ನವೀನ್ ಡಿಸೋಜ
ಸುಮಾರು ೧೧೦ ಮೀ. ಉದ್ದ, ಅಂದಾಜು ೧೫ ಅಡಿ ಎತ್ತರದ ಸೇತುವೆ, ೩೬.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಹಾರಂಗಿ ಜಲಾಶಯದ ಕೆಳ ಭಾಗದಲ್ಲಿ ಸೇತುವೆ ಮುಳುಗಡೆಯಿಂದ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದರು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ೩೬.೫೦ ಕೋಟಿ ರೂ. ಅಂದಾಜು ವೆಚ್ಚದ ಕಮಾನು ಸೇತುವೆ ನಿರ್ಮಾಣಕ್ಕೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿದ್ದು, ಈ ಭಾಗದ ಗ್ರಾಮಗಳ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.
ಕುಶಾಲನಗರ ಸಮೀಪದ ಹಾರಂಗಿ ಜಲಾಶಯದಿಂದ ನೀರನ್ನು ಹೊರಗೆ ಹರಿಬಿಟ್ಟರೆ ಅಣೆಕಟ್ಟೆ ಎದುರಿನ ಸೇತುವೆ ಮುಳುಗಡೆಗೊಂಡು ಹಲವು ಗ್ರಾಮಗಳು ಸಂಪರ್ಕ ಕಡಿದುಕೊಳ್ಳುತ್ತಿದ್ದವು. ಹಾರಂಗಿ-ಸೋಮವಾರಪೇಟೆ ರಸ್ತೆಯಲ್ಲಿ ಸಂಚಾರ ಕಡಿತವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಭಾಗದ ಜನರ ಓಡಾಟಕ್ಕೆ ಅನನುಕೂಲವಾಗುತ್ತಿತ್ತು. ಈ ಸಂಬಂಧ ಶಾಸಕ ಡಾ.ಮಂಥರ್ಗೌಡ ಅವರ ಸೇತುವೆ ನಿರ್ಮಾಣದ ಪ್ರಸ್ತಾ ವನೆಯನ್ನು ಸರ್ಕಾರ ಅಂಗೀಕರಿಸಿ ಕಮಾನು ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ.
ಹಾರಂಗಿ, ಯಡವನಾಡು, ಹುದುಗೂರು ಮತ್ತಿತರ ಗ್ರಾಮಗಳು ಹಾರಂಗಿ ಜಲಾಶಯದಿಂದ ನೀರು ಬಿಡುಗಡೆಯಾ ದರೆ ಸಂಪರ್ಕ ಕಡಿದುಕೊಂಡು ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲಾಶಯದಿಂದ ೧೪ ಸಾವಿರ ಕ್ಯೂಸೆಕ್ಸ್ ನೀರು ಹೊರಬಿಟ್ಟರೆ ಈ ಸೇತುವೆಯ ಮೇಲೆ ನೀರು ಹರಿಯುತ್ತದೆ. ಅಲ್ಲದೇ ಸೇತುವೆಯ ಎರಡೂ ಕಡೆ ಯಾವುದೇ ರಕ್ಷಣಾ ವ್ಯವಸ್ಥೆ ಇಲ್ಲದ ಕಾರಣ ಸೇತುವೆಯ ಮೇಲೆ ಸ್ವಲ್ಪ ಮಟ್ಟಿಗೆ ನೀರು ಹರಿದರೂ ಸಂಚಾರ ಬಹಳ ಅಪಾಯಕಾರಿ.
ಕೆಲ ವರ್ಷಗಳ ಹಿಂದೆ ನೀರು ಹರಿಯುವ ಸಂದರ್ಭದಲ್ಲಿ ಸೇತುವೆ ದಾಟಲು ಹೋದ ಹಸುವೊಂದು ಕೊಚ್ಚಿಹೋದ ಘಟನೆಯೂ ನಡೆದಿದೆ. ಜೊತೆಗೆ ಪ್ರವಾಸಿಗರು ಸೆಲ್ಛಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಘಟನೆಯೂ ನಡೆದಿದೆ. ಈ ಎಲ್ಲ ಸಮಸ್ಯೆಗಳನ್ನೂ ಮನಗಂಡ ಶಾಸಕ ಡಾ.ಮಂಥರ್ಗೌಡ ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣದ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದ್ದರು.
ಇತ್ತೀಚೆಗೆ ಸೇತುವೆ ಮುಳುಗಡೆಯಾಗಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಡಿಯೋ ಕರೆ ಮಾಡಿದ್ದ ಡಾ.ಮಂಥರ್ಗೌಡ ಪರಿಸ್ಥಿತಿ ಬಗ್ಗೆ ವಿವರಿಸಿದ್ದರು. ಕಿರುಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿಯಿಂದ ನೂತನ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿ ಸೇತುವೆ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು.
ನೂತನ ಸೇತುವೆಗೆ ನೀರಾವರಿ ನಿಗಮದಿಂದ ಯೋಜನೆ ಸಿದ್ಧವಾಗಿದ್ದು, ಅಂದಾಜು ೧೧೦ ಮೀ. ಉದ್ದದ ಈ ಕಮಾನು ಸೇತುವೆ ಈಗಿರುವ ಸೇತುವೆಗಿಂತ ಅಂದಾಜು ೧೫ ಅಡಿ ಎತ್ತರದಲ್ಲಿರಲಿದೆ. ಒಮ್ಮೆಗೆ ೨ ವಾಹನಗಳು ಸಂಚರಿಸುವಷ್ಟು ಸ್ಥಳಾವಕಾಶವಿರಲಿದ್ದು, ಅದರೊಂದಿಗೆ ಪ್ರವಾಸಿಗರಿಗೆ ನಡೆದಾಡಲು ಫುಟ್ ಪಾತ್ ವ್ಯವಸ್ಥೆ ಸಹಿತ ನಿಂತುಕೊಂಡು ಜಲಾಶಯವನ್ನು ವೀಕ್ಷಿಸಲು ಗ್ಯಾಲರಿ ವ್ಯವಸ್ಥೆಯನ್ನೂ ಒಳಗೊಂಡಿರಲಿದೆ.
ಈಗಾಗಲೇ ಸೇತುವೆಯ ನೀಲ ನಕ್ಷೆ ಸಿದ್ಧವಾಗಿದ್ದು, ಸರ್ಕಾರದ ಅನುಮೋದನೆ ಸಿಕ್ಕಿರುವುದರಿಂದ ಸದ್ಯದಲ್ಲಿಯೇ ಮುಂದಿನ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಐ.ಕೆ. ಪುಟ್ಟಸ್ವಾಮಿ ತಿಳಿಸಿದ್ದಾರೆ.
” ಶಾಸಕರ ನಿರಂತರ ಪ್ರಯತ್ನದಿಂದ ಕಮಾನು ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರೆತಿದೆ. ೩೬.೫೦ ಕೋಟಿ ರೂ. ವೆಚ್ಚದಲ್ಲಿ ಅಂದಾಜು ೧೧೦ ಮೀ. ಉದ್ದದ ಕಮಾನು ಸೇತುವೆ ನಿರ್ಮಾಣವಾಗಲಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗುವುದರ ಜತೆಗೆ, ಪ್ರವಾಸಿಗರೂ ನಿಂತು ಜಲಾಶಯ ವೀಕ್ಷಣೆ ಮಾಡಲು ವ್ಯವಸ್ಥೆಯಾಗಲಿದೆ.”
-ಐ.ಕೆ. ಪುಟ್ಟಸ್ವಾಮಿ, ಕಾರ್ಯಪಾಲಕ ಇಂಜಿನಿಯರ್, ಹಾರಂಗಿ ಪುನರ್ವಸತಿ ವಿಭಾಗ
” ಹಾರಂಗಿ ಸೇತುವೆ ಮುಳುಗಡೆ ಸಮಸ್ಯೆ ಕುರಿತಂತೆ ಸರ್ಕಾರದ ಗಮನ ಸೆಳೆಯಲಾಗಿತ್ತು. ಸದ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಿದೆ. ಇದರೊಂದಿಗೆ ಜಲಾಶಯದ ಎಡದಂಡೆ ಕಾಲುವೆಗಳ ವಿತರಣಾ ನಾಲೆಗಳನ್ನು ಅಭಿವೃದ್ಧಿಪಡಿಸಲು ೪೯.೯೦ ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಲಾಗಿದೆ.”
-ಡಾ.ಮಂಥರ್ಗೌಡ, ಮಡಿಕೇರಿ ಶಾಸಕ
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…