ಮಹಾದೇಶ್ ಎಂ.ಗೌಡ
ಹನೂರು ತಾಲ್ಲೂಕಿನ ಜನತೆಯ ಬಹು ದಿನಗಳ ಕನಸು ಈಡೇರುವ ನಿರೀಕ್ಷೆ
ಹನೂರು : ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ೫೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಸಮಯ ಕೂಡಿಬಂದಿದ್ದು, ಈ ಭಾಗದ ಜನರ ಹಲವಾರು ವರ್ಷಗಳ ಕನಸು ನನಸಾಗಲಿದೆ.
ಫೆ.೬ರಂದು ಶಾಸಕ ಎಂ.ಆರ್.ಮಂಜುನಾಥ್ರವರು ನೂತನ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವರು. ಪಟ್ಟಣ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶಾಸಕರಾಗಿದ್ದ ದಿ.ಜಿ.ರಾಜೂಗೌಡ ರವರು ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರಿಗೆ ಮನವಿ ಮಾಡಿ ಅನುದಾನ ತಂದು ೧೯೯೨ರ ಮೇ ೧೮ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿ ಆರೋಗ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ಆದರೆ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕಿತ್ತು. ಆದರೆ ೩೪ ವರ್ಷಗಳು ಕಳೆದರೂ ಪ್ರಾಥ ಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿ ಸಲು ಆಗಿರಲಿಲ್ಲ.
ಶಾಸಕರಾಗಿದ್ದ ಆರ್.ನರೇಂದ್ರರವರು ತಾಲ್ಲೂಕು ಕೇಂದ್ರದಲ್ಲಿ ನೂರು ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಮಾಡುವಂತೆ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿ ಯೂರಪ್ಪ, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ೨೦೨೩ರಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಗಳಾಗಿದ್ದ ಬಸವರಾಜ ಬೊಮ್ಮಾಯಿರವರು ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್ನಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಭರವಸೆ ಭರವಸೆಯಾಗಿಯೇ ಉಳಿಯಿತೇ ಹೊರತು ಕಾರ್ಯರೂಪಕ್ಕೆ ಬರಲಿಲ್ಲ. ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಜನರು ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಹಲವಾರು ಸಂದರ್ಭಗಳಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರನ್ನು ಹನೂರು ಪ್ರಾಥಮಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಸಮರ್ಪಕ ಆರೋಗ್ಯ ಸೇವೆ ಸಿಗದೆ ಕೆಲವರು ಮೃತಪಟ್ಟಿದ್ದಾರೆ.
ರಾತ್ರಿ ಪಾಳಿಯದಲ್ಲಿ ಯಾವುದೇ ವೈದ್ಯಾಧಿಕಾರಿಗಳು ಲಭ್ಯವಿಲ್ಲದಿರುವುದರಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳು ತೊಂದರೆ ಅನುಭವಿಸುತ್ತಿದ್ದರು. ಈ ಸಂಬಂಧ ಹಲವಾರು ಬಾರಿ ಪ್ರತಿಭಟನೆಗಳು ಕೂಡ ನಡೆದಿದ್ದವು.
ಇದೀಗ ಶಾಸಕ ಎಂ.ಆರ್.ಮಂಜುನಾಥ್ರವರು ತಾಲ್ಲೂಕಿನ ಜನತೆಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮರ್ಪಕ ಆರೋಗ್ಯ ಸೇವೆ ಸಿಗದಿರುವುದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತದೆ. ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಬೇಕಿದೆ. ಹಾಗಾಗಿ ತಾಲ್ಲೂಕು ಕೇಂದ್ರದಲ್ಲಿ ೧೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ ಮಾಡಲು ಹೆಚ್ಚಿನ ಅನುದಾನ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಕಳೆದ ಬಜೆಟ್ನಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ೫೦ ಹಾಸಿಗೆಗಳ ಕಟ್ಟಡ ನಿರ್ಮಾಣ ಮಾಡಲು ರೂ. ೨೦ ಕೋಟಿ, ೫೮ ಲಕ್ಷ ರೂ. ಅನುದಾನ ನೀಡಿದ್ದರು. ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಫೆ.೬ರಂದು ಬೆಳಿಗ್ಗೆ ೧೧ ಗಂಟೆಗೆ ಶಾಸಕರಾದ ಎಂ.ಆರ್.ಮಂಜುನಾಥ್ ರವರು ಭೂಮಿ ಪೂಜೆ ಸಲ್ಲಿಸುವರು. ಕಟ್ಟಡ ಕಾಮಗಾರಿ ನಿಗದಿತ ಸಮಯದೊಳಗೆ ಪೂರ್ಣಗೊಂಡು ತಾಲ್ಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗಲಿದೆ.
” ಹನೂರು ತಾಲ್ಲೂಕು ಕೇಂದ್ರದಲ್ಲಿ ಸಾರ್ವಜನಿಕ ಆಸ್ಪತ್ರೆ ಇಲ್ಲದೆ ರೋಗಿಗಳು ತೊಂದರೆ ಅನುಭವಿಸುತ್ತಿದ್ದರು. ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ೧೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಅನುಮೋದನೆ ನೀಡಿದ್ದರು. ಇದೀಗ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ೫೦ ಹಾಸಿಗೆಗಳ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಇದರಿಂದ ಕ್ಷೇತ್ರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲಾಗುವುದು.”
-ಎಂ.ಆರ್.ಮಂಜುನಾಥ್, ಶಾಸಕರು
” ಒಡೆಯರಪಾಳ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಹನೂರು ತಾಲ್ಲೂಕಿನ ಒಡೆಯರ ಪಾಳ್ಯದಲ್ಲಿ ಸಂಚಾರ ಆರೋಗ್ಯ ಘಟಕವನ್ನು ಪ್ರಾರಂಭಿಸಲಾಗಿತ್ತು. ಇದೀಗ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ನಾಲ್ಕು ಕೋಟಿ ೨೫ ಲಕ್ಷ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಕ್ರಮವಹಿಸಲಾಗಿದೆ. ಅದೇ ರೀತಿ ಪಿ.ಜಿ.ಪಾಳ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ೯೩ ಲಕ್ಷ ರೂ. ವೆಚ್ಚದ ಕಾಮಗಾರಿಗೆ ಫೆ.೬ರಂದು ಚಾಲನೆ ನೀಡಲಿದ್ದಾರೆ.”
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…