Mysore
28
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ​

ಕೆ.ಆರ್.ಎಸ್ ಗ್ರಾಮದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಅತ್ಯಂತ ಆಘಾತಕಾರಿ ವಿಷಯವೆಂದರೆ ಸ್ಥಳೀಯ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಈ ಕೃತ್ಯ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಬಂಡೀಹೊಳೆ ಗ್ರಾಮದ ನಿವಾಸಿ ರಾಕೇಶ್ (28) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಬಸ್ ನಿಲ್ದಾಣದ ಬಳಿ ಬಂದಿದ್ದ ರಾಕೇಶ್‌ನನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಆತನ ತಲೆಯ ಮೇಲೆ ಭಾರೀ ಗಾತ್ರದ ಕಲ್ಲು ಎತ್ತಿ ಹಾಕಿ ಕ್ರೂರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಸ್ಥಳದಲ್ಲೇ ಮೃತ ರಾಕೇಶ್‌ಗೆ ಸೇರಿದ ಬೈಕ್ ಪತ್ತೆಯಾಗಿದೆ. ​ವಿಷಯ ತಿಳಿಯುತ್ತಿದ್ದಂತೆ ಕೆ.ಆರ್.ಎಸ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಯಾದ ಯುವಕನ ಹಿನ್ನೆಲೆ ಹಾಗೂ ಕೊಲೆಗೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ​ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಈ ಭೀಕರ ಕೊಲೆ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಹಾಗೂ ಭಯದ ವಾತಾವರಣ ಮೂಡಿಸಿದೆ. ಸದ್ಯ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Tags:
error: Content is protected !!