ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು ೫೦ ಮೀಟರ್ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ.
ಮೃತ ಆನೆಯು ಸುಮಾರು ೨೫ ವರ್ಷ ವಯಸ್ಸಿನ ಗಂಡಾನೆಯಾಗಿದ್ದು, ಮೇಲ್ನೋಟಕ್ಕೆ ಇತರೆ ಆನೆಗಳೊಂದಿಗಿನ ಕಾದಾಟದಿಂದ ಗಾಯಗೊಂಡು ಸಾವಿಗೀಡಾಗಿರಬಹುದು ಎಂದು ಹೇಳಲಾಗಿದೆ. ಘಟನೆಯ ಸಂಬಂಧ ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಿಆರ್ಟಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪಶುವೈದ್ಯಾಧಿಕಾರಿ ಸಮ್ಮುಖದಲ್ಲಿ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಹೆಚ್ಚಿನ ಪರಿಶೀಲನೆಗಾಗಿ ಮೃತ ಆನೆಯ ಅಂಗಾಂಗ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ಧಾರೆ.




