಚಿತ ವರ್ತನೆ‌ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ತಪ್ಪದೇ ದೂರು ಸಲ್ಲಿಸಿ ಎಂದರು.

ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪಾಷ್ (posch) ಸಮಿತಿ ಇದೆ. ಸಮಿತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಇದರ ಅನುಷ್ಠಾನ ಕುರಿತು ಪರಿಶೀಲನೆ ನಡೆಸುವಂತೆ ತಿಳಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ, ಪೊಲೀಸ್ ಇಲಾಖೆಯಿಂದ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಣ್ಣು ಮಕ್ಕಳು ಯಾವುದಾದರೂ ಶೋಷಣೆಗೆ ಒಳಗಾದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಂದರು.

ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ ಎಂಬ ಪೊಲೀಸ್ ಇಲಾಖೆ ವಾಹನವು ಮುಖ್ಯವಾಗಿ ಕಾಲೇಜುಗಳು, ತೊಂದರೆ ಇರುವ ಸ್ಥಳಗಳಲ್ಲಿ ಹೆಚ್ಚು ಗಸ್ತು ಮಾಡಲಾಗುತ್ತದೆ. ಮೈಸೂರು ನಗರದಲ್ಲಿ‌ ಮಾದಕ ವಸ್ತುಗಳ ಸೇವನೆ ಹಾಗೂ ಸಾಗಣಿಕೆಯನ್ನು ತಡೆಗಟ್ಟಲು ವಿಮುಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು, ಎಸಿಪಿ ಗಂಗಧಾರಸ್ವಾಮಿ, ಎ.ಎಸ್.ಪಿ ನಾಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ‌ ಬಸವರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!