ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ ಕ್ಯೂಸೆಕ್ಗೆ ಇಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್ಸಿ ಶಿಫಾರಸು ಮಾಡಿತ್ತು. 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಸೂಚಿಸಲಾಗಿತ್ತು.
ಈ ಶಿಫಾರಸನ್ನು ಎತ್ತಿಹಿಡಿದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿತ್ತು.
ಆದರೆ, ರಾಜ್ಯದ ಜಲಾಶಯಗಳ ನೀರಿನ ಸ್ಥಿತಿ ಹಾಗೂ ರೈತರ ಹಿತದೃಷ್ಟಿಯಿಂದ, 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ ಕ್ಯೂಸೆಕ್ಗೆ ಇಳಿಸಬೇಕು ಎಂದು ಕರ್ನಾಟಕ ಸರ್ಕಾರ ಇದೀಗ ಮೇಲ್ಮನವಿ ಸಲ್ಲಿಸಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕೂಡಲೇ 3 ಸಾವಿರ ಕ್ಯೂಸೆಕ್ಗೆ ಇಳಿಸುವಂತೆ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
ಕರ್ನಾಟಕದ ಈ ಮೇಲ್ಮನವಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಯಾವ ನಿರ್ಧಾರ ಹೊರಬೀಳಲಿದೆ ಎಂಬುದು ಇದೀಗ ಭಾರೀ ಕುತೂಹಲ ಮೂಡಿಸಿದೆ.




