ಪ್ರಸಾದ್ ಲಕ್ಕೂರು
ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ
ಚಾಮರಾಜನಗರ: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಮಾ.೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಘೋಷಿಸಬಹುದು ಎಂದು ಜಿಲ್ಲೆಯ ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ನೆರೆಯ ಮೈಸೂರು ಜಿಲ್ಲೆಯವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೧೩ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ೩ ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿ ವೃದ್ಧಿಗೆ ನೀಡಿ ಕಾಳಜಿ ವಹಿಸಿದ್ದರು. ಜಿಲ್ಲೆಯ ಸ್ಥಿತಿಗತಿಯ ಕುರಿತು ಸಿದ್ದರಾಮಯ್ಯ ಅವರಿಗೆ ಅರಿವಿದೆ. ಹಾಗಾಗಿ ಜಿಲ್ಲೆಗೆ ಏನಾದರೂ ಕೊಡುಗೆಗಳನ್ನು ನೀಡಲಿದ್ದಾರೆ ಎಂಬ ಆಶಾಭಾವನೆಯನ್ನು ಜನರು ಹೊಂದಿದ್ದಾರೆ.
೨೦೨೫ರ ಏಪ್ರಿಲ್ ೨೪ರಂದು ಜಿಲ್ಲೆಯ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಥಮ ಬಾರಿಗೆ ಮೈಸೂರು ವಿಭಾಗೀಯ ಮಟ್ಟದ ಮಹತ್ವದ ಸಚಿವ ಸಂಪುಟ ಸಭೆ ನಡೆಸಿ ೩೬೪೭.೬೨ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದರು.
ಅದರಲ್ಲಿ ಹಲವಾರು ಯೋಜನೆಗಳು ಹಾಗೂ ಕಾರ್ಯ ಕ್ರಮಗಳನ್ನು ಜಿಲ್ಲೆಗೆ ಘೋಷಿಸಿದ್ದರು. ಮುಖ್ಯಮಂತ್ರಿಗಳ ಈ ನಡೆಯ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಜಿಲ್ಲೆಯು ಹಿಂದಿನಿಂದಲೂ ಕಾಂಗ್ರೆಸ್ ಭದ್ರಕೋಟೆ. ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆದ್ದಿದ್ದಾರೆ. ಹನೂರು ವಿಧಾನಸಭೆ ಕ್ಷೇತ್ರದಲ್ಲಿ ಮಾತ್ರ ಜಾ.ದಳ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್ನಿಂದ ಸಂಸದರನ್ನು ಕೂಡ ಆಯ್ಕೆ ಮಾಡಿದ್ದಾರೆ. ಜಿಲ್ಲೆಯ ಜನತೆ ಹೆಚ್ಚು ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.
ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂಬ ಮೌಢ್ಯವನ್ನು ಅಳಿಸಿ ಹಾಕಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಲಿದೆ. ಅವರು ಹತ್ತು ಹಲವು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ. ಚಾಮರಾಜನಗರಕ್ಕೆ ಬಂದು ಹೋದರೆ ನನ್ನ ಪದವಿ ಗಟ್ಟಿಯಾಗುತ್ತದೆ ಎಂದು ಹೇಳುತ್ತಲೇ ಇದ್ದಾರೆ. ಹೀಗೆ ಜಿಲ್ಲೆಯ ಬಗ್ಗೆ ಪ್ರೀತಿ ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ಬಗ್ಗೆ ಜಿಲ್ಲೆಯ ಜನರು] ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಕಳೆದ ಬಾರಿ ಬಜೆಟ್ನಲ್ಲಿ ಜಿಲ್ಲೆಯ ಹೊಸ ತಾಲ್ಲೂಕಾದ ಹನೂರಿನ ಅಭಿವೃದ್ಧಿಗೆ ೩ ಯೋಜನೆಗಳನ್ನು ಸೇರಿಸಿದ್ದರು. ಹನೂರು ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿಮೇಲ್ದರ್ಜೆಗೆ ಏರಿಕೆ, ಜಿಲ್ಲೆಯ ೫ ವಸತಿ ಶಾಲೆಗಳನ್ನು ದ್ವಿತೀಯ ಪಿಯುಸಿ ತನಕ ಮೇಲ್ದರ್ಜೆಗೆ ಏರಿಸುವುದು, ಕೆ-ಶಿಪ್-೪ ಯೋಜನೆ ಯಡಿ ಹನೂರು-ರಾಮಾಪುರ-ಪಾಲಾರ್ ರಸ್ತೆ ಅಭಿವೃದ್ಧಿಪಡಿಸುವುದಾಗಿ ಪ್ರಸ್ತಾಪಿಸಿದ್ದರು. ಚಾ.ನಗರದ ಡಾ.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಒಲಿಂಪಿಕ್ಸ್ ಮಾದರಿಯ ಈಜುಕೊಳ, ನಗರದಲ್ಲಿ ಸ್ವಯಂ ಚಾಲಿತ ಪರೀಕ್ಷಾ ಪಥ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದರು.




