ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ ವಿವಿಧ ಕಡೆಗಳಲ್ಲಿ ಸಂಭವಿಸಿದ ಅವಘಡಗಳು ಮತ್ತು ಕಟ್ಟಡ ಕುಸಿತದಿಂದಾಗಿ ಈವರೆಗೆ ಒಟ್ಟು 13 ಮಂದಿ ಸಾವನ್ನಪ್ಪಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮುಂಬೈನಲ್ಲಿ ದಾಖಲಾದ ಮಳೆಯ ಪ್ರಮಾಣವು ಕಳೆದ 50 ವರ್ಷಗಳಲ್ಲೇ ಜುಲೈ ತಿಂಗಳ ಒಂದೇ ದಿನದಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮಂಡಳಿ ಸೂಚಿಸಿದೆ.
ನಿರಂತರ ಮಳೆ ಮತ್ತು ದಟ್ಟವಾದ ಮೋಡಗಳಿಂದಾಗಿ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿದ್ದು, ಕೆಲವು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ರಸ್ತೆಗಳಲ್ಲಿ ಮಳೆನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರ ದಟ್ಟಣೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ನಾಗರಿಕರು ಪರದಾಡುವಂತಾಗಿದೆ. ಸಾರ್ವಜನಿಕರು ಅಗತ್ಯ ಕೆಲಸಗಳಿದ್ದರಷ್ಟೇ ಮನೆಯಿಂದ ಹೊರಬರಬೇಕೆಂದು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಮುಂಬೈ ಮಹಾನಗರ ಪಾಲಿಕೆ ಹಾಗೂ ವಿಪತ್ತು ನಿರ್ವಹಣಾ ಪಡೆ ಮನವಿ ಮಾಡಿವೆ.





