ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ ಮೇಲಿನ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಇದೀಗ ಪಟಾಕಿ ಮಾರಾಟ ಹಾಗೂ ಬಳಕೆಯ ಮೇಲೆ ಕಣ್ಣಿಟ್ಟಿದೆ.
ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಮತ್ತು ಮಾರಾಟ ಮಾಡಬೇಕು ಎಂದು ಪರಿಸರ ಹಾಗೂ ವಲಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಪರಿಸರ ಸಂರಕ್ಷಣೆ ಮತ್ತು ವಾಯು ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸರ್ಕಾರ ಮುಂದಾಗಿದೆ.
ಇದರನ್ವಯ, ಹಸಿರು ಪಟಾಕಿಗಳನ್ನು ಹೊರತುಪಡಿಸಿ, ರಾಸಾಯನಿಕಯುಕ್ತ ಮತ್ತು ಅಧಿಕ ಶಬ್ಧ ಹಾಗೂ ಮಾಲಿನ್ಯ ಉಂಟುಮಾಡುವ ಪಟಾಕಿಗಳನ್ನು ಮಾರಾಟ ಮಾಡುವಂಗಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಇಂತಹ ಪಟಾಕಿಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಸಂಬಂಧಪಟ್ಟ ಅಂಗಡಿ ಮಾಲೀಕರ ವಿರುದ್ಧ ಯಾವುದೇ ಮುನ್ಸೂಚನೆ ಇಲ್ಲದೆ ನೇರವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಈ ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಪಟಾಕಿ ಮಾರಾಟ ಮಾಡುವ ಎಲ್ಲಾ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳು ತಾವು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಮುಚ್ಚಳಿಕೆ ಬರೆದುಕೊಡಬೇಕು ಎಂಬ ಕಡ್ಡಾಯ ನಿಯಮವನ್ನು ಜಾರಿಗೆ ತರಲಾಗಿದೆ.




