Mysore
25
few clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ ; ಬಿ.ವೈ. ವಿಜಯೇಂದ್ರ

ಲಿಂಗಸುಗೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮತ್ತು ಕಮೀಷನ್ ಹಾವಳಿ ಮಿತಿಮೀರಿದ್ದು, ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳಿಗೆ ಕಮೀಷನ್ ವಿರುದ್ಧ ಪತ್ರ ಬರೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಎರಡನೇ ದಿನದ ಪಾದಯಾತ್ರೆಗೆ ಚಾಲನೆ ನೀಡುವ ಸಂದರ್ಭದಲ್ಲಿ ‌ಮಾದ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ಮಾತನಾಡಿದ ಅವರು, “ಸರ್ಕಾರದಲ್ಲಿ ಕಮೀಷನ್ ಹಾವಳಿ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದಕ್ಕೆ ಆಡಳಿತ ಪಕ್ಷದ ಶಾಸಕ ಅಶೋಕ್ ರೈ ಅವರೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ಸಾಕ್ಷಿ. ಒಬ್ಬ ಸಚಿವರಿಗೆ ಶೇ.7ರಷ್ಟು ಕಮೀಷನ್ ನೀಡಬೇಕು ಎನ್ನುವ ಆರೋಪ ಕೇಳಿಬರುತ್ತಿದೆ ಎಂದರೆ ಈ ಸರ್ಕಾರ ಯಾವ ಮಟ್ಟಕ್ಕೆ ತಲುಪಿದೆ ಎಂಬುದನ್ನು ಜನರೇ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಾತ್ರವಲ್ಲ, ಸ್ವತಃ ಆಡಳಿತ ಪಕ್ಷದ ಶಾಸಕರೇ ಧ್ವನಿ ಎತ್ತುವಂತಾಗಿದೆ. ಜನಸಾಮಾನ್ಯರು “ಈ ಸರ್ಕಾರ ಇದ್ದರೆಷ್ಟು, ಹೋದರೆಷ್ಟು?” ಎಂದು ಪ್ರಶ್ನಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಬರ ಘೋಷಣೆಯಲ್ಲೂ ತಾರತಮ್ಯ
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದರೂ ಸರ್ಕಾರ ಕೇವಲ 101 ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ. ಇನ್ನುಳಿದ ತಾಲ್ಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಲು ಸರ್ಕಾರ ವಿಫಲವಾಗಿದೆ.

“ಇನ್ನುಳಿದ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾದರೆ ರೈತರೂ ಸರ್ಕಾರಕ್ಕೆ ಕಮೀಷನ್ ಕೊಡಬೇಕೇನೋ?” ಎಂದು ವಿಜಯೇಂದ್ರ ಅವರು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.

ರೈತರು ಮಳೆ ಕೊರತೆ, ಬೆಳೆ ನಷ್ಟ ಹಾಗೂ ಸಾಲದ ಸಂಕಷ್ಟದಿಂದ ನರಳುತ್ತಿರುವ ಸಂದರ್ಭದಲ್ಲಿ ಸರ್ಕಾರ ಅವರ ನೆರವಿಗೆ ಧಾವಿಸಬೇಕಿತ್ತು. ಆದರೆ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸದೆ ಸರ್ಕಾರ ರಾಜಕೀಯದಲ್ಲಿ ಮುಳುಗಿದೆ ಎಂದು ಅವರು ಟೀಕಿಸಿದರು.

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರಕ್ಕೆ ಅಂಟಿಕೊಂಡು ಕೂರುವ ಅಗತ್ಯವಿಲ್ಲ ಎಂದು ವಿಜಯೇಂದ್ರ ಅವರು ಸವಾಲು ಹಾಕಿದರು

“ಸರ್ಕಾರ ನಡೆಸಲು ಆಗದಿದ್ದರೆ ವಿಧಾನಸಭೆಯನ್ನು ವಿಸರ್ಜನೆ ಮಾಡಿ. ಜನರ ಬಳಿಗೆ ಹೋಗಿ ಚುನಾವಣೆಯನ್ನು ಎದುರಿಸಿ. ಜನರ ತೀರ್ಪನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಾಗಿದೆಯೇ?” ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕಮೀಷನ್ ದಂಧೆ, ರೈತ ವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ನಡೆಸುತ್ತಿರುವ ಈ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ರಾಜ್ಯದ ಜನರ ಧ್ವನಿಯಾಗಿ ನಡೆಯುತ್ತಿರುವ ಹೋರಾಟವಾಗಿದೆ. ಈ ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಜನರ ಮುಂದೆ ಬಯಲು ಮಾಡಲಾಗುವುದು ಎಂದು ವಿಜಯೇಂದ್ರ ಅವರು ಹೇಳಿದರು.

“ಕಾಂಗ್ರೆಸ್ ಸರ್ಕಾರಕ್ಕೆ ಜನರ ಸಮಸ್ಯೆಗಿಂತ ಕಮೀಷನ್ ಮುಖ್ಯವಾಗಿದೆ. ಇಂತಹ ಸರ್ಕಾರಕ್ಕೆ ಜನರು ತಕ್ಕ ಉತ್ತರ ನೀಡುವ ಕಾಲ ಬಂದಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶವೇ ಈ ಪಾದಯಾತ್ರೆಯ ಶಕ್ತಿಯಾಗಿದೆ” ಎಂದು ಅವರು ಹೇಳಿದರು.

Tags:
error: Content is protected !!