Mysore
28
scattered clouds

Social Media

ಸೋಮವಾರ, 15 ಜೂನ್ 2026
Light
Dark

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ  

ಮಂಜು ಕೋಟೆ

ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು ಬಂದ್; ೫ ತರಗತಿಗಳಿಂದ ಕೇವಲ ೨೯ ಮಕ್ಕಳು; ಮೂವರು ಶಿಕ್ಷಕರು

ಎಚ್.ಡಿ.ಕೋಟೆ: ಅನೇಕ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಗಣ್ಯರನ್ನು ನೀಡಿದ ತಾಲ್ಲೂಕಿನ ಏಕೈಕ ಶತಮಾನ ಪೂರೈಸಿದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳೇ ಇಲ್ಲದೆ ಈ ಸಾಲಿನಿಂದ ಕೆಲವು ತರಗತಿಗಳನ್ನೇ ಮುಚ್ಚಲಾಗಿದೆ.

ಪಟ್ಟಣದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ೧೮೮೬ರಲ್ಲಿ ಬ್ರಿಟಿಷರ ಕಾಲದಲ್ಲಿ ಅತ್ಯುತ್ತಮವಾದ ಕಟ್ಟಡದೊಂದಿಗೆ ಪ್ರಾರಂಭಿಸಲಾಗಿತ್ತು.

೧ರಿಂದ ೧೧ನೇ ತರಗತಿಯವರೆಗಿನ ಈ ಶಾಲೆಯಲ್ಲಿ ೮೦೦ ವಿದ್ಯಾರ್ಥಿಗಳು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಭಾಗಗಳಾಗಿ ವಿದ್ಯಾಭ್ಯಾಸ ಮಾಡುತ್ತಿದ್ದರು. ನೂರು ವರ್ಷಗಳವರೆಗೂ ಗುಣಮಟ್ಟದ ಶಿಕ್ಷಣದೊಂದಿಗೆ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದು, ಅವರಲ್ಲಿ ಅನೇಕರು ಅತ್ಯುನ್ನತ ಅಧಿಕಾರಿಗಳಾಗಿ, ಚುನಾಯಿತ ಪ್ರತಿನಿಧಿಗಳಾಗಿ, ಸಮಾಜದಲ್ಲಿ ಗಣ್ಯರಾಗಿ ಗುರುತಿಸಿಕೊಂಡಿದ್ದಾರೆ. ನಂತರ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಭಾಗಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಿ, ಇದನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆಯನ್ನಾಗಿ ರೂಪಿಸಲಾಯಿತು.

ಕಳೆದ ಏಳೆಂಟು ವರ್ಷಗಳವರೆಗೂ ಶಾಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡ ಮಕ್ಕಳೂ ಸೇರಿದಂತೆ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ಆರ್ಭಟ ಮತ್ತು ಪಟ್ಟಣದ ವಿವಿಧೆಡೆ ಸರ್ಕಾರಿ ಶಾಲೆಗಳು ಪ್ರಾರಂಭವಾಗಿದ್ದರಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಏಳನೇ ತರಗತಿವರೆಗೆ ಕೇವಲ ೨೯ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ೧ ಮತ್ತು ೨ನೇ ತರಗತಿಗಳಲ್ಲಿ ವಿದ್ಯಾರ್ಥಿಗಳೇ ಇಲ್ಲದೆ ಆ ತರಗತಿಗಳನ್ನು ಮುಚ್ಚಲಾಗಿದೆ. ೩ನೇ ತರಗತಿಯಲ್ಲಿ ೩ ವಿದ್ಯಾರ್ಥಿಗಳು, ೪ನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ, ೫ನೇ ತರಗತಿಯಲ್ಲಿ ನಾಲ್ವರು, ೬ನೇ ತರಗತಿಯಲ್ಲಿ ೮ಮಂದಿ, ೭ನೇ ತರಗತಿಯಲ್ಲಿ ೧೩ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಮೂವರು ಶಿಕ್ಷಕರುಗಳಿದ್ದಾರೆ.

ಪಟ್ಟಣದ ಕೇಂದ್ರ ಸ್ಥಾನದಲ್ಲಿ ಅತ್ಯುತ್ತಮ ಕಟ್ಟಡವನ್ನು ಹೊಂದಿರುವ, ಶತಮಾನೋತ್ಸವದ ಶಾಲೆ ಎಂಬ ಹೆಗ್ಗಳಿಕೆ ಪಡೆದಿರುವ ಈ ಶಾಲೆಯಲ್ಲಿ ಮುಂದಿನ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಕಡಿಮೆ ಆದಲ್ಲಿ ಇನ್ನಷ್ಟು ತರಗತಿಗಳನ್ನು ಸ್ಥಗಿತಗೊಳಿಸಿ ಶಾಲೆಯನ್ನೇ ಮುಚ್ಚುವ ಪರಿಸ್ಥಿತಿ ಎದುರಾಗುವ ಆತಂಕವಿದೆ. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಜನಸಾಮಾನ್ಯರು ಆಸಕ್ತಿ ತೋರಿಸಿದಲ್ಲಿ ಮಾತ್ರ ಈ ಶತಮಾನೋತ್ಸವದ ಶಾಲೆಯನ್ನು ಉಳಿಸಿಕೊಳ್ಳಲು ಸಾಧ್ಯ.

” ಶಾಲಾ ದಾಖಲಾತಿ ಆಂದೋಲನ ನಡೆಸಿ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸೇರಿಸುವ ಕೆಲಸ ಮಾಡಲಾಗುವುದು. ಪಟ್ಟಣದಲ್ಲಿ ಅನೇಕ ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ತೆರೆದಿರುವುದರಿಂದ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ.”

-ರಾಜು ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ

 

 

Tags:
error: Content is protected !!