ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಕೆಲವು ಕಿಡಿಗೇಡಿಗಳು ಇನ್ಸ್ಪೆಕ್ಟರ್ ಆನಂದಮೂರ್ತಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಟಿ ಪ್ರಹಾರ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಹಿನ್ನೆಲೆ: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಮೂವರು ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಮೃತಪಟ್ಟಿದ್ದರು. ಇದನ್ನು ವಿರೋಧಿಸಿ ಕುಟುಂಬಸ್ಥರು ಶನಿವಾರ ಮಧ್ಯಾಹ್ನದಿಂದಲೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು.
ಭಾನುವಾರ ಉದ್ವಿಗ್ನತೆ: ಭಾನುವಾರ ಕೆಲವು ಕಿಡಿಗೇಡಿಗಳು ಪ್ರತಿಭಟನೆಯ ದಿಕ್ಕನ್ನು ಬದಲಾಯಿಸಿ ಪ್ರತಿಭಟನಾಕಾರರನ್ನು ಉಗ್ರ ಪ್ರತಿಭಟನೆ ಮಾಡುವಂತೆ ಕುಮ್ಮಕ್ಕು ನೀಡುತ್ತಿದ್ದರು. ಈ ವೇಳೆ ಕೆಲವು ಕಿಡಿಗೇಡಿಗಳು ಪ್ರತಿಭಟನಾ ಸ್ಥಳದಲ್ಲಿದ್ದ ಇನ್ಸ್ಪೆಕ್ಟರ್ ಆನಂದಮೂರ್ತಿ ಅವರ ಮೇಲೆ ಹಲ್ಲೆ ನಡೆಸಲು ಮುಂದಾದರು.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ಪೊಲೀಸರು ಕಿಡಿಗೇಡಿಗಳಿಗೆ ಲಘು ಲಾಟಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಈ ಸಂಬಂಧ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯು ಕಿಡಿಗೇಡಿಗಳಿಂದ ಉದ್ವಿಗ್ನಗೊಂಡಿದ್ದು, ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.




