ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ನಿನ್ನೆ ಬೆಳಿಗ್ಗೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಂಗಳಾ ಎಕ್ಸ್ಪ್ರೆಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಖಾಲಿ ಸಿಲಿಂಡರ್, ಗ್ಯಾಸ್ ಸ್ಟವ್ ಹಾಗೂ ಬಟ್ಟೆ ತುಂಬಿದ್ದ ಪ್ಲಾಸ್ಟಿಕ್ ಚೀಲವೊಂದು ಟ್ರಾಕ್ ಬಳಿ ಪತ್ತೆಯಾಗಿದೆ. ಅನುಮಾನಾಸ್ಪದ ವಸ್ತುಗಳನ್ನು ಕಂಡು ಲೋಕೋಪೈಲಟ್ ರೈಲು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.
ಇದು ಆಕಸ್ಮಿಕವಾಗಿ ಬಿದ್ದಿರುವ ವಸ್ತುಗಳಾ ಅಥವಾ ಉದ್ದೇಶಪೂರ್ವಕವಾಗಿ ಸಿಲಿಂಡರ್ ಇಡಲಾಗಿದೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸುಮಾರು ಅರ್ಧಗಂಟೆಗಳ ಬಳಿಕ ಮತ್ತೆ ರೈಲು ಸಂಚಾರ ಆರಂಭವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





