ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ ಕುಮಾರ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದಲ್ಲಿ ಪ್ರಸ್ತುತ ಖಾಸಗಿ ಕೊಳವೆ ಬಾವಿಯ ಮೂಲಕ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರು, ಖಾಸಗಿ ಕೊಳವೆ ಬಾವಿ ಮಾಲೀಕರಿಗೆ ನಿಯಮಾನುಸಾರ ಅನುದಾನ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಅಗತ್ಯವಿರುವ ಕಡೆ ಪರ್ಯಾಯ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಲಭ್ಯತೆ ಹಾಗೂ ಸರಬರಾಜಿನ ಮೇಲೆ ನಿರಂತರ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಮೋದ್ ಕುಮಾರ್ ಎನ್.ಜಿ., ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಶೀಳನೆರೆ ಗ್ರಾಮ ಪಂಚಾಯಿತಿ ಪಿಡಿಓ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.




