Mysore
24
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!  

ಮಹೇಶ್ ಕರೋಟಿ

ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ

ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ ನದಿಯ ದಡದಲ್ಲೇ ಇದ್ದರೂ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸಿಗದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಗ್ರಾಮದ ಪಕ್ಕದಲ್ಲೇ ವರ್ಷಪೂರ್ತಿ ಹೇಮಾವತಿ ನದಿ ಹರಿಯುತ್ತಿದ್ದರೂ, ಒಂದು ಬಿಂದಿಗೆ ಕುಡಿಯುವ ನೀರಿಗಾಗಿ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ ದೂರದ ಪ್ರದೇಶಗಳಿಂದ ಕುಡಿಯುವ ನೀರನ್ನು ಹೊತ್ತು ತರುವ ಅನಿವಾರ್ಯತೆ ಎದುರಾಗಿದ್ದು, ಗ್ರಾಮಸ್ಥರ ದೈನಂದಿನ ಬದುಕು ಸಂಕಷ್ಟಕ್ಕೆ ಸಿಲುಕಿದೆ.

ಹಲವು ಬಾರಿ ಮಂದಗೆರೆ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ. ನದಿಯ ದಡದಲ್ಲೇ ವಾಸಿಸುತ್ತಿದ್ದರೂ ಕುಡಿಯುವ ನೀರಿಗಾಗಿ ಅಲೆದಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ನಿಂಗಮ್ಮ, ಚಂದ್ರಮ್ಮ, ಜಯಮ್ಮ, ಭಾಗ್ಯಮ್ಮ, ತಾಯಮ್ಮ, ರಂಗಮ್ಮ, ಗಿರಿಜಾ ಸೇರಿದಂತೆ ಅನೇಕ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕೂಡಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಯಾಗದಿದ್ದರೆ ಗ್ರಾಮಸ್ಥರೊಂದಿಗೆ ಸೇರಿ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

” ಚಿಕ್ಕಮಂದಗೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದಿರುವ ಕುರಿತು ನನ್ನ ಗಮನಕ್ಕೂ ಬಂದಿದೆ. ನಾನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದೇನೆ. ಸದ್ಯದಲ್ಲೇ ಈ ಬಗ್ಗೆ ಕ್ರಮ ವಹಿಸಲಾಗುವುದು.”

ಮಲ್ಲೇಶ್, ಮಂದಗೆರೆ ಗ್ರಾಪಂ ಪಿಡಿಒ

” ಹೇಮಾವತಿ ನದಿ ನಮ್ಮ ಗ್ರಾಮದ ಪಕ್ಕದಲ್ಲೇ ಹರಿಯುತ್ತಿದೆ. ಆದರೆ, ಕುಡಿಯಲು ಶುದ್ಧ ನೀರಿಗಾಗಿ ನಾವು ಪರದಾಡಬೇಕಾಗಿದೆ. ಮಹಿಳೆಯರು ಮತ್ತು ಮಕ್ಕಳು ಪ್ರತಿದಿನ ದೂರದಿಂದ ನೀರು ತರುವುದು ಅನಿವಾರ್ಯವಾಗಿದೆ. ಚುನಾವಣೆ ವೇಳೆ ಮಾತ್ರ ಭರವಸೆ ನೀಡುವ ಜನಪ್ರತಿನಿಧಿಗಳು ಹಾಗೂ ಅಧೀಕಾರಿಗಳು ಈಗ ನಮ್ಮ ಸಮಸ್ಯೆಯತ್ತ ಗಮನ ಹರಿಸುತ್ತಿಲ್ಲ. ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ.”

ಸಂತೋಷ್,ಚಿಕ್ಕಮಂದಗೆರೆ ಗ್ರಾಮಸ್ಥರು

” ಚಿಕ್ಕಮಂದಗೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ವರ್ಷಗಳಿಂದ ಕಾಡುತ್ತಿದೆ. ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂದಿಸುತ್ತಿಲ್ಲ. ಜನರ ಮೂಲಭೂತ ಹಕ್ಕಾದ ಕುಡಿಯುವ ನೀರನ್ನು ಒದಗಿಸಲು ವಿಫಲವಾಗಿರುವುದು ವಿಷಾದನೀಯ. ಸರ್ಕಾರ ಹಾಗೂ ಅಧಿಕಾರಿಗಳು ಕೂಡಲೇ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಗ್ರಾಮಸ್ಥರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ.”

ಭರತ್, ಗ್ರಾಮಸ್ಥರು.

 

 

Tags:
error: Content is protected !!