ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ ಸಾಕ್ಸ್, ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಹೀಗೆ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದ್ದರೂ ಮಕ್ಕಳ ದಾಖಲಾತಿ ಪ್ರಮಾಣ ಕುಸಿಯುತ್ತಿರುವುದು ಆತಂಕದ ಸಂಗತಿ.
ಸರ್ಕಾರಿ ಶಾಲೆಗಳು ಭಾರತದ ಶೈಕ್ಷಣಿಕ ವ್ಯವಸ್ಥೆಯ ಪ್ರಮುಖ ಭಾಗವಾಗಿವೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳ ಪಾತ್ರ ಅಮೂಲ್ಯವಾಗಿದೆ. ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳು ಮೂಲ ಸೌಲಭ್ಯಗಳ ಕೊರತೆ ಅನುಭವಿಸುತ್ತಿವೆ. ಈ ಕಾರಣಗಳಿಂದಲೇ ಸರ್ಕಾರಿ ಶಾಲೆಗಳು, ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಸೆಳೆಯುವಲ್ಲಿ ವಿಫಲವಾಗುತ್ತಿವೆ. ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಸರ್ಕಾರವೇ ನಿವಾರಣೆ ಮಾಡಲಿ ಎಂಬ ಧೋರಣೆ ಸರಿಯಲ್ಲ. ಸರ್ಕಾರಿ ಶಾಲಾ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಸರ್ಕಾರದೊಂದಿಗೆ ಕೈಜೋಡಿಸುವುದು ಅಗತ್ಯವಾಗಿದೆ.
ರಾಜ್ಯದ ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳನ್ನು ಪ್ರತಿಷ್ಠಿತ ವ್ಯಕ್ತಿಗಳು, ಸಂಘ-ಸಂಸ್ಥೆಗಳು ದತ್ತು ಪಡೆದು ಮುನ್ನಡೆಸುವ ಜವಾಬ್ದಾರಿ ತೆಗೆದುಕೊಂಡಾಗ ಸರ್ಕಾರಿ ಶಾಲೆಗಳು ಸಬಲೀಕರಣಗೊಂಡು ದಾಖಲಾತಿ ಹಾಗೂ ಹಾಜರಾತಿ ಇನ್ನಷ್ಟು ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಪ್ರತಿಯೊಬ್ಬರೂ ಆಲೋಚಿಸಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಅಭಿಯಾನ ಪ್ರಾರಂಭಿಸಲು ಕಾರ್ಯೋನ್ಮುಖವಾಗಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,ಮಂಡ್ಯ ಜಿಲ್ಲೆ


