Mysore
23
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ನಿವಾಸಿಗಳು ಹಳ್ಳದ ನೀರನ್ನು ಕುಡಿಯುವ ಪರಿಸ್ಥಿತಿ ಬಂದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದಲ್ಲಿ ಎಪ್ಪತ್ತಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಹಲವಾರು ವರ್ಷಗಳಿಂದ ವಾಸ ಮಾಡುತ್ತಿವೆ. ಆದರೆ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದು, ಇನ್ನಾದರೂ ಅಗತ್ಯ ಕ್ರಮ ವಹಿಸಬೇಕಿದೆ.

ನಕ್ಕುಂದಿ ಗ್ರಾಮದಲ್ಲಿ ೧೦ ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಆಗದೆ ಅಲ್ಲಿನ ನಿವಾಸಿಗಳು ಹನಿ ಹನಿ ನೀರಿಗೂ ತೊಂದರೆ ಅನುಭವಿಸುವಂತಾಗಿದೆ. ನೀರಿಲ್ಲದೆ ಪ್ರತಿನಿತ್ಯದ ಕೆಲಸ ಕಾರ್ಯಗಳು, ಶೌಚಾಲಯ, ಸ್ನಾನ ಮಾಡಲು ತೊಂದರೆಯಾಗಿದೆ ಎಂದು ಅಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ನಕ್ಕುಂದಿ ಗ್ರಾಮದಲ್ಲಿರುವ ಕೊಳವೆ ಬಾವಿಯ ಮೋಟಾರ್ ಕೆಟ್ಟು ಹತ್ತು ದಿನಗಳೇ ಕಳೆದಿವೆ. ಇದುವರೆಗೂ ಮೋಟಾರ್ ದುರಸ್ತಿ ಮಾಡಿಸಿ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ. ಶೀಘ್ರದಲ್ಲಿ ಮೋಟಾರ್ ದುರಸ್ತಿ ಮಾಡಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆದಿವಾಸಿ ಸಮುದಾಯದ ಮುಖಂಡ ಗಿರೀಶ್ ಒತ್ತಾಯಿಸಿದ್ದಾರೆ.

ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಒಂದು ಗ್ರಾಮದ ಕೊಳವೆಬಾವಿಯಲ್ಲಿನ ನೀರು ಬಳಕೆಗೆ ಯೋಗ್ಯವಿಲ್ಲ ಎಂದು ಅಧಿಕಾರಿಗಳೇ ದೃಢಪಡಿಸಿದ್ದಾರೆ. ನಕ್ಕುಂದಿ ಗ್ರಾಮದಲ್ಲಿನ ನಿವಾಸಿಗಳು ನೀರಿಲ್ಲದೆ ಹಳ್ಳದಲ್ಲಿ ಚಿಲುಮೆ ನಿರ್ಮಾಣ ಮಾಡಿ (ಗುಂಡಿ ತೋಡಿ) ಸಂಗ್ರಹವಾಗುವ ನೀರನ್ನು ಬಳಕೆ ಮಾಡುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ: ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಗ್ರಾಮ ಪಂಚಾಯಿತಿಯವರಿಗೆ ಈಗಾಗಲೇ ತಿಳಿಸಲಾಗಿದೆ. ಆದರೂ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿಲ್ಲ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಟ್ಯಾಂಕರ್ ಮೂಲಕವಾದರೂ ಕುಡಿಯುವ ನೀರು ಪೂರೈಕೆ ಮಾಡಲು ಸೂಚನೆ ನೀಡಿದರೆ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದು ಬಡಾವಣೆಯ ನಿವಾಸಿಗಳು ಮನವಿ ಮಾಡಿದ್ದಾರೆ.

” ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿಲ್ಲ. ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚನೆ ನೀಡಲಾಗುವುದು.”

-ಉಮೇಶ್, ಇಒ, ತಾಪಂ, ಹನೂರು

” ಒಂದು ವಾರದಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಒಂದು ಕೈಪಂಪ್ ಕೂಡ ಇಲ್ಲದ ಕಾರಣ ನೀರಿಗಾಗಿ ಹಳ್ಳದ ನೀರನ್ನು ಬಳಸುತ್ತಿದ್ದೇವೆ. ಅಧಿಕಾರಿಗಳು ಇತ್ತ ಗಮನ ಹರಿಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು.”

-ಗಿರೀಶ್, ಜಿಲ್ಲಾ ಬುಡಕಟ್ಟು ಸಮುದಾಯದ ಯುವ ಚಿಂತಕರು

 

 

Tags:
error: Content is protected !!