Andolana originals

ನನ್ನ ಕತೆಯ ಪಾತ್ರಗಳಿಗೆ ಅನ್ಯಾಯ ಮಾಡಿಲ್ಲ : ಬಾನು ಮುಷ್ತಾಕ್‌

ಸಂದರ್ಶನ: ರಶ್ಮಿ ಕೋಟಿ

ಬೂಕರ್ ಪ್ರಶಸ್ತಿ ಪುರಸ್ಕತ “ಹಾರ್ಟ್ ಲ್ಯಾಂಪ್” ಕೃತಿಯಿಂದ ಬಾನು ಮುಷ್ತಾಕ್ ಅವರು ಭಾರತೀಯ ಸಾಹಿತ್ಯದಲ್ಲಿ ಹೊಸ ಅಧ್ಯಾಯವನ್ನೇ ಬರೆದಿದ್ದಾರೆ. ಶೋಷಿತರ, ತಳವರ್ಗದ, ಹೆಣ್ಣಿನ ನೋವನ್ನು ನಿಖರವಾಗಿ ಚಿತ್ರಿಸಿರುವ ಈ ಕಥಾ ಸಂಕಲನ ಈಗ ಜಗತ್ತಿನ ಗಮನ ಸೆಳೆದಿದೆ. ಇದು ಕೇವಲ ಸಾಹಿತ್ಯದ ಗೆಲುವಲ್ಲ; ಇದು ನಿಶ್ಶಬ್ದ ಧ್ವನಿಗೆ ನೀಡಲಾದ ಅಕ್ಷರ ರೂಪಕ್ಕೆ ದೊರೆತಿರುವ ಮಾನ್ಯತೆ. ಈ ಮಹತ್ವದ ಕ್ಷಣದಲ್ಲಿ ತಮ್ಮ ಸಾಹಿತ್ಯದ ಹಾದಿ, ಹೋರಾಟ ಮತ್ತು “ಹಾರ್ಟ್ ಲ್ಯಾಂಪ್” ಹುಟ್ಟಿದ ಕಥೆಯ ಕುರಿತು ಬಾನು ಮುಷ್ತಾಕ್ ಅವರು ‘ಆಂದೋಲನ’ ದಿನಪತ್ರಿಕೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

ಆಂದೋಲನ: ಬೂಕರ್ ಇತಿಹಾಸದಲ್ಲಿಯೇ ಸಣ್ಣ ಕತೆಗಳಿಗೆ ಪ್ರಶಸ್ತಿ ಲಭಿಸಿರುವುದು ಇದೇ ಮೊದಲು. ಈ ಕುರಿತು ನೀವು ಏನು ಹೇಳ ಬಯಸುತ್ತೀರಿ?
ಬಾನು: ಹೌದು. ಇದುವರೆಗೂ ಸಣ್ಣ ಕತೆಗಳನ್ನು ಬೂಕರ್ ಸ್ಪರ್ಧೆಗೆ ಪರಿಗಣಿಸಿಯೇ ಇಲ್ಲ. ಇದೇ ಮೊಟ್ಟಮೊದಲ ಬಾರಿಗೆ ಸಣ್ಣಕತೆಗಳಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದು. ಸಾಮಾನ್ಯ ವಾಗಿ ಸಣ್ಣ ಕತೆಗಳನ್ನು ಕಾದಂಬರಿ ಕ್ಷೇತ್ರಕ್ಕಿಂತ ಕಡಿಮೆ ಪ್ರಾಮುಖ್ಯತೆ ಹೊಂದಿರುವುದು ಎಂದು ಪರಿಗಣಿಸಲಾ ಗುತ್ತದೆ ಹಾಗೂ ಬಹುತೇಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಫಿಕ್ಷನ್ ಎಂದರೆ ಕಾದಂಬರಿ ಎಂದೇ ಲೆಕ್ಕ. ಹಾಗಾಗಿ ನಮ್ಮ ಕಥಾ ಸಂಕಲನ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದೇ ಹೇಳಬಹುದು. ಇದರೊಂದಿಗೆ ಮತ್ತೊಂದು ದಾಖಲೆ ಎಂದರೆ ನಾನು ಹಾಗೂ ನನ್ನ ಕಥಾ ಸಂಕಲನದ ಅನುವಾದಕಿಯಾದ ದೀಪಾ ಭಸ್ತಿ ಇಬ್ಬರೂ ಕನ್ನಡಿಗರು, ಇಬ್ಬರೂ ಕಂದು ವರ್ಣದವರು. ಇದೂ ಕೂಡ ಒಂದು ಹೊಸ ವಿಶ್ವ ದಾಖಲೆಯೇ ಸರಿ.

ಆಂದೋಲನ: ನಿಮ್ಮ ಕತೆಗಳ ಸೃಷ್ಟಿಗೆ ಕಾರಣವಾದ ಮೂಲ ಯೋಚನೆ ಅಥವಾ ಅನುಭವ ಯಾವುದು?
ಬಾನು: ಒಂದೊಂದು ಕತೆಗೂ ವಿಭಿನ್ನ ಹಿನ್ನೆಲೆಯಿದೆ. ಆಯಾ ಸಂದರ್ಭೋಚಿತವಾಗಿ ತೋರಿ ಬರುವಂತಹ ಪ್ರಚೋದನೆಯನ್ನು ಕಲಾತ್ಮಕವಾಗಿ ಅಭಿವ್ಯಕ್ತಿ ಮಾಡಿದ್ದೇನೆ. ಹಾಗಾಗಿ ಪ್ರತೀ ಕತೆಯ ಸೃಷ್ಟಿಯ ಸಂದರ್ಭವೂ ಭಿನ್ನವಾಗಿದ್ದು, ಅದರ ಹಿಂದಿನ ಪ್ರಚೋದನೆಯೂ ಭಿನ್ನವಾಗಿದೆ.

ಆಂದೋಲನ: ನಿಮ್ಮ ಕತೆಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಾಗ ದೀಪಾ ಹಾಗೂ ನಿಮ್ಮ ನಡುವೆ ಯಾವ ರೀತಿಯ ಚರ್ಚೆಗಳಾಗುತ್ತಿದ್ದವು?
ಬಾನು: ನಾನು ದೀಪಾ ಅವರಿಗೆ ಎಲ್ಲ ರೀತಿಯ ಸ್ವಾತಂತ್ರ್ಯವನ್ನು ಕೊಟ್ಟಿದ್ದೆ. ಮೊದಲಿಗೆ “ಹಸೀನಾ ಮತ್ತು ಇತರ ಕತೆಗಳು” ಕೃತಿಯಿಂದ ದೀಪಾ ಅವರು ೧೨ ಕತೆಗಳನ್ನು ಭಾಷಾಂತರಕ್ಕೆ ಆಯ್ಕೆ ಮಾಡಿಕೊಂಡು ನನಗೆ ಕಳಿಸಿದರು. ನನ್ನ ಕತೆಯಲ್ಲಿ ಅನೇಕ ಮುಸ್ಲಿಂ ಸಂಪ್ರದಾಯದ ವಿಚಾರಗಳನ್ನು ಹಾಗೂ ಉರ್ದು ಪದಗಳನ್ನು ಪ್ರಸ್ತಾಪ ಮಾಡಿರುವುದರಿಂದ ಅವುಗಳ ಬಗ್ಗೆ ವಿವರಗಳನ್ನು ಕೇಳುತ್ತಿದ್ದರು. ನಾನು ವಿವರಿಸುತ್ತಿದ್ದೆ. ಅದರ ಹೊರತಾಗಿ ಹೆಚ್ಚೇನೂ ಚರ್ಚೆ ಮಾಡಲಿಲ್ಲ.

ಆಂದೋಲನ: ನೀವು ಮುಸ್ಲಿಂ ಮಹಿಳೆಯರು ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಯಿತು. ಆ ಘಟನೆ ನಿಮ್ಮ ಬರವಣಿಗೆಯ ಮೇಲೆ ಪ್ರಭಾವ ಬೀರಿತೆ?
ಬಾನು: ನನ್ನ ಕತೆಗಳ ಕುರಿತು ಯಾರಿಗೂ ಯಾವುದೇ ತಕರಾರುಗಳಿಲ್ಲ. ಮುಸ್ಲಿಂ ಸಮುದಾಯದವರಿಗೂ ಇಲ್ಲ. ಆದರೆ ಈ ವಿವಾದದ ನಂತರ ನನ್ನ ವಿಚಾರ ಇನ್ನಷ್ಟು ಸ್ಛುಟವಾಯಿತು. ಬರವಣಿಗೆಯ ಶೈಲಿಯಲ್ಲಿ, ಶಬ್ದಗಳ ಪ್ರಯೋಗದಲ್ಲಿ ಎಚ್ಚರಿಕೆ ವಹಿಸುವುದು ಅನಿವಾರ್ಯವಾಯಿತು.

ಆಂದೋಲನ: ನಿಮ್ಮ ಕತೆಯ ಪಾತ್ರಗಳೇನಾದರೂ ನಿಮ್ಮನ್ನು ಕಾಡಿವೆಯೇ?
ಬಾನು: ಖಂಡಿತಾ ಇಲ್ಲ. ನನ್ನ ಪಾತ್ರಗಳು ಎಂದೂ ತಕರಾರು ಮಾಡಿಲ್ಲ, ನನ್ನ ಬಳಿ ನ್ಯಾಯ ಕೇಳಿಲ್ಲ. ಏಕೆಂದರೆ ಅವುಗಳಿಗೆ ಎಲ್ಲೂ ಕೂಡ ಅನ್ಯಾಯ ಮಾಡಿಲ್ಲ. ಹಲವಾರು ಬಾರಿ ನಾನು ಮತ್ತು ಪಾತ್ರ ಎರಡೂ ಒಂದೇ ಆಗಿರುವ ಸಂದರ್ಭಗಳೂ ಇವೆ. ಅಲ್ಲದೆ ನಾನು ಎಂದೂ ಆತ್ಮವಂಚನೆ ಮಾಡಿಕೊಂಡವಳಲ್ಲ. ಹಾಗಾಗಿ ನನ್ನ ಪಾತ್ರಗಳಿಗೂ ನಾನು ಎಂದೂ ವಂಚನೆ ಮಾಡಿಲ್ಲ. ಹಾಗಾಗಿ ಅವರ‍್ಯಾರೂ ನನ್ನೊಂದಿಗೆ ಜಿದ್ದಿಗೆ ಬಿದ್ದಿಲ್ಲ.

ಆಂದೋಲನ: ಹೊಸ ತಲೆಮಾರಿನ ಲೇಖಕರಿಗೆ ಯಾವ ಸಂದೇಶ ಕೊಡಲು ಬಯಸುತ್ತೀರಾ?
ಬಾನು: ಹೊಸ ತಲೆಮಾರಿನ ಲೇಖಕರು ಹೊಸ ಕಾಲದ ಅವಶ್ಯಕತೆಗಳಿಗೆ ತಕ್ಕ ಹಾಗೆ ಬರೆಯುತ್ತಿದ್ದಾರೆ. ಬಹಳ ಪ್ರಮುಖವಾದ ಯುವ ಲೇಖಕರು ಮೂಡಿದ್ದಾರೆ. ಅವರು ಬಹಳ ಸ್ಪಷ್ಟವಾಗಿ ಹಾಗೂ ಸಮೃದ್ಧವಾಗಿ ಬರವಣಿಗೆಯನ್ನು ಮಾಡುತ್ತಿದ್ದಾರೆ. ಬರವಣಿಗೆ ಎಂಬುದೇ ಒಂದು ಸಾಂಸ್ಕ ತಿಕ ಕ್ರಿಯೆ. ಹಾಗಾಗಿ ಬರವಣಿಗೆಯಲಿ ನಮ್ಮ ಜನಜೀವನಕ್ಕೆ, ನಮ್ಮ ದೇಶಕ್ಕೆ ಅಭಿವೃದ್ಧಿಪರವಾದ ಚಿಂತನೆಯನ್ನು ಕೊಡುತ್ತಾ ಅದನ್ನು ಕಾರ್ಯಗೊಳಿಸುವತ್ತ ಸಕ್ರಿಯರಾಗುತ್ತಾ ನಮ್ಮ ಸಮಾಜ ದಲ್ಲಿ ಚಿಂತನೆಯ ದೀಪವನ್ನು ಕೂಡ ಹಚ್ಚುವ ಕೆಲಸ ಮಾಡಬೇಕಿದೆ.

ಆಂದೋಲನ: ದೀಪಾ ಭಸ್ತಿಯವರು ನಿಮ್ಮ ಕೃತಿಯನ್ನು ಸಮರ್ಥವಾಗಿ ಅನುವಾದ ಮಾಡಿದ ಕಾರಣ ಅದಕ್ಕೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಸಂದರ್ಭದಲ್ಲಿ ಅನುವಾದಕರ ಶಕ್ತಿ ಹಾಗೂ ಪ್ರಾಮುಖ್ಯತೆಯ ಬಗ್ಗೆ ಏನು ಹೇಳ ಬಯಸುತ್ತೀರಿ?
ಬಾನು: ಅನುವಾದದ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ಕಡೆಗಣಿಸಲ್ಪಟ್ಟ ಸಾಹಿತ್ಯಕ ಕ್ರಿಯೆಯಾಗಿದೆ. ನೀವು ಮಲಯಾಳಂ ಸಾಹಿತ್ಯವನ್ನು ಗಮನಿಸಿದರೆ ಅಲ್ಲಿನ ಅನೇಕ ಪುಸ್ತಕಗಳು ಬೇರೆ ಭಾಷೆಗಳಿಗೆ ಹಾಗೂ ಬೇರೆ ಭಾಷೆಯ ಪುಸ್ತಕಗಳು ಮಲಯಾಳಂ ಭಾಷೆಗೆ ಅನುವಾದಗಳಾಗಿವೆ. ಆದರೆ ನಮ್ಮಲ್ಲಿ ಅನುವಾದದ ಕೆಲಸ ಹೆಚ್ಚಾಗಿ ಆಗುತ್ತಿಲ್ಲ. ಹಾಗಾಗಿ ಅನುವಾದಕರ ಶಕ್ತಿ ಹಾಗೂ ಪ್ರಾಮುಖ್ಯತೆ ಕುರಿತಾಗಿ ವಿಚಾರಗೋಷ್ಠಿಗಳು ನಡೆಯಬೇಕು. ಅದರೊಂದಿಗೆ ಹೆಚ್ಚು ಹೆಚ್ಚು ಅನುವಾದಕರು ಬೆಳೆಯಲು ಬೇಕಾದರೆ ಅನುವಾದಕ್ಕೆ ಸೂಕ್ತ ಸಂಭಾವನೆ ಕೊಡುವ ವ್ಯವಸ್ಥೆ ಬಂದರೆ ಅನುವಾದ ಕ್ಷೇತ್ರವು ಖಂಡಿತವಾಗಿಯೂ ಹಿಗ್ಗಲಿದೆ.

ಆಂದೋಲನ ಡೆಸ್ಕ್

Recent Posts

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

18 mins ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

28 mins ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

54 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

2 hours ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

2 hours ago