Andolana originals

6 ತಿಂಗಳಿಂದ ಎಪಿಎಲ್‌ಗೆ ಸಿಕ್ಕಿಲ್ಲ ಪಡಿತರ: ಸ್ಟಾಕ್‌ ಬಂದಿಲ್ಲ ಎಂಬ ಹೇಳಿಕೆಗೆ ಫಲಾನುಭವಿಗಳ ಬೇಸರ

ಕೆ.ಬಿ.ರಮೇಶನಾಯಕ

ಮೈಸೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಕೊಡಲು ಸಾಧ್ಯವಾಗದೆ 5 ಕೆಜಿ ಬದಲಿಗೆ ಹಣ ಜಮಾ ಮಾಡುತ್ತಿರುವ ರಾಜ್ಯ ಸರ್ಕಾರ, ಅಕ್ಕಿಯನ್ನು ಹೊಂದಿಸಲು ಹೆಣಗಾಡುತ್ತಿರುವ ಹೊತ್ತಲ್ಲೇ ಎಪಿಎಲ್ ಪಡಿತರದಾರರಿಗೆ ಅಕ್ಕಿ ವಿತರಣೆ ಸ್ಥಗಿತವಾಗಿದೆ.

ಮೈಸೂರು ಸೇರಿದಂತೆ ಇಡೀ ರಾಜ್ಯದ ಎಲ್ಲ ಜಿಲ್ಲೆಗಳ ಯಾವ ಎಪಿಎಲ್ ಕಾರ್ಡುದಾರರಿಗೂ ಅಕ್ಕಿ ವಿತರಣೆ ಯಾಗಿಲ್ಲ. ಹೀಗಾಗಿ, ಮುಂದಿನ ದಿನಗಳಲ್ಲಿ ಸಂಪೂರ್ಣ ಸ್ಥಗಿತವಾಗುತ್ತದೆಯೇ ಅಥವಾ ಇಲ್ಲವೇ ಎನ್ನುವುದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೂ ತಿಳಿಯದಂತಾಗಿದೆ.

ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಅಂತ್ಯೋದಯ ಪಡಿತರ ಚೀಟಿದಾರರಿಗೆ ಉಚಿತವಾಗಿ ಯಾವುದೇ ಅಡ್ಡಿಯಿಲ್ಲದೇ ಪಡಿತರ ಸಿಗುತ್ತಿದೆ. ಆದರೆ, ಹಣ ಕೊಟ್ಟು ಪಡಿತರ ಅಕ್ಕಿ ಪಡೆಯುವ ಎಪಿಎಲ್ ಪಡಿತರ ಚೀಟಿದಾರರಿಗೆ ನಾಲೈದು ತಿಂಗಳಿಂದ ಪಡಿತರ ಸಿಗುತ್ತಿಲ್ಲ. ಇದರಿಂದ ನಿತ್ಯ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆಯುತ್ತಿದೆ.

ಜಿಲ್ಲಾವಾರು ಎಪಿಎಲ್ ಕಾರ್ಡುಗಳ ಸಂಖ್ಯೆ:
ಮೈಸೂರು: 1,10,953
ಮಂಡ್ಯ: 4,41,801
ಕೊಡಗು: 37,187
ಚಾಮರಾಜನಗರ: 14,000

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಭರಾಟೆಯಲ್ಲಿ ಎಪಿಎಲ್ ಕಾರ್ಡ್ ದಾರರಿಗೆ ಪಡಿತರ ಅಕ್ಕಿ ವಿತರಣೆ ಮಾಡದೇ ನಿರ್ಲಕ್ಷ್ಯ ವಹಿಸಿದೆ. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್ ದಾರರು ಇದ್ದು, ಜನವರಿಯಲ್ಲಿ 5ರಿಂದ 10 ಕೆಜಿ ಪಡಿತರ ಅಕ್ಕಿ ಪಡೆದಿರುವುದನ್ನು ಬಿಟ್ಟರೆ ಫೆಬ್ರವರಿಯಿಂದ ಇದುವರೆಗೂ 1 ಕೆಜಿ ಅಕ್ಕಿಯೂ ಎಪಿಎಲ್ ಪಡಿತರದಾರರನ್ನು ತಲುಪಿಲ್ಲ.

ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಪ್ರಕಾರ ರಾಜ್ಯದಲ್ಲಿ 29 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್ ಗಳಿದ್ದು, ಅದರಲ್ಲಿ 85 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 1.10 ಲಕ್ಷ ಮಂದಿ ಎಪಿಎಲ್ ಪಡಿತರ ಚೀಟಿದಾರರಿದ್ದು, ಅದರಲ್ಲಿ ಮೈಸೂರು ನಗರದಲ್ಲಿಯೇ 73 ಸಾವಿರ ಮಂದಿ ಇದ್ದಾರೆ. ರಾಜ್ಯ ಸರ್ಕಾರ ಪೂರೈಸುವ ಪಡಿತರ ಪಡೆದುಕೊಳ್ಳಲು ಅರ್ಹರಾಗಿದ್ದರೂ ಇವರಿಗೆ ಅಕ್ಕಿ ಪೂರೈಕೆಯಾಗಿಲ್ಲ. ನ್ಯಾಯ ಬೆಲೆ ಅಂಗಡಿಗಳಲ್ಲಿ ಕೇಳಿದರೆ ಸರ್ಕಾರದಿಂದ ಸರಬರಾಜು ಆಗಿಲ್ಲ ಎಂದು ಸಬೂಬು ಹೇಳುತ್ತಾರೆ ಎಂದು ಎಪಿಎಲ್ ಪಡಿತರ ಚೀಟಿದಾರ ಪ್ರದೀಪ್ ಎಂಬವರು ಅಳಲು ತೋಡಿಕೊಂಡಿದ್ದಾರೆ.

ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ ಇಲಾಖೆಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ಉಚಿತವಾಗಿ ನೀಡಲಾಗುವ ಅಕ್ಕಿಯನ್ನು ಮಾತ್ರ ವಿತರಿಸಲಾಗುತ್ತದೆ. ಆದರೆ, ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುವ ಅಕ್ಕಿ ಪೂರೈಕೆಯ ಸ್ಟಾಕ್ ಬಂದಿಲ್ಲ ಎಂದು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಕಾರ್ಯದರ್ಶಿ ರಮ್ಯ ಹೇಳುತ್ತಾರೆ.

ಕೋಟ್ಸ್‌:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್‌ದಾರರಿಗೆ ನೀಡುವ ಪಡಿತರ ಅಕ್ಕಿ ಮಾತ್ರ ನೀಡಲಾಗುತ್ತಿದ್ದು, ಎಪಿಎಲ್‌ ಕಾರ್ಡ್‌ದಾರರಿಗೆ ನೀಡುವ ಅಕ್ಕಿ ಪೂರೈಕೆ ಮಾಡಲಾಗುತ್ತಿಲ್ಲ. ಇದರಿಂದ ವಿತರಣೆಯಲ್ಲಿ ತೊಡಕಾಗಿದೆ. ಮೈಸೂರು ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಬರುತ್ತಿಲ್ಲ. ಸರ್ಕಾರ ಬಿಡುಗಡೆ ಮಾಡಿದರೆ ಹಂಚಿಕೆ ಮಾಡಲಾಗುವುದು.
-ಕುಮುದಾ, ಜಂಟಿ ನಿರ್ದೆಶಕರು, ಆಹಾರ ಇಲಾಖೆ.

ನಾವು ಎಪಿಎಲ್ ಪಡಿತರ ಚೀಟಿದಾರರಾಗಿದ್ದು ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಹಣ ನೀಡಿ ಅಕ್ಕಿ ಹಾಗೂ ಇತರೆ ಧಾನ್ಯಗಳನ್ನು ತೆಗೆದುಕೊಳ್ಳಬೇಕಿದೆ. ಆದ್ದರಿಂದ ನಾವು ಪಡಿತರ ಧಾನ್ಯಗಳನ್ನು ಪಡೆದುಕೊಳ್ಳುತ್ತಿಲ್ಲ.
-ಸುಲೋಚನಾ, ಹೌಸಿಂಗ್ ಬೋರ್ಡ್ ಕಾಲೋನಿ, ಚಾ.ನಗರ

ನನ್ನ ಕುಟುಂಬ ಎಪಿಎಲ್ ಕಾರ್ಡ್ ಹೊಂದಿದೆ. ಆದರೆ, ಹೆಸರಿಗೆ ಮಾತ್ರ ಒಂದು ಕಾರ್ಡ್ ಇದೆ ಅಷ್ಟೇ. ನಮಗೆ ಕಳೆದ ಎರಡು ವರ್ಷಗಳಿಂದ ಪಡಿತರ ಅಕ್ಕಿ ಬರುತ್ತಿಲ್ಲ. ನ್ಯಾಯ ಬೆಲೆ ಅಂಗಡಿ, ಗ್ರಾಮ ಪಂಚಾಯಿತಿ, ಆಹಾರ ಇಲಾಖೆ ಅಂತ ಅಲೆದಾಡಿ ಸುಸ್ತಾಗಿದೆ.
-ಮಹೇಶ್, ಕರಡಿಗೋಡು, ಕೊಡಗು ಜಿಲ್ಲೆ.

ಕಳೆದ ಎರಡು ವರ್ಷಗಳಿಗಿಂತ ಮೊದಲು 150 ರೂ.ಗಳಿಗೆ 10 ಕೆ.ಜಿ ಅಕ್ಕಿ ಸಿಗುತ್ತಿತ್ತು. ಆದರೆ, ಕಳೆದ 2 ವರ್ಷಗಳಿಂದ ಎಪಿಎಲ್ ಕಾರ್ಡ್ ಇರುವವರಿಗೆ ಅಕ್ಕಿ ಸಿಗುತ್ತಿಲ್ಲ. ಬಡವ ಮತ್ತು ಮಧ್ಯಮ ವರ್ಗದವರನ್ನು ಗಮದಲ್ಲಿಟ್ಟುಕೊಂಡು ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು.
-ಎ.ಎಂ.ಕಾಶಿ, ಕೃಷಿಕ, ಕಾನೂರು ಗ್ರಾಮ, ಕೊಡಗು ಜಿಲ್ಲೆ.

ಕಳೆದ ನಾಲೈದು ತಿಂಗಳಿಂದ ಪಡಿತರ ಕೊಟ್ಟಿಲ್ಲ. ಪ್ರತಿ ಕೆ.ಜಿ. ಅಕ್ಕಿಗೆ 15 ರೂ. ಕೊಟ್ಟರೂ ಅಕ್ಕಿ ನೀಡುತ್ತಿಲ್ಲ. 60 ಸಾವಿರ ಬಾಡಿಗೆ ತೆಗೆದುಕೊಳ್ಳುವವರಿಗೆ ಬಿಪಿಎಲ್ ಕಾರ್ಡ್ ಕೊಟ್ಟು, ಅವರಿಗೆ ಬಿಟ್ಟಿಯಾಗಿ ಅಕ್ಕಿ ಕೊಡುತ್ತಿದ್ದಾರೆ. ಹತ್ತಾರು ಎಕರೆ ಕೃಷಿ ಜಮೀನು ಇದ್ದು, 25 ಲಕ್ಷ ರೂ. ಮೌಲ್ಯದ ಕಾರು ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.
-ನಾಗರಾಜು, ನಿವೃತ್ತ ಚಾಲಕರು, ಕೆಎಸ್‌ಆರ್‌ಟಿಸಿ, ಮಂಡ್ಯ,

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

1 hour ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

1 hour ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

2 hours ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

2 hours ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

2 hours ago