ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು ಏಕಾಏಕಿ ದಾಳಿ ನಡೆಸಿ ಹಲವರನ್ನು ಕಚ್ಚಿ ಗಾಯಗೊಳಿಸಿದೆ.
ಶುಕ್ರವಾರ ರಾತ್ರಿ ಇಬ್ಬರಿಗೆ ಕಚ್ಚಿದ್ದ ನಾಯಿ, ಬೆಳಿಗ್ಗೆಯೂ ರಸ್ತೆ ಮೂಲಕ ಸಂಚರಿಸುತ್ತಿದ್ದ ಮೂವರ ಮೇಲೆ ದಾಳಿ ನಡೆಸಿ ಕೈ ಹಾಗೂ ಕಾಲಿಗೆ ಗಾಯಪಡಿಸಿದೆ. ಗಾಯಾಳುಗಳನ್ನು ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಹುಚ್ಚು ನಾಯಿಯನ್ನು ತಕ್ಷಣ ಸೆರೆಹಿಡಿದು ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.




