Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ಪ್ರತ್ಯೇಕ ಸ್ಥಳಕ್ಕೆ ಬೀದಿನಾಯಿಗಳ ಸ್ಥಳಾಂತರಕ್ಕೆ ಚಿಂತನೆ 

ನವೀನ್ ಡಿಸೋಜ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಾಯಿಗಳ ಹಾವಳಿ ಹಿನ್ನೆಲೆಯಲ್ಲಿ ಕ್ರಮ; ಮಡಿಕೇರಿಯಲ್ಲಿ ಜಾಗ ಗುರುತು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ದಿನಕ್ಕೆ ಸರಾಸರಿ ೧೫ ಶ್ವಾನ ಕಡಿತ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬೀದಿ ನಾಯಿ ಸ್ಥಳಾಂತರಕ್ಕೆ ಮಡಿಕೇರಿ ನಗರದ ಹೊರವಲಯದ ಸ್ವೀವರ್ಟ್ ಹಿಲ್ ಬಳಿ ನಗರಸಭೆಯು ಒಂದೂವರೆ ಎಕರೆ ಜಾಗ ಕಾಯ್ದಿರಿಸಿದೆ.

ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವ ಚರ್ಚೆಗೆ ಸಂಬಂಽಸಿದಂತೆ ಸುಪ್ರಿಂ ಕೋರ್ಟ್ ಇತ್ತೀಚೆಗೆ ಮಹತ್ವದ ನಿರ್ದೇಶನ ಪ್ರಕಟಿಸಿದೆ. ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಆದರೆ ಕೊಡಗು ಜಿಲ್ಲೆಯಲ್ಲಿರುವ ಬೀದಿ ಶ್ವಾನಗಳ ಹಾವಳಿ ತಡೆಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಿಗೆ ಕ್ರಮ ಕೈಗೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.

ಮಡಿಕೇರಿ ನಗರಸಭೆಯಿಂದ ಬೀದಿ ಶ್ವಾನಗಳ ಹಾವಳಿ ತಡೆಗಾಗಿ ಸಂತಾನಹರಣ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವುದೇ ಸವಾಲಾಗಿದೆ. ಹಲವು ಬಾರಿ ಬೀದಿ ನಾಯಿಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಗೆ ಟೆಂಡರ್ ಆಹ್ವಾನಿಸಿದರೂ ಯಾರೂ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ.

ಸರ್ಕಾರದಿಂದ ಪ್ರತಿ ನಾಯಿಗೆ ನೀಡುವ ಹಣಕ್ಕಿಂತ ಹೆಚ್ಚಿನ ಹಣ ನೀಡುತ್ತೇವೆಂದರೂನಾಯಿ ಹಿಡಿಯುವವರು ಸಿಗುತ್ತಿಲ್ಲ. ಇದು ಬೀದಿ ನಾಯಿಗಳ ನಿಯಂತ್ರಣಕ್ಕೆ ತಡೆ ಯಾಗಿದ್ದು, ನಾಯಿ ಹಿಡಿಯುವವರೇ ಸಿಗುತ್ತಿಲ್ಲವಾದ್ದರಿಂದ ಶೆಲ್ಟರ್ ನಿರ್ಮಿಸಿ ಸ್ಥಳಾಂತರಿಸಲು ಮುಂದಾದರೂ ಸ್ಥಳಾಂತರ ಪ್ರಕ್ರಿಯೆ ಕಷ್ಟವಾಗಲಿದೆ. ಮಡಿಕೇರಿ ಮಾತ್ರವಲ್ಲದೆ ಕೊಡಗಿನ ಎಲ್ಲ ಕಡೆಯ ಪರಿಸ್ಥಿತಿಯೂ ಸದ್ಯ ಇದುವೇ ಆಗಿದೆ. ಆದರೂ ಮಡಿಕೇರಿಯಲ್ಲಿ ಜಾಗ ಕಾಯ್ದಿರಿಸಲಾಗಿದ್ದು, ಬೀದಿ ನಾಯಿ ಸ್ಥಳಾಂತರಕ್ಕೆ ಚಿಂತನೆ ನಡೆದಿದೆ.

ಜಿಲ್ಲೆಯ ನಾನಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ ಒಟ್ಟು ಸರಾಸರಿ ೧೫ ಮಂದಿ ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಬರೋಬ್ಬರಿ ೪,೬೧೬ ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು ೫೨೮ ನಾಯಿ ಕಡಿತ ಪ್ರಕರಣಗಳು ದಾಖಲಾದರೆ ಅಕ್ಟೋಬರ್ ತಿಂಗಳಲ್ಲಿ ೪೫೭ ಮಂದಿ ನಾಯಿ ಕಡಿತದಿಂದ ರೇಬಿಸ್ ನಿರೋಧಕ ಚಿಕಿತ್ಸೆ ಪಡೆದುಕೊಂಡಿದ್ದಾರೆ. ತಿಂಗಳಿಗೆ ಅಂದಾಜು ೫೦೦ ನಾಯಿ ಕಡಿತ ಪ್ರಕರಣಗಳು ದಾಖಲಾಗುತ್ತಿದ್ದರೂ ಬೀದಿ ಶ್ವಾನಗಳ ಸಮಸ್ಯೆಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲವೆಂಬುದು ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

” ೨೦೨೪ರಲ್ಲಿ ಜಿಲ್ಲೆಯಲ್ಲಿ ೪,೮೭೨ ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಹಾಗೆಯೇ ೨೦೨೫ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ ೪,೨೧೭ ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ.”

-ಡಾ.ಸತೀಶ್ ಕುಮಾರ್, ಡಿಚ್‌ಒ

” ಮಡಿಕೇರಿ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ನಗರದ ಹೊರವಲಯದ ಸ್ವೀವರ್ಟ್ ಹಿಲ್ ಬಳಿ ನಗರಸಭೆಯ ಒಂದೂವರೆ ಎಕರೆ ಜಾಗ ಕಾಯ್ದಿರಿಸಲಾಗಿದೆ. ಅಲ್ಲಿಗೆ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಲು ಉದ್ದೇಶಿಸಲಾಗಿದೆ.”

-ಎಚ್.ಆರ್.ರಮೇಶ್, ಪೌರಾಯುಕ್ತ 

” ಅಕ್ಟೋಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು ೪,೬೧೬ ಮಂದಿ ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದಾರೆ. ಅದರಂತೆ ಸರಾಸರಿ ಪ್ರತಿ ದಿನ ಸುಮಾರು ೧೫ ಮಂದಿ ನಾಯಿ ಕಡಿತಕ್ಕೊಳಗಾಗುತ್ತಿದ್ದಾರೆ. ಎಲ್ಲರಿಗೂ ರೇಬಿಸ್ ನಿರೋಧಕ ಲಸಿಕೆ ಹಾಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗೆ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು.”

-ಡಾ.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಕಾರಿ

Tags:
error: Content is protected !!