ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂದು ಅನುಮಾನಗೊಂಡ ಪತಿ ಮಹೇಶ್, ಪತ್ನಿ ಪುಷ್ಪ ಅವರನ್ನು ಕೊಡಲಿಯಿಂದ ಹೊಡೆದು ಕ್ರೂರವಾಗಿ ಹತ್ಯೆ ಮಾಡಿದ್ದಾನೆ.
ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪ ಅವರು ಪ್ರತಿ ದಿನ ಕೆಲಸ ಮುಗಿಸಿ ರಾತ್ರಿ ಮನೆಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಶುರುವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಎಂದಿನಂತೆ ನಿನ್ನೆ ರಾತ್ರಿ ಪುಷ್ಪಾ ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಆಕ್ರೋಶಗೊಂಡ ಮಹೇಶ್ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಪತ್ನಿಯನ್ನು ಕೊಂದ ನಂತರ ಪಶ್ಚಾತ್ತಾಪಕ್ಕೊಳಗಾದ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ನರಸಿಂಹರಾಜ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.





