ಆಂದೋಲನ 50

ಪ್ರವಾಸಿಗರ ಸ್ವರ್ಗ ಗಂಧದ ನಾಡು

ಕೆ.ಬಿ.ರಮೇಶನಾಯಕ

ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು ನೋಡುವುದೇ ಅಪೂರ್ವ ಅನುಭವ. ಇದಲ್ಲದೆ ಕಬಿನಿ, ನುಗು, ತಾರಕ ಮತ್ತು ಹೆಬ್ಬಳ್ಳ ಸೇರಿ ನಾಲ್ಕು ಜಲಾಶಯಗಳನ್ನು ಹೊಂದಿರುವುದು ತಾಲೂಕಿನ ವೈಶಿಷ್ಟ್ಯ.

ಜಿಲ್ಲಾ ಕೇಂದ್ರದಿಂದ ೫೨ ಕಿ.ಮೀ ಮೈಸೂರು ನಗರದಿಂದ ಹೆಗ್ಗಡದೇವನಕೋಟೆಗೆ ೫೨ ಕಿ.ಮೀ, ಬೆಂಗಳೂರಿನಿಂದ ೧೯೨ ಕಿ.ಮೀ. ದೂರವಿದ್ದು ಇಲ್ಲಿಗೆ ಖಾಸಗಿ ಬಸ್ಸುಗಳು ಸೇರಿದಂತೆ ಸರ್ಕಾರಿ ಬಸ್ಸುಗಳ ತನಕ ಉತ್ತಮ ಸಾರಿಗೆ ವ್ಯವಸ್ಥೆ ಇದೆ. ಒಂದೇ ದಿನದಲ್ಲಿ ಹೋಗಿ ಬರುವವರಾದರೆ ಜೊತೆಯಲ್ಲಿ ಊಟ-ತಿಂಡಿ ತೆಗೆದುಕೊಂಡು ಹೋಗುವುದು ಉತ್ತಮ. ಏಕೆಂದರೆ ಈ ಕಾಡಿನೊಳಗೆ ಹಸಿವಾದರೆ ತಿನ್ನಲೂ ಯಾವುದೇ ವಸ್ತುಗಳು ಸಿಗಲ್ಲ. ಸಿಕ್ಕರೂ ತುಂಬಾ ದುಬಾರಿ.

ಏನೇನು ವ್ಯವಸ್ಥೆ

ವಸತಿಗಾಗಿ ಇಲ್ಲಿ ಸರ್ಕಾರಿ ಸ್ವಾಮ್ಯದ ಕಾರಾಪುರ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಸ್ ಸೇರಿದಂತೆ ಕಪಿಲ ವೈಲ್ಡರ್‌ನೆಷ್ ರಿಟ್ರೇಟ್, ಬುಷ್‌ಬೆಟ್ಟ ಹಾಲಿಡೇ ವೈಲ್ಡ್ ಲೈಫ್, ಕಬಿನಿ ರಿವರ್ ಲಾಡ್ಜ್, ವಾರ್‌ವುಡ್ಸ್, ಸೋಗಳ್ಳಿಯ ಕಬಿನಿ ಲೇಕ್ ವ್ಯೆ ರೆಸಾರ್ಟ್ಸ್, ವೀರನಹೊಸಹಳ್ಳಿಯ ದಿ ಕಿಂಗ್ ಸಾಂಕ್ಚುರಿ ಮುಂತಾದ ರೆಸಾರ್ಟ್ಸ್‌ಗಳಿವೆ. ಅರಣ್ಯ ಇಲಾಖೆಯ ಡಾರ್ಮೆಂಟ್ರಿಗಳೂ ಉಂಟು. ಇವುಗಳಲ್ಲಿ ದಿನವೊಂದಕ್ಕೆ ಒಬ್ಬರಿಗೆ ಊಟ-ತಿಂಡಿ, ವಸತಿ, ವನ್ಯಜೀವಿ ವೀಕ್ಷಣೆಯ ಜೀಫ್ ಸಫಾರಿ, ಆನೆ ಸವಾರಿ, ದೋಣಿ ವಿಹಾರ ಎಲ್ಲವೂ ಸೇರಿ ಕನಿಷ್ಠ ಮೂರರಿಂದ ೩೦ ಸಾವಿರ ರೂ. ಗಳಿರುತ್ತದೆ. ದಿನವೊಂದಕ್ಕೆ ೨೦೦೦ ರೂ.ಬಾಡಿಗೆಯುಳ್ಳ ಸುಂಕದಕಟ್ಟೆ ಗೆಸ್ಟ್‌ಹೌಸ್‌ನಂತಹ ಜಂಗಲ್ ರೆಸಾರ್ಟ್ಸ್‌ಗಳು, ಟೆಂಟ್‌ಹೌಸ್‌ಗಳು, ಕಾಟೇಜ್‌ಗಳೂ ದೊರೆಯುವುದುಂಟು.

ಆನೆ,ಹುಲಿಗಳ ತಾಣ

ಏಷ್ಯಾದಲ್ಲಿಯೇ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ಪ್ರದೇಶ ಇದಾಗಿದೆ. ಹುಲಿ, ಚಿರತೆ, ಕರಡಿ, ಕಾಡೆಮ್ಮೆ, ಕಾಡುಹಂದಿ, ಮುಳ್ಳುಹಂದಿ, ಮೊಸಳೆ, ಜಿಂಕೆ, ನವಿಲು, ಸಾರಂಗ ಮುಂತಾದ ವನ್ಯಜೀವಿಗಳಿಂದ ಸಮೃದ್ಧವಾಗಿದೆ. ಪ್ರಕೃತಿಯನ್ನು ಮೈದುಂಬಿಕೊಂಡಂತೆ ಸಾಗುವಾನಿ, ತೇಗ, ಗಂಧ, ಬೀಟೆ, ಹೊನ್ನೆ, ಬಿಲ್ವಾರ ಮುಂತಾದ ಬೆಲೆಬಾಳುವ ಸಸ್ಯ ಸಂಪತ್ತಿದೆ.

ದಸರಾ ಆನೆಗಳ ಬೀಡು

ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಬಹಳಷ್ಟು ಆನೆಗಳಿಗೆ ಆಶ್ರಯ ತಾಣವಾಗಿರುವ ಇಲ್ಲಿಗೆ ಸಮೀಪದಲ್ಲೇ ಇರುವ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಹಾಡಿ ಹಾಗೂ ಬಂಡೀಪುರ, ರಾಜೀವ್‌ಗಾಂಧಿ ರಾಷ್ಟ್ರೀಯ ಉದ್ಯಾನವನಗಳು ತಾಲೂಕಿಗೆ ಹೊಂದಿಕೊಂಡಂತೆ ಇರುವುದರಿಂದ ಪ್ರವಾಸಿಗರು ಹೆಚ್ಚೆಚ್ಚು ಸ್ಥಳಗಳನ್ನು ವೀಕ್ಷಿಸಿ ಸಂಭ್ರಮಿಸಬಹುದಾಗಿದೆ.

ಧಾರ್ಮಿಕ ತಾಣಗಳು

ಪುರಾತನ ಕಾಲದ ಶ್ರೀ ವರದರಾಜಸ್ವಾಮಿ ದೇವಸ್ಥಾನ, ಶ್ರೀರಾಮಾನುಜಾಚಾರ್ಯರು ಕಟ್ಟಿಸಿದರೆಂಬ ಪ್ರತೀತಿಯುಳ್ಳ ಕೆ. ಬೆಳತ್ತೂರಿನ ಶ್ರೀ ಲಕ್ಷ್ಮೀನಾರಾಯಣ ದೇವಾಲಯ, ಕಪಿಲಾ ನದಿದಂಡೆಯ ಮೇಲಿರುವ ರಾಜರಾಜ ಚೋಳ ನಿರ್ಮಿಸಿದನೆಂದು ಹೇಳಲಾಗುವ ಶ್ರೀರಾಮಲಿಂಗೇಶ್ವರ ದೇಗುಲ, ಶ್ರೀ ಮಹದೇಶ್ವರಸ್ವಾಮಿ ನೆಲೆಸಿರುವ ಸುಪ್ರಸಿದ್ಧ ದ್ವೀಪ ಕ್ಷೇತ್ರವಾದ ಭೀಮನಕೊಲ್ಲಿ ಶ್ರೀ ಕ್ಷೇತ್ರ ತಾಲೂಕಿನ ಧಾರ್ಮಿಕ ತಾಣಗಳು.

ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್

ಮೈಸೂರು ಮಹಾರಾಜರು ಶಿಕಾರಿಗೆ ಬಂದಾಗ ಉಳಿದು ಕೊಳ್ಳಲೆಂದೇ ಆ ಕಾಲದಲ್ಲಿ ಕಬಿನಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಕಾರಾಪುರದ ಮಹಾರಾಜ ಬಂಗಲೆ (ಟೈಗರ್ ಟ್ರ್ಯಾಪ್ ರೆಸಾರ್ಟ್) ಈಗ ‘ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಸ್ ಆಗಿದೆ. ಈ ಬಂಗಲೆಯ ಬಳಿ ವನ್ಯ ಮೃಗಗಳನ್ನು ಅತ್ಯಂತ ಸನಿಹದಿಂದ ವೀಕ್ಷಿಸಲು ಕೆರೆ ಸಹಿತ ಕಟ್ಟಿರುವ ವೀಕ್ಷಣಾಗೋಪುರವಿದೆ.
೮೦ರ ದಶಕದಲ್ಲಿ ಅಂದಿನ ಸಿಎಂ ಗುಂಡುರಾವ್ ಅವರ ಆಡಳಿತದಲ್ಲಿ ಕಪಿಲಾ ದಂಡೆಯಲ್ಲಿದ್ದ ಟೈಗರ್ ಟ್ರ್ಯಾಪ್ ರೆಸಾರ್ಟ್ ಬದಲಾಗಿ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಅಸ್ತಿತ್ವಕ್ಕೆ ಬಂತು. ಕಬಿನಿ ಪ್ರವಾಸೋದ್ಯಮದ ಹೊಸ ಅಧ್ಯಾಯ ಆರಂಭವಾಯಿತು. ಪ್ರಸ್ತುತ ಕಬಿನಿ ಸಫಾರಿಯ ವಾರ್ಷಿಕ ಆದಾಯ ಕೋಟ್ಯಂತರ ರೂ.ಗಳನ್ನು ದಾಟಿದೆ. ಪ್ರತಿನಿತ್ಯ ಪ್ರವಾಸಿಗರಿಂದ ತುಂಬಿರುವ ಕಬಿನಿಯ ಆದಾಯ ಕಳೆದ ೨೦ ವರ್ಷಗಳಲ್ಲಿ ಇಳಿಕೆ ಕಂಡ ಉದಾಹರಣೆಗಳಿಲ್ಲ. ಆದರೆ ಇಲ್ಲಿ ಗಳಿಸಿದ ಆದಾಯ ಏನಾಗುತ್ತಿದೆ ಎಂಬ ಚರ್ಚೆ ಇಂದಿಗೂ ನಡೆಯುತ್ತಲೇ ಇದೆ. ಕಬಿನಿಗಾಗಿ ತಮ್ಮ ಬದುಕನ್ನೇ ತೊರೆದು ತ್ಯಾಗ ಮಾಡಿ ಬಂದ ಜನರ ಅಭಿವೃದ್ಧಿಗೆ, ವನ್ಯ ಸಂಪತ್ತಿನ ರಕ್ಷಣೆಗೆ ಇಲ್ಲಿನ ಆದಾಯದ ಒಂದಂಶವಾದರೂ ಬಳಕೆಯಾಗಿದೆಯೇ ಎಂಬ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ.

ನಾಗರಹೊಳೆಯ ಕಬಿನಿ ಸಫಾರಿ ದಿನ ಕಳೆದಂತೆ ಸಾಕಷ್ಟು ಪ್ರಸಿದ್ಧಿಯನ್ನು ಪಡೆಯುತ್ತಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿದೆ. ಪ್ರವಾಸೋದ್ಯಮಕ್ಕೆ ಅನುಕೂಲವಾಗುವ ವ್ಯವಸ್ಥೆಗಳು ಇಲ್ಲಿವೆ. ಹಿನ್ನೀರಿನಲ್ಲಿ ಆನೆಗಳ ಹಿಂಡು ನೋಡುವುದೇ ಸೊಗಸು. ಅರಣ್ಯದೊಳಗೆ ಹುಲಿ, ಚಿರತೆಯ ದರ್ಶನದಿಂದಾಗಿ ಇಂದು ಕಬಿನಿ ಜನಾಕರ್ಷಣೆಯ ಕೇಂದ್ರವಾಗಿದೆ -ನಿಶಾಂತ್ ದೇಸಾಯಿ, ಬೆಂಗಳೂರು, ಪ್ರವಾಸಿಗ

 

andolana

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago