ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಮಕ್ಕಳ ಕಲ್ಯಾಣಕ್ಕಾಗಿ ಮೀಸಲಾದ ಯೋಜನೆಗಳಲ್ಲಿಯೂ ಗುಣಮಟ್ಟಕ್ಕೆ ಆದ್ಯತೆ ನೀಡದೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳಪೆ ಗುಣಮಟ್ಟದ ಶೂಗಳನ್ನು ಪೂರೈಸಿರುವ ಗುತ್ತಿಗೆದಾರರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದು, ಗುತ್ತಿಗೆದಾರರನ್ನು ಬ್ಲಾಕ್ಲಿಸ್ಟ್ಗೆ ಸೇರಿಸಿ, ಈ ಸಂಪೂರ್ಣ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ, ಕಾವೇರಿ 6ನೇ ಹಂತದ ಹೆಸರಿನಲ್ಲಿ 7,000 ಕೋಟಿ ರೂಪಾಯಿ ಮೊತ್ತದ ಹೊಸ ಲೂಟಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ ಅವರು, ಕುಡಿಯುವ ನೀರಿನ ಯೋಜನೆಗಳಲ್ಲಿ ಸೋರಿಕೆ ಮತ್ತು ಅಕ್ರಮ ಸಂಪರ್ಕಗಳನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.




