Mysore
28
overcast clouds

Social Media

ಮಂಗಳವಾರ, 14 ಜುಲೈ 2026
Light
Dark

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಿಕ್ಕೇರಿ ಹೋಬಳಿಯ ಗೊಲ್ಲರಕೊಪ್ಪಲು ಗ್ರಾಮದ ದಿನೇಶ್ ಅವರ ಜಮೀನಿನ ಬಳಿ ತಾಲ್ಲೂಕು ವಲಯ ಅರಣ್ಯ ಇಲಾಖೆ ಸುಮಾರು ಒಂದು ವಾರದ ಹಿಂದೆ ಚಿರತೆ ಸೆರೆಗೆ ಬೋನು ಅಳವಡಿಸಿತ್ತು. ಭಾನುವಾರ ತಡರಾತ್ರಿ ಆಹಾರ ಅರಸಿ ಬಂದ ಸುಮಾರು ಐದು ವರ್ಷ ಪ್ರಾಯದ ಗಂಡು ಚಿರತೆ, ಬೋನಿನಲ್ಲಿ ಕಟ್ಟಿದ್ದ ನಾಯಿಯನ್ನು ಹಿಡಿಯಲು ಯತ್ನಿಸಿದ ವೇಳೆ ಬೋನಿನೊಳಗೆ ಸೆರೆಯಾಗಿದೆ.

ಕಳೆದ ಹಲವು ವಾರಗಳಿಂದ ಈ ಚಿರತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾನುವಾರುಗಳ ಕೊಟ್ಟಿಗೆಗಳಿಗೆ ನುಗ್ಗಿ ಸಾಕಷ್ಟು ಜಾನುವಾರುಗಳನ್ನು ಬೇಟೆಯಾಡಿತ್ತು. ಇದರಿಂದ ರೈತರು ರಾತ್ರಿ ವೇಳೆಯಲ್ಲಿ ಜಮೀನುಗಳಿಗೆ ತೆರಳಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಹಾಗೂ ರೈತರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದರಂತೆ ಅಧಿಕಾರಿಗಳು ಬೋನು ಅಳವಡಿಸಿ ಚಿರತೆಯ ಚಲನವಲನವನ್ನು ನಿರಂತರವಾಗಿ ಗಮನಿಸುತ್ತಿದ್ದರು.

ಚಿರತೆ ಬೋನಿಗೆ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಚಿರತೆಯನ್ನು ವೀಕ್ಷಿಸಿದರು.

ಪಶುವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಚಿರತೆಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿ ದ್ದಾರೆ. ಮೇಲಽಕಾರಿಗಳ ಆದೇಶದಂತೆ ಚಿರತೆಯನ್ನು ಬಂಡೀಪುರ ಅಥವಾ ನಾಗರಹೊಳೆ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ಅನಿತಾ, ಉಪ ವಲಯ ಅರಣ್ಯಾಧಿಕಾರಿ ಚೇತನ್, ಅರಣ್ಯ ರಕ್ಷಕಿ ಅಭಿ, ಸಿಬ್ಬಂದಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಚಿರತೆ ಕಾರ್ಯಪಡೆ ಸಿಬ್ಬಂದಿ ಭಾಗವಹಿಸಿದ್ದರು.

Tags:
error: Content is protected !!