Mysore
26
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ 

ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪ ಪ್ರತಿಭಟನೆ ನಡೆಸಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದರೆ ಕಾಡಂಚಿನ ಗ್ರಾಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆಗೆ ಹೋಗಲು ಸಾಧ್ಯವಾಗದೆ ಪ್ರತಿನಿತ್ಯ ಪರಿತಪಿಸುತ್ತಿದ್ದಾರೆ.

ತಾಲ್ಲೂಕು ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಂದ ರಾಮಾಪುರ, ಹನೂರು, ಕೊಳ್ಳೇಗಾಲದ ಶಾಲಾ- ನಕಾಲೇಜುಗಳಿಗೆ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೋಗುತ್ತಿದ್ದಾರೆ. ಆದರೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ಹಲವಾರು ಬಾರಿ ಪ್ರತಿಭಟನೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುವುದು ಈ ಭಾಗದ ಜನರ ಆರೋಪ.

ಈ ಹಿನ್ನೆಲೆಯಲ್ಲಿ ಲೊಕ್ಕನಹಳ್ಳಿ ಗ್ರಾಮದ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ನಿಗದಿತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲಾಗದೆ ಕಲಿಕೆಯ ಮೇಲೆ ಪರಿಣಾಮ ಬೀರಿದೆ. ನಿಟ್ಟಿನಲ್ಲಿ ಸಂಬಂಧಪಟ್ಟ  ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಪೋಷಕರು ಒತ್ತಾಯಿಸಿದರು

ತುಂಡಾದ ಬಸ್‌ನ ಗೇರ್ ರಾಡ್; ತಪ್ಪಿದ ಅನಾಹುತ: 

ಹನೂರು: ರಾಮಾಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಗೇರ್ ರಾಡ್  ಅಜ್ಜೀಪುರ ಬಳಿ ತುಂಡಾಗಿ ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ.  ಚಾಲಕನ ಜಾಗರೂಕತೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಚಾಲಕ ಸಕಾಲದಲ್ಲಿ ವಾಹನವನ್ನು ನಿಯಂತ್ರಿಸಿ ನಿಲ್ಲಿಸಿದ್ದಾರೆ. ಬಸ್‌ನಲ್ಲಿ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಹನೂರು ಹಾಗೂ ಕೊಳ್ಳೇಗಾಲಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಬೇರೆ ಬಸ್‌ಗಳು ಬಾರದಿದ್ದರಿಂದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಶುಕ್ರವಾರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿರುವುದರಿಂದ ಸರಿಯಾದ ಸಮಯಕ್ಕೆ ತೆರಳಲು ಆಗದೆ ಪರಿತಪಿಸಿ, ವಿದ್ಯಾರ್ಥಿಗಳು ದಾರಿಯಲ್ಲಿ ಹೋಗುವ ವಾಹನಗಳನ್ನು ತಡೆದು ಮನವಿ ಮಾಡಿ ಖಾಸಗಿ ವಾಹನ ಲಾರಿ, ಕಾರುಗಳ ಆಶ್ರಯ ಪಡೆದುಕೊಂಡು ಶಾಲೆಗೆ ತೆರಳಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ನಿರ್ವಹಣೆ ಇರುವ ಬಸ್‌ಗಳನ್ನು ಸಂಚಾರಕ್ಕೆ ಬಿಡುವಂತೆ ಒತ್ತಾಯಿಸಿದ್ದಾರೆ.

ಗ್ರಾಮೀಣ ಭಾಗದ ಕಾಡಂಚಿನ ಭಾಗದ ಹಳ್ಳಿಗಳಿಗೆ ಸಂಚರಿಸುತ್ತಿರುವ ಸಾರಿಗೆ ಬಸ್‌ಗಳು ನಿರ್ವಹಣೆ ಇಲ್ಲದೆ ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ಕಳೆದ ತಿಂಗಳು ಒಂದೇ ದಿನದಲ್ಲಿ ಮಣಗಳ್ಳಿ, ಶಾಗ್ಯ ಬಳಿ ಎರಡು ಬಸ್‌ಗಳು ಕೆಟ್ಟು ನಿಂತಿದ್ದವು. ಹಾಗಾಗಿ ಗ್ರಾಮೀಣ ಭಾಗದ ಕಾಡಂಚಿನ ಭಾಗದ ಗ್ರಾಮಗಳಿಗೆ ಸಂಚಾರ ಮಾಡಲು ಕನಿಷ್ಠ ಟೂಲ್ ಕಿಟ್‌ಗಳ ವ್ಯವಸ್ಥೆ ಇರುವಂತಹ ಬಸ್‌ಗಳನ್ನು ಕಲ್ಪಿಸಬೇಕು ಎಂದು ಗ್ರಾಮೀಣ ಭಾಗದ ಜನರು ಆಗ್ರಹಿಸಿದ್ದಾರೆ.

” ಪ್ರತಿನಿತ್ಯ ಲೋಕನಹಳ್ಳಿ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ಗಳು ನಿಗದಿತ ಸಮಯಕ್ಕೆ ಹೋಗುತ್ತಿವೆ. ಆದರೆ ಶುಕ್ರವಾರ ೧೫ ನಿಮಿಷ ತಡವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಅಜ್ಜೀಪುರ ಸಮೀಪ ಬಸ್ವೊಂ ದರ ಗೇರ್ ರಾಡ್ ತುಂಡಾಗಿದ್ದು, ಈಗಾಗಲೇ ದುರಸ್ತಿ ಮಾಡಲಾಗಿದೆ.”

-ಭೋಗನಾಯಕ, ಡಿಪೋ ವ್ಯವಸ್ಥಾಪಕರು, ಕೊಳ್ಳೇಗಾಲ

Tags:
error: Content is protected !!