Andolana originals

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ

ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ

ಮಡಿಕೇರಿ: ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ನೂತನ ಮಾರ್ಗಸೂಚಿ ಜಾರಿಯಾದ ಬಳಿಕ ಜಿಲ್ಲೆಯಲ್ಲಿ ಹೋಂಸ್ಟೇಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಈಗಾಗಲೇ ಪೊಲೀಸ್ ಇಲಾಖೆಯಿಂದ ಬೀಟ್ ಪೊಲೀಸ್‌ಗಳ ಮೂಲಕ ಹೋಂಸ್ಟೇಗಳ ದಾಖಲೆ ಪರಿಶೀಲನೆ ನಡೆಸಲಾಗುತ್ತಿದ್ದು, ಕಂದಾಯ, ಪೊಲೀಸ್ ಇಲಾಖೆಯ ಜಂಟಿ ಸರ್ವೇ ಕೂಡ ಆರಂಭವಾಗಿದೆ.

ದಕ್ಷಿಣ ಕೊಡಗಿನ ಕುಟ್ಟದ ಹೋಂಸ್ಟೇವೊಂದರಲ್ಲಿ ವಿದೇಶಿ ಮಹಿಳೆಯರೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬಳಿಕ ಸರ್ಕಾರದಿಂದ ಹೋಂಸ್ಟೇ ಗಳು ಮತ್ತು ಬೆಡ್ ಅಂಡ್ ಬ್ರೇಕ್‌ಫಾಸ್ಟ್ ಕಾರ್ಯ ವಿಧಾನದ ಸಂಬಂಧ ಎಸ್‌ಒಪಿ ಜಾರಿಗೊಳಿಸಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಕೆ, ಪರವಾನಗಿ ಪತ್ರ ಪ್ರದರ್ಶನ, ಪ್ರವಾಸಿಗರ ದಾಖಲೆ ಸಂಗ್ರಹ ಸೇರಿದಂತೆ ಹಲವು ನಿಯಮಗಳನ್ನು ಹೋಂಸ್ಟೇ ಮಾಲೀಕರು ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಈ ಸಂಬಂಧ ಜಿಲ್ಲೆಯಲ್ಲಿ ಪರಿಶೀಲನೆ ಆರಂಭವಾಗಿದ್ದು, ಅನಧಿಕೃತ ಹೋಂಸ್ಟೇಗಳ ಮೇಲೆ ಇಲಾಖೆಗಳು ಕ್ರಮಕ್ಕೆ ಮುಂದಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹೋಂಸ್ಟೇಗಳ ಪರಿಶೀಲನೆ ಆರಂಭಿಸಿದೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹೋಂಸ್ಟೇಗಳನ್ನು ಬೀಟ್ ಪೊಲೀಸರ ಮೂಲಕ ತಪಾಸಣೆ ಮಾಡಿಸಲಾಗುತ್ತಿದೆ. ಬಡಾವಣೆಗಳಿಗೆ ನಿಯೋಜನೆಗೊಂಡಿರುವ ಬೀಟ್ ಪೊಲೀಸರು ತಮ್ಮ ಬಡಾವಣೆಗಳಲ್ಲಿರುವ ಹೋಂಸ್ಟೇ ಗಳಿಗೆ ಭೇಟಿ ನೀಡಿ ಪರವಾನಗಿ ಸೇರಿದಂತೆ ಪ್ರವಾಸೋದ್ಯಮ, ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಂದ ಪಡೆದ ನಿರಾಪೇಕ್ಷಣಾ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಮಾಲೀಕರು ಸ್ಥಳದಲ್ಲಿಲ್ಲದೇ ನಡೆಸುತ್ತಿರುವ ಹೋಂಸ್ಟೇಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪರಿಶೀಲನೆ ವೇಳೆ ಮಾಲೀಕರು ಸ್ಥಳ ದಲ್ಲಿಲ್ಲದಿದ್ದರೆ ಮೂರು ದಿನಗಳೊಳಗಾಗಿ ಈ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಲಾಗುತ್ತಿದೆ. ಅಲ್ಲದೇ ಲೈಸನ್ಸ್ ಇಲ್ಲದೇ ನಡೆಸುವ ಹೋಂಸ್ಟೇ ರದ್ದುಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗುತ್ತಿದೆ. ಜತೆಗೆ ಹೊಸ ನಿಯಮಾ ನುಸಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಲೀಕರಿಗೆ ಮಾಹಿತಿ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಅಕ್ರಮ ಮತ್ತು ಅನಧಿಕೃತ ಹೋಂಸ್ಟೇಗಳ ಪತ್ತೆ ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಪ್ರವಾಸೋದ್ಯಮ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಜಂಟಿ ಆಶ್ರಯದಲ್ಲಿ ಸರ್ವೆ ಕಾರ್ಯ ಆರಂಭಗೊಂಡಿದೆ. ಈ ಸಂಬಂಧ ಇತ್ತೀಚೆಗೆ ನಡೆದ ಸಭೆಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ನಿತಿನ್ ಚಕ್ಕಿ ಮಾಹಿತಿ ನೀಡಿದ್ದು, ನೋಂದಣಿ ಆಗದೆ ಇರುವ ಹೋಂಸ್ಟೇ ಮಾಲೀಕರು ಕಾಲಮಿತಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆ, ನಗರಸಭೆ, ಪುರಸಭೆ ಅಥವಾ ಗ್ರಾಮ ಪಂಚಾಯಿತಿಯಿಂದ ನಿರಾಪೇಕ್ಷಣಾ ಪ್ರಮಾಣ ಪತ್ರ (ಎನ್‌ಒಸಿ) ಪಡೆದು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಧಿಕಾರಿಗಳು ಹೋಂ-ಸ್ಟೇಗಳ ಸರ್ವೇ ನಡೆಸುವ ಸಂದರ್ಭದಲ್ಲಿ ಮಾಲೀಕರು ಸರಿಯಾದ ಮಾಹಿತಿ ನೀಡಬೇಕು. ಈ ಹಿಂದೆ ಹೋಂ-ಸ್ಟೇ ನಡೆಸುತ್ತಿದ್ದು, ಪ್ರಸ್ತುತ ಸ್ಥಗಿತಗೊಳಿಸಿರುವ ಹೋಂ-ಸ್ಟೇಗಳ ಮಾಹಿತಿಯನ್ನು ಮಾಲೀಕರು ಕಡ್ಡಾಯವಾಗಿ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.

” ಬೀಟ್ ಪೊಲೀಸರು ಪ್ರತಿ ಹೋಂಸ್ಟೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಯಾವುದೇ ಅನಧಿಕೃತ ಹೋಂಸ್ಟೇಗಳು ಕಂಡುಬಂದಿಲ್ಲ. ಆದರೇ ಮಾಲೀಕರು ಸ್ಥಳದಲ್ಲಿ ಇಲ್ಲದಿರುವ ಹೋಂಸ್ಟೇಗಳ ಮಾಹಿತಿ ಪಡೆಯಲಾಗಿದ್ದು, ಅಂತಹ ಹೋಂಸ್ಟೇಗಳ ಮಾಲೀಕರಿಗೆ ಸ್ಥಳದಲ್ಲಿ ವಾಸವಿರಬೇಕು ಇಲ್ಲವಾದರೇ ಪರವಾನಗಿ ರದ್ದಾಗಲಿದೆ ಎಂದು ಎಚ್ಚರಿಕೆ ನೀಡುತ್ತಿ ದ್ದೇವೆ. ಅನಧಿಕೃತ ಹೋಂಸ್ಟೇಗಳು ಕಂಡುಬಂದರೇ ಕಠಿಣ ಕ್ರಮ ಜರುಗಿಸಲಾಗುವುದು.”

-ಆರ್.ಎನ್.ಬಿಂದುಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಅನಧಿಕೃತ ಹೋಂಸ್ಟೇಗಳ ಕುರಿತು ಮಾಹಿತಿ ನೀಡಿ.:.. ಅನಧಿಕೃತವಾಗಿ ಹೋಂಸ್ಟೇ ನಡೆಸುತ್ತಿರುವುದು ಮತ್ತು ಹೋಂಸ್ಟೇಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ವಿಚಾರ ತಿಳಿದಿದ್ದರೇ ಸಾರ್ವಜನಿಕರು ಮಾಹಿತಿ ನೀಡಬೇಕೆಂದು ಕರೆ ನೀಡಲಾಗಿದೆ. ಸಾರ್ವಜನಿಕರು ದೂರು, ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರದ ಮೂಲಕ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-೫೭೧೨೦೧ ಈ ವಿಳಾಸಕ್ಕೆ ಅಥವಾ ದೂ.ಸಂ.೦೮೨೭೨-೨೦೦೫೧೯, ಜಿಲ್ಲಾ ಪೊಲೀಸ್ ವರಿಷ್ಠಾಽಗಳ ಕಚೇರಿ ದೂ.ಸಂ. ೦೮೨೭೨-೨೨೯೦೦೦ಕ್ಕೆ ಮಾಹಿತಿ ನೀಡಬಹುದು ಎಂದು ತಿಳಿಸಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

18 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago