ಹೇಮಂತ್ಕುಮಾರ್
ಮಂಡ್ಯ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಪಕ್ಷದ ನಾಯಕರು ಹೇಳಿದ ಕೆಲಸಗಳನ್ನು ಚಾಚೂತಪ್ಪದೇ ನಿರ್ವಹಿಸಿಕೊಂಡು ಬಂದಿದ್ದು, ಮುಡಾ ಅಧ್ಯಕ್ಷ ಸ್ಥಾನ ನೀಡಿ, ಅವಕಾಶ ವಂಚಿತರಿಗೆ ಸ್ಥಾನಮಾನ ಕಲ್ಪಿಸಬೇಕೆಂದು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದಾರೆ.
ಶಾಸಕ ಪಿ.ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೇರಿದಂತೆ ರಾಜ್ಯಮಟ್ಟದ ನಾಯಕರು, ನಗರಾಭಿವೃದ್ಧಿ ಸಚಿವರನ್ನು ಭೇಟಿಯಾಗಿ ಅಕಾಂಕ್ಷಿಗಳು ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ನಿಗಮ, ಮಂಡಳಿ ಮತ್ತು ಪ್ರಾಧಿಕಾರದ ನೇಮಕಾತಿಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಈಗ ಬದಲಾವಣೆಯ ಮಾತುಗಳು ಕೇಳಿ ಬರುತ್ತಿವೆ.
ನಿಗಮ-ಮಂಡಳಿಗಳಲ್ಲಿ ಜಿಲ್ಲೆಯ ಬರೋಬ್ಬರಿ ೯ ಮಂದಿ ಕಾಂಗ್ರೆಸ್ ನಾಯಕರು ಅಧಿಕಾರ ಪಡೆದಿರುವುದೇ ದೊಡ್ಡ ಸಂಗತಿ. ಇದೀಗ ಅವಕಾಶ ವಂಚಿತ ಮುಖಂಡರು, ಕಾರ್ಯಕರ್ತರಿಗೂ ಅವಕಾಶ ಕಲ್ಪಿಸುವಆಲೋಚನೆಯೊಂದಿಗೆ ಪ್ರಾರಂಭಿಕವಾಗಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಮುಡಾ ಅಧ್ಯಕ್ಷರಾಗಿ ಮುಸ್ಲಿಂ ಸಮುದಾಯದ ಮುಖಂಡ, ನಗರಸಭೆ ಸದಸ್ಯ ನಯೀಂ ಅವರನ್ನು ನೇಮಕ ಮಾಡಲಾಗಿತ್ತು. ೨೦೨೪ರ ಜೂ.೧೯ರಂದು ನಯೀಂ ಅವರು ಮುಡಾ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಪಕ್ಷದ ನಾಯಕರು ಮತ್ತು ಮುಖಂಡರ ನಡುವಿನ ಆಂತರಿಕ ಮಾತುಕತೆಯಂತೆ ಒಂದು ವರ್ಷಗಳ ಕಾಲ ನಯೀಂ ಅವರನ್ನು ನೇಮಕ ಮಾಡಿ, ಉಳಿದ ಅವಧಿಗೆ ಮತ್ತಿಬ್ಬರಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂಬುದು ಪಕ್ಷದ ಅಂಗಳದಲ್ಲಿ ಕೇಳಿಬರುತ್ತಿರುವ ಮಾತು ಅದರಂತೆ ಇದೀಗ ನಯೀಂ ಅವರಿಗೆ ನೀಡಿದ್ದ ಕಾಲಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರ ಬದಲಾವಣೆ ಬಗ್ಗೆ ಪಕ್ಷದೊಳಗೆ ಗಂಭೀರ ಚರ್ಚೆ, ಸಮಾಲೋಚನೆ ಆರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಡಾ ಅಧ್ಯಕ್ಷರ ಹುದ್ದೆಗೆ ಮೊದಲು ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಬಳಿಕ ದಲಿತ ವರ್ಗದವರು ಹಾಗೂ ಸಾಮಾನ್ಯ ವರ್ಗದ ಮುಖಂಡರಿಗೆ ಅಧಿಕಾರ ನೀಡುವ ಆಲೋಚನೆಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರು ಮಾಡಿದ್ದರು ಎನ್ನಲಾಗಿದೆ.
ಸದ್ಯ ಅಲ್ಪಸಂಖ್ಯಾತ ವರ್ಗದವರ ಕೋಟಾ ಮುಗಿದಿದೆ. ಹಾಗಾಗಿ ಇದೀಗ ಮುಡಾ ಅಧ್ಯಕ್ಷ ಸ್ಥಾನಕ್ಕಾಗಿ ಪರಿಶಿಷ್ಟ ಜಾತಿಯ ಮುಖಂಡರ ನಡುವೆ ಪೈಪೋಟಿ ಆರಂಭವಾಗಿದೆ. ಪತ್ರಕರ್ತ, ನಗರಸಭೆ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್, ನಗರಸಭೆ ಸದಸ್ಯ ಹಾಗೂ ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ಅಧ್ಯಕ್ಷ ಎಂ.ಎನ್. ಶ್ರೀಧರ್, ಕೆಪಿಸಿಸಿ ಪರಿಶಿಷ್ಟ ವಿಭಾಗದ ರಾಜ್ಯ ಸಂಚಾಲಕ ಕೆ.ಎನ್.ದೀಪಕ್, ಕಾಂಗ್ರೆಸ್ ಮುಖಂಡರಾದ ಚಿಕ್ಕಮಂಡ್ಯ ಆನಂದ್ ಅವರು ಮುಡಾ ಅಧ್ಯಕ್ಷಗಾದಿಗಾಗಿ ಪೈಪೋಟಿ ನಡೆಸಿದ್ದಾರೆ. ಇವರ ನಡುವೆಯೇ ಪೈಪೋಟಿ ಬಿರುಸುಗೊಂಡಿದೆ.
” ವಿದ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಮೂಲಕ ನಾನು ಹೋರಾಟ ಆರಂಭಿಸಿದ್ದೇನೆ. ವಿದ್ಯಾರ್ಥಿ ಸಂಘದ ನಾಯಕನಾಗಿಯೂ ಗುರುತಿಸಿಕೊಂಡಿದ್ದೆ. ಒಮ್ಮೆ ನಗರಸಭೆ ಚುನಾವಣೆಯಲ್ಲಿ ಸೋತಿದ್ದೆ. ಆದರೆ, ನನ್ನ ಸಂಘಟನಾ ಚಾತುರ್ಯವನ್ನು ಮೆಚ್ಚಿ ನಗರಸಭೆ ಸದಸ್ಯನಾಗಿನಾಮನಿರ್ದೇಶನ ಮಾಡಲಾಗಿತ್ತು. ಕಳೆದ ಅವಽಯಲ್ಲಿ ೧೭ನೇ ವಾರ್ಡ್ ನಿಂದ ನನ್ನ ಪತ್ನಿ ನಗರಸಭೆ ಸದಸ್ಯೆಯಾಗಿದ್ದರು. ಇದೇ ವಾರ್ಡ್ನಲ್ಲಿ ಪಕ್ಷದ ಹಲವು ನಾಯಕರ ಗೆಲುವಿಗೆ ದುಡಿದಿದ್ದೇನೆ. ಹೀಗಾಗಿ ಮುಡಾ ಅಧ್ಯಕ್ಷ ಹುದ್ದೆಗೆ ನಾನೂ ಪ್ರಬಲ ಆಕಾಂಕ್ಷಿ.”
-ಬಿ.ಪಿ.ಪ್ರಕಾಶ್, ಮಾಜಿ ಸದಸ್ಯ, ನಗರಸಭೆ, ಮಂಡ್ಯ
” ಮುಡಾ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಕ ಮಾಡುವಂತೆ ನಾನೂ ಕೂಡ ವರಿಷ್ಠರಿಗೆ ಮನವಿ ಮಾಡಿದ್ದೇನೆ. ನಾಯಕರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನನ್ನನ್ನು ಪರಿಗಣಿಸುವ ಭರವಸೆ ಇದೆ. ೩೫ ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಜವಾಬ್ದಾರಿ ಕೊಟ್ಟರೆ ನಿರ್ವಹಿಸಲು ಸಿದ್ಧನಿದ್ದೇನೆ. ಈ ಮಧ್ಯೆ ವೈಯಕ್ತಿಕ ಕಾರಣಗಳಿಂದಾಗಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.”
-ಎಂ.ಎನ್.ಶ್ರೀಧರ್, ಮುಡಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿ
” ೨೫ ವರ್ಷಗಳಿಂದ ತಳಮಟ್ಟದಿಂದ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್ನ ನಗರ, ತಾಲ್ಲೂಕು ಅಧ್ಯಕ್ಷನಾಗಿ, ಜಿಲ್ಲಾ ಉಪಾಧ್ಯಕ್ಷನಾಗಿ, ಎರಡು ಬಾರಿ ನಗರಸಭೆ ಸದಸ್ಯನಾಗಿ ನಾಮನಿರ್ದೇಶಿತನಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ಕೆಪಿಸಿಸಿ ಪರಿಶಿಷ್ಟ ವಿಭಾಗದ ರಾಜ್ಯ ಸಂಚಾಲಕನಾಗಿ ಮಂಡ್ಯ ಜಿಲ್ಲಾ ಮಾಧ್ಯಮ ವಕ್ತಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಳೆದ ಬಾರಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಜಿಲ್ಲಾಧ್ಯಕ್ಷ ಸ್ಥಾನ ಕೈತಪ್ಪಿತ್ತು. ಇದೀಗ ಮುಡಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆದರೆ, ಶಾಸಕರಾದ ರವಿಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ.”
-ಕೆ.ಎನ್.ದೀಪಕ್, ರಾಜ್ಯಸಂಚಾಲಕ, ಪರಿಶಿಷ್ಟ ವಿಭಾಗ, ಕೆಪಿಸಿಸಿ
” ಮೂಲತಃ ನಾನು ಕಾಂಗ್ರೆಸ್ಸಿಗ. ನಿಷ್ಠಾವಂತ ಕಾರ್ಯಕರ್ತನಾಗಿ ೩೩ ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ವಿದ್ಯಾರ್ಥಿ ಕಾಂಗ್ರೆಸ್ನಿಂದ ಪಕ್ಷ ರಾಜಕಾರಣ ಪ್ರವೇಶಿಸಿದ್ದೇನೆ. ಪಕ್ಷದೊಳಗೆ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಇದೀಗ ಮುಡಾ ಅಧ್ಯಕ್ಷ ಸ್ಥಾನ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ.”
-ಚಿಕ್ಕಮಂಡ್ಯ ಆನಂದ್ಕುಮಾರ್, ಕಾಂಗ್ರೆಸ್ ಮುಖಂಡ
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…