ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಿಸಿಯೂಟ ತಯಾರಿಕೆಗೂ ನೀರಿಲ್ಲದಂತಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಖಾಲಿ ಬಿಂದಿಗೆ, ನೀರಿನ ಬಾಟಲ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ರಾಮಾಪುರ ಹೋಬಳಿ ಮಾರ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯದ ಸರ್ಕಾರಿ ಅನುದಾನಿತ ಸೆಂಟ್ ಆಂಥೋನಿ ಶಾಲೆಯಲ್ಲಿ 1 ರಿಂದ 10ನೇ ತರಗತಿಯವರೆಗೆ 304 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಿಂದ ಸಮರ್ಪಕವಾಗಿ ನಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಪ್ರತಿನಿತ್ಯ 800 ರೂಪಾಯಿ ಕೊಟ್ಟು ಟ್ಯಾಂಕರ್ ನೀರು ಖರೀದಿಸಿ ಬಿಸಿಯೂಟ, ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದೇವೆ. ಇದುವರೆಗೂ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಈಗ ಅನುದಾನವೂ ಇಲ್ಲದೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಲಾ ಆಡಳಿತ ಮಂಡಳಿ ಅಳಲು ತೋಡಿಕೊಂಡಿದೆ.
ಬಿಸಿಯೂಟಕ್ಕೆ ಸರ್ಕಾರದಿಂದ ಆಹಾರ ಪದಾರ್ಥಗಳು ಪೂರೈಕೆಯಾಗುತ್ತಿದ್ದರೂ, ಅಡುಗೆ ಮಾಡಲು ನೀರಿಲ್ಲದೆ ಪರದಾಡುವಂತಾಗಿದೆ. ಈ ಸಂಬಂಧ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದರೂ, ಪಿಡಿಓ ಅವರು ಅನುದಾನ ಇಲ್ಲ ಎಂದು ಹೇಳಿ ಜಾರಿಕೊಳ್ಳುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರಿನ ಸಮಸ್ಯೆ ಬಗೆಹರಿಸಲು ಶಾಸಕರು, ಸಂಸದರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ ಸೆಳೆದರು.
ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪೋಷಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.




