ಅಣ್ಣೂರು ಸತೀಶ್
೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ
ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿ ಹೊಂದಿರುವ ಭಾರತೀನಗರ (ಕೆ.ಎಂ.ದೊಡ್ಡಿ)ದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರಿಲ್ಲದಿರುವ ಕಾರಣ ರೋಗಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಮಂಡ್ಯ ಮಿಮ್ಸ್ನಲ್ಲಿ ವೈದ್ಯಕೀಯ ಪದವಿ ಪಡೆದಿರುವ ಸ್ನಾತಕೋತ್ತರ ವಿಭಾಗದ ಮೂವರು ವೈದ್ಯರು ಬೆಳಿಗ್ಗೆ ೧೦ರಿಂದ ಸಂಜೆ ೪ ಗಂಟೆಯವರೆಗೆ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆ. ನಂತರ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳು ಖಾಸಗಿ ಆಸ್ಪತ್ರೆ ಅಥವಾ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ೧೯೭೦ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಆರಂಭವಾದ ಈ ಆಸ್ಪತ್ರೆಯನ್ನು, ೨೦೦೫ರಲ್ಲಿ ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಆರಂಭದಲ್ಲಿ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ಇದ್ದ ಕಾರಣ ಉತ್ತಮ ಚಿಕಿತ್ಸೆ ದೊರೆಯುತ್ತಿತ್ತು. ಪ್ರಸ್ತುತ ಸಮುದಾಯ ಆರೋಗ್ಯ ಕೇಂದ್ರದ ಸೌಲಭ್ಯಗಳನ್ನು ಹಿಂಪಡೆದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿಸಿರುವುದೇ ಇಂದಿನ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
೨೬ ಸಾವಿರ ಜನರಿಗೆ ಒಂದೇ ಆಸ್ಪತ್ರೆ: ಭಾರತೀನಗರ ಈಗ ತಾಲ್ಲೂಕು ಕೇಂದ್ರದ ಮಾದರಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಈ ಆಸ್ಪತ್ರೆಯ ವ್ಯಾಪ್ತಿಯಲ್ಲಿ ೨೬ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹಾಗೂ ಐದು ಉಪ ಆರೋಗ್ಯ ಕೇಂದ್ರಗಳಿವೆ. ಜೊತೆಗೆ ರಾಜ್ಯ ಹೆದ್ದಾರಿಯಲ್ಲಿರುವುದರಿಂದ ಅಪಘಾತ ಪ್ರಕರಣಗಳೂ ಹೆಚ್ಚಾಗಿ ಬರುತ್ತವೆ. ಇಂತಹ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಬದಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟಕ್ಕೆ ಇಳಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂಲಸೌಕರ್ಯಗಳ ಕೊರತೆ; ಆಸ್ಪತ್ರೆ ಯಲ್ಲಿ ತಲೆನೋವು, ಮೈಕೈನೋವು, ಕೆಮ್ಮು,ನೆಗಡಿ, ಜ್ವರ ಮುಂತಾದ ಸಾಮಾನ್ಯಕಾಯಿಲೆಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ತುರ್ತು ಚಿಕಿತ್ಸೆ, ಅಪಘಾತ, ವಿಷ ಸೇವನೆ, ಅಪಘಾತ, ಸುಟ್ಟಗಾಯ ಮೊದಲಾದ ತುರ್ತು ಪ್ರಕರಣಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾ ಆಸ್ಪತ್ರೆಗೆ ರವಾನಿಸುವುದು ಸಾಮಾನ್ಯವಾಗಿದೆ. ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಇದ್ದರೂ ಅದರ ಸೇವೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.
ಭದ್ರತೆ ಮತ್ತು ಸ್ವಚ್ಛತೆ ಸಮಸ್ಯೆ; ರಾತ್ರಿ ವೇಳೆ ಆಸ್ಪತ್ರೆಯಲ್ಲಿ ಗಲಾಟೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಆಸ್ಪತ್ರೆಯ ಸಿಬ್ಬಂದಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಗೆ ಗುತ್ತಿಗೆ ಪಡೆದಿರುವ ಸಂಸ್ಥೆ ಸಮರ್ಪಕವಾಗಿ ಕೆಲಸ ಮಾಡದ ಕಾರಣ ಆಸ್ಪತ್ರೆಯಲ್ಲಿ ಅಶುಚಿತ್ವ ಹೆಚ್ಚಾಗಿದೆ. ಇದರಿಂದ ಸೋಂಕು ಹರಡುವ ಆತಂಕವೂ ಎದುರಾಗಿದೆ.
ಸಾರ್ವಜನಿಕರ ಎಚ್ಚರಿಕೆ: ಆಸ್ಪತ್ರೆಯನ್ನು ಹಿಂದಿನಂತೆ ಸಮುದಾಯ ಆರೋಗ್ಯ ಕೇಂದ್ರ ವಾಗಿಯೇ ಮುಂದುವರಿಸಿ, ಖಾಯಂ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿಯನ್ನು ನೇಮಿಸಿ, ಮೂಲಸೌಕರ್ಯಗಳನ್ನು ಕಲ್ಪಿಸ ಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
” ಭಾರತೀನಗರದ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಕುರಿತು ಸಾರ್ವಜನಿಕರು ಹಲವು ತಿಂಗಳುಗಳಿಂದ ಒತ್ತಾಯಿಸುತ್ತಿದ್ದರು. ಅದರಂತೆ ಮಂಡ್ಯ ಮಿಮ್ಸ್ನ ಸ್ನಾತಕೋತ್ತರ ವಿಭಾಗದ ಮೂವರು ತಜ್ಞ ವೈದ್ಯರನ್ನು ನಿಯೋಜಿಸಲಾಗಿದ್ದು, ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ನಾನು ಕೂಡ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾಗಿ ಉಸ್ತುವಾರಿ ವಹಿಸಿದ್ದೇನೆ.”
-ಡಾ.ರವಿಶಂಕರ್, ಟಿಎಚ್ಒ, ಮದ್ದೂರು
” ವೈದ್ಯರ ವರ್ಗಾವಣೆ ರಾಜ್ಯ ಆರೋಗ್ಯ ಇಲಾಖೆಯ ವ್ಯಾಪ್ತಿಯ ವಿಷಯ. ಜಿಲ್ಲಾ ಮಟ್ಟದಲ್ಲಿ ಇದನ್ನು ಬದಲಾಯಿಸಲು ಸಾಧ್ಯವಿಲ್ಲ. ಸಮಸ್ಯೆಯನ್ನು ಗಮನಿಸಿ ಮಿಮ್ಸ್ನ ಸ್ನಾತಕೋತ್ತರ ವಿಭಾಗದ ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ.”
-ಡಾ.ಬೆಟ್ಟಸ್ವಾಮಿ, ಡಿಎಚ್ಒ, ಮಂಡ್ಯ
” ತುರ್ತು ಪರಿಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬಂದರೆ ವೈದ್ಯರೇ ಸಿಗುವುದಿಲ್ಲ. ಇದರ ಬಗ್ಗೆ ಈಗಾಗಲೇ ಪ್ರತಿಭಟನೆಯನ್ನೂ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆಗೆ ಮತ್ತು ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಲು ಸರ್ಕಾರ ಕ್ರಮಕೈಗೊಳ್ಳಬೇಕು”
-ರಾಮಲಿಂಗೇಗೌಡ, ರೈತ
” ಆಸ್ಪತ್ರೆಗೆ ಯಾವುದೇ ರೋಗಿಗಳು ಬಂದರೂ ಚಿಕಿತ್ಸೆ ಸಿಗುತ್ತಿಲ್ಲ. ತುರ್ತು ಚಿಕಿತ್ಸೆ ಸಿಗದೆ ಸಾವು ನೋವುಗಳು ಸಂಭವಿಸುತ್ತಿವೆ. ವೈದ್ಯರ ವರ್ಗಾವಣೆ ಯಿಂದ ಈ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಸರ್ಕಾರ ಕೂಡಲೇ ವೈದ್ಯರ ನೇಮಕಕ್ಕೆ ಕ್ರಮವಹಿಸಬೇಕು.”
-ಹರೀಶ್, ದೊಡ್ಡರಸಿನಕೆರೆ, ಆಟೋ ಚಾಲಕ
” ಮಕ್ಕಳು ಅಥವಾ ವೃದ್ಧರಿಗೆ ರಾತ್ರಿ ವೇಳೆ ಆರೋಗ್ಯ ಸಮಸ್ಯೆಯಾದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಇರುವುದಿಲ್ಲ. ಸಂಬಂಧಪಟ್ಟವರು ಕೂಡಲೇ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಕ ಮಾಡಬೇಕು.”
-ಸೌಭಾಗ್ಯ, ಗುಡಿಗೆರೆ ಗ್ರಾಮಸ್ಥರು




