ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು ಮತ್ತು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಚಿತ್ರನಟ ಪ್ರಕಾಶ್ ರಾಜ್ ತಮ್ಮ ಮೇಲಿನ ಆರೋಪಗಳನ್ನು ಸಾರಾ ಸಗಾಟಾಗಿ ತಳ್ಳಿ ಹಾಕಿದ್ದಾರೆ.
ತಮ್ಮನ್ನು ಕೆಲವರು ತಪ್ಪಾಗಿ ಉಲ್ಲೇಖಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ನಲ್ಲಿ ಯಾವುದೇ ಮಾಧ್ಯಮ ಸಂಸ್ಥೆಗಳನ್ನು ನೇರವಾಗಿ ಮಾರಿಕೊಂಡ ಮಾಧ್ಯಮಗಳು ಎಂದು ಹೇಳಿಲ್ಲ. ಆದರೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೆಲವು ವಿಷಯಗಳನ್ನು ತಿರುಚಲಾಗುತ್ತಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಬುಧವಾರ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಕಾಶ್ ರಾಜ್ ಧರ್ಮಸ್ಥಳ ಪ್ರಕರಣದಲ್ಲಿ ನನ್ನ ಹೆಸರನ್ನು ಯಾವ ಕಾರಣಕ್ಕಾಗಿ ತೆಗೆದು ಹಾಕುತ್ತಿದ್ದಾರೋ ಗೊತ್ತಿಲ್ಲ. ನಿಜ ಹೇಳಬೇಕೆಂದರೆ ನಾನು ಈವರೆಗೂ ಧರ್ಮಸ್ಥಳಕ್ಕೆ ಹೋಗಿಲ್ಲ. ಆದರೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಬಗ್ಗೆ ಅಪಾರವಾದ ಗೌರವವಿದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವು ಸ್ಪಷ್ಟಪಡಿಸಿರುವ ಅವರು, ತಾವು ಯಾವ ಧರ್ಮದ ವಿರುದ್ಧವೂ ಅಲ್ಲ, ಬದಲಾಗಿ ಅನ್ಯಾಯದ ವಿರುದ್ಧ ಮಾತ್ರ ಧ್ವನಿ ಎತ್ತುತ್ತೇನೆ. ಸೌಜನ್ಯ ಕೊಲೆ ಪ್ರಕರಣ ಸೇರಿದಂತೆ ಧರ್ಮಸ್ಥಳದ ಸುತ್ತ ನಡೆದಿರುವ ಅಸಹಜ ಸಾವುಗಳ ಬಗ್ಗೆ ನ್ಯಾಯಾಂಗ ಹಾಗೂ ತನಿಖಾ ಸಂಸ್ಥೆಗಳು ಸಮಗ್ರವಾಗಿ ಪರಿಶೀಲಿಸಬೇಕು ಎಂಬುದು ನನ್ನ ಉದ್ದೇಶ ಎಂದಿದ್ದಾರೆ.




