Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಅಕಾಲಿಕ ಮಳೆಯಿಂದ ಬೆಳೆನಷ್ಟ: ಪರಿಹಾರ ನೀಡಲು ರೈತ ಸಂಘಟನೆಗಳ ಒತ್ತಾಯ

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರದ ಚಾಮರಾಜೇಶ್ವರಿ ಉದ್ಯಾನವನದ ಹತ್ತಿರ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, ಕಳೆದ 17 ಮತ್ತು 18 ದಿನಾಂಕ ರಂದು ರಾಜ್ಯಾದ್ಯಂತ ಹಾಗೂ ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ಆಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿವೆ. ಚಾಮರಾಜನಗರ ಜಿಲ್ಲೆಯಲ್ಲೇ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ನಷ್ಟವಾಗಿದೆ. ಆದ್ದರಿಂದ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು.

ಸಂಬಂಧಪಟ್ಟ ಜಿಲ್ಲಾಡಳಿತ ಕಂದಾಯ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸರ್ವೆಯ ಮೂಲಕ ವಿಶ್ರುತ ವರದಿಯನ್ನು ತಯಾರಿಸಿ ಬೆಳೆ ನಷ್ಟವಾಗಿರುವ ಪ್ರತಿಯೊಬ್ಬ ರೈತನಿಗೂ ಪರಿಹಾರ ಸಿಗುವಂತೆ ಕ್ರಮ ವಹಿಸಬೇಕು. ಯಾರ್ಯಾರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸದರಿ ಬೆಳೆ ನಷ್ಟ ಹೊಂದಿರುವ ರೈತರ ಕೃಷಿ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು. ಲೋಕಸಭಾ ಸದಸ್ಯರು ಇದು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿಸಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಮೂಲಕ ನಷ್ಟ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!