ಆಂದೋಲನ’ ಸಂದರ್ಶನದಲ್ಲಿ ಸಚಿವ ಕೆ.ವೆಂಕಟೇಶ್ ಭರವಸೆ
ನೇರ ನೇಮಕಾತಿ ಅಥವಾ ನಿಯೋಜನೆ ಮೂಲಕ ಭರ್ತಿಗೆ ಸೂಚನೆ
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು
ಹುದ್ದೆಗಳು ಖಾಲಿ ಇದ್ದರೂ ಸಾರ್ವಜನಿಕ ಕೆಲಸಗಳಿಗೆ ಅಡ್ಡಿ ಇಲ್ಲ
ಚಾಮರಾಜನಗರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳು ಖಾಲಿ ಇದ್ದರೂ ಸಾರ್ವಜನಿಕ ಕೆಲಸಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅವಶ್ಯಕತೆಗೆ ಅನುಗುಣವಾಗಿ ನೇರ ನೇಮಕಾತಿ/ ನಿಯೋಜನೆ ಮೂಲಕ ಭರ್ತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಪಶು ಸಂಗೋಪನೆ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕ ಹುದ್ದೆಗಳು ಖಾಲಿ ಇರುವ ಸಂಬಂಧ ‘ಆಂದೋಲನ’ದಲ್ಲಿ ಲೇಖನ ಪ್ರಕಟವಾದ ಹಿನ್ನೆಲೆಯಲ್ಲಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಆಂದೋಲನ:ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುಮಾರು ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದೀರಿ. ಯಶಸ್ವಿಯಾಗಿದ್ದೀರಿ ಅನಿಸುತ್ತಿದೆಯಾ?
ವೆಂಕಟೇಶ್: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವನಾದ ನಂತರ ನಾನು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ್ದೇನೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಮಹತ್ವ ಪೂರ್ಣ ಕಾರ್ಯಕ್ರಮವಾದ ‘ಜನಸ್ಪಂದನ’ವನ್ನು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ನಡೆಸುವುದರ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಕಳೆದೆರಡು ವರ್ಷಗಳಲ್ಲಿ ಜಿಲ್ಲೆಗೆ ಹಲವಾರು ಬಾರಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಿದ್ದಾರೆ. ಮತ್ತು ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಿಸುವುದರ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.
ಆಂದೋಲನ: ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರು ಇದೆ. ಏನು ಹೇಳುವಿರಿ?
ವೆಂಕಟೇಶ್: ನಾನು ಈಗಾಗಲೇ ತಿಳಿಸಿದಂತೆ ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಿಗೆ ಕಾಲಕಾಲಕ್ಕೆ ಖುದ್ದಾಗಿ ಭೇಟಿ ನೀಡಿ, ಶಾಸಕರುಗಳು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳೊಂದಿಗೆ ಅಧಿಕಾರಿಗಳ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ದೀರ್ಘಕಾಲೀನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ನಿರ್ದಿಷ್ಟವಾದ ದೂರಿನ ಬಗ್ಗೆ ಅಂತಹ ಪ್ರಕರಣಗಳನ್ನು ನನ್ನ ಗಮನಕ್ಕೆ ತಂದಲ್ಲಿ ಅವುಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.
ಆಂದೋಲನ: ಜಿಲ್ಲೆಯ ಎಲ್ಲ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು ಶೇ.೫೦ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆಯಲ್ಲ?
ವೆಂಕಟೇಶ್: ಜಿಲ್ಲೆಯ ಬಹುತೇಕ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳು ಖಾಲಿ ಇರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಹುದ್ದೆಗಳ ಖಾಲಿ ಇರುವಿಕೆಯಿಂದ ಸಾರ್ವಜನಿಕರ ಕೆಲಸಕ್ಕಾಗಲೀ ಅಥವಾ ಇನ್ನಿತರ ಅಭಿವೃದ್ಧಿ ಚಟುವಟಿಕೆಗಳಿಗಾಗಲೀ ತೊಡಕು ಉಂಟಾಗಿರುವುದಿಲ್ಲ. ಹೆಚ್ಚುವರಿ ಹೊಣೆಗಾರಿಕೆ ನೀಡುವುದರ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ಸಮಸ್ಯೆ ಇರಲಾರದು.
ಆಂದೋಲನ: ಕೆಲವೆಡೆ ಪೌರಕಾರ್ಮಿಕ ಹುದ್ದೆಗಳೂ ಖಾಲಿ ಇವೆ ಎಂಬ ಆರೋಪಗಳಿವೆ?
ವೆಂಕಟೇಶ್: ಪೌರ ಸಂಸ್ಥೆಗಳಲ್ಲಿ ಸಂಪನ್ಮೂಲ ಕ್ರೋಡೀಕರಣ ಮತ್ತು ಮೂಲ ಸೌಕರ್ಯಗಳನ್ನು ಒದಗಿಸುವುದು ಆಯಾ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ. ಕೆಲವು ಕಡೆ ಪೌರಕಾರ್ಮಿಕರ ಹುದ್ದೆಗಳು ಖಾಲಿ ಇದ್ದು, ಲಭ್ಯವಿರುವ ಸಂಪನ್ಮೂಲದ ಅನುಸಾರ ಅವಶ್ಯಕತೆಗೆ ಅನುಗುಣವಾಗಿ ಸದರಿ ಹುದ್ದೆ ಗಳನ್ನು ನೇಮಕಾತಿ ಮೂಲಕ ಭರ್ತಿ ಮಾಡಲು ಆಯಾ ಪೌರ ಸಂಸ್ಥೆಗಳು ಕ್ರಮ ತೆಗೆದುಕೊಳ್ಳುತ್ತಿವೆ. ಹುದ್ದೆ ಖಾಲಿ ಇವೆ ಎಂಬ ಕಾರಣಕ್ಕೆ ದೈನಂದಿನ ಕೆಲಸ ಕಾರ್ಯಗಳಿಗೆ ಅಡ್ಡಿ ಮಾಡದಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ.
ಆಂದೋಲನ: ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮವಹಿಸುತ್ತೀರಾ?
ವೆಂಕಟೇಶ್: ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ವೃಂದದ ಹುದ್ದೆಗಳು ಖಾಲಿ ಇದ್ದು, ಸದರಿ ಖಾಲಿ ಹುದ್ದೆಗಳನ್ನು ಅವಶ್ಯಕತೆಗೆ ಅನುಗುಣವಾಗಿ ನೇರ ನೇಮಕಾತಿ/ ನಿಯೋಜನೆ ಮೂಲಕ ಭರ್ತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ.
ಆಂದೋಲನ: ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಬಲಾಢ್ಯವಾಗದಿದ್ದರೆ ಎಲ್ಲವನ್ನೂ ಸರ್ಕಾರ ಮಾಡಲು ಸಾಧ್ಯವೇ?
ವೆಂಕಟೇಶ್: ಸ್ಥಳೀಯ ಸಂಸ್ಥೆಗಳು ಸರ್ಕಾರವನ್ನೇ ಅವಲಂಬಿಸದೇ ತನ್ನದೇ ಆದ ಆದಾಯ ಮೂಲಗಳನ್ನು ಹೊಂದಿರಬೇಕಾದ್ದು ಆವಶ್ಯಕ. ಅನಿವಾರ್ಯ ಸಂದರ್ಭಗಳಲ್ಲಿ ಮೂಲ ಸೌಕರ್ಯಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಸಂಪನ್ಮೂಲ ಕೊರತೆ ಉಂಟಾಗುವುದು ಸಹಜ. ಅಂತಹ ಸಂದರ್ಭಗಳಲ್ಲಿ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡಬೇಕಾಗುತ್ತದೆ.
ಆಂದೋಲನ: ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸಗಳಾಗದೆ ಪರದಾಡುತ್ತಿರುವ ಸಾರ್ವಜನಿಕರಿಗೆ ನಿಮ್ಮ ಭರವಸೆ ಏನು?
ವೆಂಕಟೇಶ್: ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಶಾಸಕರುಗಳ ಜೊತೆಗೆ ಅಧಿಕಾರಿಗಳ ಸಭೆಯನ್ನು ಕಾಲ ಕಾಲಕ್ಕೆ ನಡೆಸಲಾ ಗಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವುದರ ಜೊತೆಗೆ ಸಮಸ್ಯೆಗಳನ್ನು ಬಗೆಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಧಿಕಾರಿಗಳು ನಿರ್ದಿಷ್ಟ ಸಮಯದಲ್ಲಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ.
” ಸ್ಥಳೀಯ ಸಂಸ್ಥೆಗಳು ಸರ್ಕಾರವನ್ನೇ ಅವಲಂಬಿಸದೇ ತನ್ನದೇ ಆದ ಆದಾಯದ ಮೂಲಗಳನ್ನು ಹೊಂದಿ ರಬೇಕಾದದ್ದು ಆವಶ್ಯಕ. ಕೆಲವೊಂದು ಅನಿವಾರ್ಯ ಸಂದರ್ಭಗಳಲ್ಲಿ ಮೂಲ ಸೌಕರ್ಯಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಸಂಪನ್ಮೂಲ ಕೊರತೆ ಉಂಟಾಗುವುದು ಸಹಜ. ಅಂತಹ ಸಂದರ್ಭಗಳಲ್ಲಿ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಡೀಕರಣಕ್ಕೆ ಆದ್ಯತೆ ನೀಡಬೇಕಾಗುತ್ತದೆ.”
-ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವರು, ಚಾಮರಾಜನಗರ..
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…