Andolana originals

ಮುಡಾದ ಬುಡ ಅಲುಗಾಡಿಸಿದ ಇಡಿ ಅಧಿಕಾರಿಗಳು

ಮೈಸೂರು: ಮೂರು ತಿಂಗಳುಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಶುರುವಾದ ಬೆನ್ನಲ್ಲೇ ಎಂಟ್ರಿಯಾಗಿರುವ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಹಗರಣದ ಬುಡಕ್ಕೆ ಕೈ ಹಾಕಿದ್ದಾರೆ.

ಒಂದು ವಾರದಿಂದ ಮುಡಾಕ್ಕೆ ಸಂಬಂಽಸಿದಂತೆ ಬೆಂಗಳೂರಿನಲ್ಲಿ ಅಗತ್ಯ ಮಾಹಿತಿಗಳನ್ನು ಕಲೆ ಹಾಕಿದ್ದ ಅಧಿಕಾರಿಗಳು ಶುಕ್ರವಾರ ಮುಡಾ ಮತ್ತು ತಾಲ್ಲೂಕು ಕಚೇರಿ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮುಡಾದಲ್ಲಿ ಕಳೆದುಹೋಗಿರುವ ಮೂಲ ದಾಖಲೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಖಡಕ್ ಮಾತುಗಳಲ್ಲಿ ಸೂಚನೆ ನೀಡಿದ್ದಾರೆ.

ಅವರು ಕೇಳುತ್ತಿರುವ ದಾಖಲೆಗಳನ್ನು ಒದಗಿಸಲು ಆಯುಕ್ತರು, ಕಾರ್ಯದರ್ಶಿ, ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಸಿ ಕೊಠಡಿಯೊಳಗೂ ಬೆವರಿದ್ದು, ಹೆಚ್ಚಿನ ಮಾಹಿತಿ ಬೇಕಾದಲ್ಲಿ ಹಿಂದಿನ ಆಯುಕ್ತರನ್ನೇ ವಿಚಾರಣೆ ಮಾಡಬೇಕಾಗಿದೆ ಎಂದು ಅಲವತ್ತುಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ, ಡಾ. ಡಿ. ಬಿ. ನಟೇಶ್, ಜಿ. ಟಿ. ದಿನೇಶ್‌ಕುಮಾರ್ ಅವರನ್ನು ವಿಚಾರಣೆ ನಡೆಸಲು ಬುಲಾವ್ ನೀಡಲಾಗಿದೆ. ಅವರು ನೀಡುವ ಮಾಹಿತಿಯ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಶೇ. ೫೦:೫೦ ಅನುಪಾತದಡಿ ಸಿಎಂ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿರುವುದೂ ಸೇರಿದಂತೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ, ಸಿಎಂ ಸಿದ್ದರಾಮಯ್ಯ ಅವರ ಭಾವ ಮೈದುನ ಮಲ್ಲಿಕಾರ್ಜುನಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಒಳಪಡಿಸಿದ್ದರು. ಸಿಎಂ ಮತ್ತು ಅವರ ಪತ್ನಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸುವುದಕ್ಕೆ ಒತ್ತಡ ಬರುತ್ತಿದ್ದರೂ, ಈತನಕ ನೋಟಿಸ್ ಜಾರಿಯಾಗಿಲ್ಲ. ಮತ್ತೊಂದೆಡೆ ೨೦೦೪ರಿಂದ ೨೦೨೪ವರೆಗೆ ಮುಡಾದಲ್ಲಿ ನಡೆದಿರುವ ಸಿಎ ನಿವೇಶನ ಹಂಚಿಕೆ, ಭೂ ಪರಿಹಾರ ಮೊದಲಾದ ವಿಚಾರಗಳ ಬಗ್ಗೆ ವರದಿ ನೀಡಲು ಪಿ. ಎನ್. ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣೆ ಆಯೋಗ ರಚನೆ ಮಾಡಿ ಮಾಹಿತಿಯನ್ನು ಒದಗಿಸಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ನಡುವೆ ಇಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆಗೆ ಇಳಿದಿ ದ್ದಾರೆ.

ಅಧಿಕಾರಿಗಳ ವಲಯದಲ್ಲಿ ಆತಂಕ: ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು, ಮುಡಾ ಅಧಿಕಾರಿಗಳಿಗೆ ವಿಚಾರಣೆಗೊಳಪಡಬೇಕಾಗುತ್ತದೆ ಎಂಬ ಆತಂಕ ಮೂಡಿಸಿದೆ. ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದ ವೇಳೆ ಯಾವುದೇ ಅಧಿಕಾರಿಗಳು ತುಟಿ ಬಿಚ್ಚದೆ ಆತಂಕದ ಛಾಯೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಭೂ ಸ್ವಾಧೀನ, ಖಾತೆ, ನಗರ ಯೋಜಕ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಮುಖ ಬಾಡಿ ಹೋಗಿತ್ತು. ಆಯುಕ್ತರು, ಕಾರ್ಯದರ್ಶಿ ಹಾಗೂ ಸಿಬ್ಬಂದಿ ಕೇಳಿದ ದಾಖಲೆಗಳನ್ನು ತತ್‌ಕ್ಷಣಕ್ಕೆ ಒದಗಿಸಲಾಗದೆ ಪರದಾಡಿದರು ಎಂದು ತಿಳಿದುಬಂದಿದೆ. ಮುಡಾ ಅಧ್ಯಕ್ಷ ಕೆ. ಮರೀಗೌಡರು ಆಯುಕ್ತರಿಗೆ ಪತ್ರ ಬರೆಯುವ ಸಂದರ್ಭದಲ್ಲಿ ಅನೇಕ ಅಂಶ ಗಳನ್ನು ಉಲ್ಲೇಖಿಸಿದ್ದಲ್ಲದೆ, ಶಾಸಕರು ಬರೆದಿದ್ದ ವಿಚಾರಗಳನ್ನು ಹೇಳಿದ್ದರು. ಈ ಎಲ್ಲಾ ಅಂಶಗಳನ್ನೂ ಕ್ರೋಢೀಕರಿಸಿ ಬದಲಿ ನಿವೇಶನವನ್ನು ಕಾನೂನುಬಾಹಿರವಾಗಿ ಯಾರ‍್ಯಾರಿಗೆ ಹಂಚಿಕೆ ಮಾಡಲಾಗಿದೆ ಎಂಬುದರ ಮಾಹಿತಿಯನ್ನು ಇಡಿ ಅಧಿಕಾರಿಗಳು ಸಂಗ್ರಹಿಸಿದರೆ ಇನ್ನೂ ಅನೇಕರು ಸಿಕ್ಕಿಬೀಳುವುದು ಗ್ಯಾರಂಟಿಯಾಗಿದೆ.

ನಿವೇಶನ ಮಾಲೀಕರಿಗೂ ಸಂಕಷ್ಟ: ಶೇ. ೫೦:೫೦ ಅನುಪಾತದಡಿ ಬದಲಿ ನಿವೇಶನ ಪಡೆದುಕೊಂಡಿರುವ ಕುರಿತು ತನಿಖೆ ನಡೆಯುವ ಸಾಧ್ಯತೆ ಇರುವ ಕಾರಣ ಅನೇಕ ನಿವೇಶನ ಮಾಲೀಕರಿಗೂ ಸಂಕಷ್ಟ ಎದುರಾಗಲಿದೆ. ಇಂತಹ ೧೦೦ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅವ್ಯವಹಾರ ನಡೆದಿದೆ. ಇದರಲ್ಲಿ ಜನಪ್ರತಿನಿಧಿಗಳ ಪ್ರಭಾವದಿಂದಲೇ ಪ್ರಾಧಿಕಾರದ ಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ಪಡೆದಿರುವ ಕಾರಣದಿಂದ ಸಂಬಂಧಪಟ್ಟ ಎಲ್ಲರಿಗೂ ಅಗತ್ಯ ಮಾಹಿತಿ ಒದಗಿಸುವಂತೆ ನೋಟಿಸ್ ಕೊಡುವುದಕ್ಕೆ ಇಡಿ ಅಽಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ಸ್ನೇಹಮಯಿ ಕೃಷ್ಣ ದೂರಿನ ಬಗ್ಗೆ ಇಡಿ ಪರಿಶೀಲನೆ: ಮೈಸೂರು: ಮುಡಾದಲ್ಲಿ ಸಾವಿರಾರು ಕೋಟಿ ರೂ. ಹಣಕಾಸಿನ ಅವ್ಯವಹಾರ ನಡೆದಿರುವ ಕುರಿತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿರುವ ಕಾರಣ ಅದಕ್ಕೆ ಬೇಕಾದ ದಾಖಲೆಗಳ ಸಂಗ್ರಹಕ್ಕೆ ಕೈ ಹಾಕಿದ್ದಾರೆ. ನಿವೇಶನ ಹಂಚಿಕೆ ಮಾಡುವಾಗ ನಡೆದಿರುವ ಹಗರಣದ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದು, ಮತ್ತಷ್ಟು ಅವ್ಯವಹಾರಗಳು ಹೊರಬರುವ ಸಾಧ್ಯತೆ ಇದೆ. ಹಿಂದಿನ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಅವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಬರೆದಿದ್ದ ಪತ್ರದಲ್ಲಿ ಒಂದು ಸಾವಿರ ಕೋಟಿ ರೂ. ಸರ್ಕಾರಕ್ಕೆ ನಷ್ಟವಾಗಿರುವುದನ್ನು ಉಲ್ಲೇಖಿಸಿದ್ದ ಪತ್ರದ ಆಧಾರದ ಮೇಲೂ ತನಿಖೆಯ ಆಳಕ್ಕೆ ಇಳಿದಿದ್ದಾರೆ. ಪ್ರತಿ ಕಡತಗಳಿಗೆ ಸಂಬಂಧಿಸಿದಂತೆ ಒಬ್ಬೊಬ್ಬ ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದರೆ, ಮತ್ತೊಬ್ಬರು ಅದನ್ನು ದಾಖಲಿಸಿಕೊಳ್ಳುತ್ತಿದ್ದರು. ಎಲ್ಲೆಲ್ಲಿ ಕಾನೂನು ಬಾಹಿರ ಕೆಲಸ ನಡೆದಿದೆ ಎಂಬುದನ್ನು ಗಮನಿಸಿ ಆಯುಕ್ತರು, ಕಾರ್ಯದರ್ಶಿಗೆ ಮರು ಪ್ರಶ್ನೆ ಮಾಡಿ ಮಾಹಿತಿ ಕೇಳುತ್ತಿದ್ದರು. ಈ ವೇಳೆ ತಮಗೆ ಗೊತ್ತಿರುವ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಹೀಗಾಗಿ, ಶನಿವಾರ ಹಿಂದಿನ ಆಯುಕ್ತರಾದ ಡಿ. ಬಿ. ನಟೇಶ್, ಜಿ. ಟಿ. ದಿನೇಶ್ ಕುಮಾರ್ ಅವರ ಸಮ್ಮುಖದಲ್ಲೇ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಇಡಿ ಅಧಿಕಾರಿಗಳು ಈ ಇಬ್ಬರೂ ನಿರ್ಗಮಿತ ಆಯುಕ್ತರಿಗೆ ದಾಖಲೆ ಪರಿಶೀಲನೆ ವೇಳೆ ಹಾಜರಿರುವಂತೆ ಸೂಚನೆ ನೀಡಿದ್ದಾರೆ.

ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವೆ: ಸ್ನೇಹಮಯಿ ಕೃಷ್ಣ: ಮೈಸೂರು: ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ಧ ಹೋರಾಟ ನಿಶ್ಚಿತ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು. ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು ನಾನು ದೂರು ನೀಡಿಲ್ಲ. ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣವನ್ನು ಬಯಲಿಗೆಳೆಯುವಂತೆ ಕೋರಿ ದೂರು ನೀಡಿದ್ದೇನೆ. ನಿರಂತರವಾಗಿ ಹೋರಾಟ ಮಾಡುವೆ ಎಂದರು. ಇಡಿ ಅಧಿಕಾರಿಗಳು ಕೇಳಿರುವ ಮಾಹಿತಿಯನ್ನು ಬೆಂಗಳೂರಿನಲ್ಲಿ ನೀಡಿದ್ದೇನೆ. ಮುಡಾ ಅಧಿಕಾರಿಗಳ ಮೇಲೆ ಒತ್ತಡ ತಂದು ದಾಖಲೆ ನಾಶಪಡಿಸುವ ಕೆಲಸ ಮಾಡುವ ಯತ್ನ ನಡೆದಿದೆ ಎಂದು ತಿಳಿಸಿದರು.

ಭೈರತಿ ಸುರೇಶ್‌ ಮನೆಯಲ್ಲೂ ಪರಿಶೀಲಿಸಿ: ಮೈಸೂರು: ಮುಡಾದಲ್ಲಿ ನಡೆದಿರುವ ೫೦:೫೦ ನಿವೇಶನ ಹಂಚಿಕೆ ಸೇರಿದಂತೆ ಇನ್ನಿತರೆ ಹಗರಣಗಳ ಬಗ್ಗೆ ಮುಡಾದಲ್ಲಿ ದಾಖಲೆಗಳನ್ನು ಪರಿಶೀಲಿಸುವ ಬದಲಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮನೆಯಲ್ಲಿ ಪರಿಶೀಲನೆ ಮಾಡಬೇಕು ಎಂದು ಶಾಸಕ ಟಿ. ಎಸ್. ಶ್ರೀವತ್ಸ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣ ಹೊರ ಬರುತ್ತಿದ್ದಂತೆಯೇ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದ ಸಚಿವ ಭೈರತಿ ಸುರೇಶ್ ಅವರು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಮೊದಲು ಸಚಿವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಬೇಕು. ಸಿಎಂ ಕಚೇರಿಯಲ್ಲೂ ಮಹತ್ತರ ದಾಖಲೆಗಳು ಇರುವುದರಿಂದ ದಾಳಿ ಮಾಡಿ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ರಾಜೀನಾಮೆ ನೀಡಬೇಕು. ಮುಡಾದಲ್ಲಿ ಕಾನೂನುಬಾಹಿರವಾಗಿ ನಿವೇಶನ ಹಂಚಿಕೆ ಆಗಿರುವುದು ದಾಖಲೆಗಳಲ್ಲಿ ಸಾಬೀತಾಗಿದೆ. ಸತ್ಯವನ್ನು ಎಂದಿಗೂ ಮುಚ್ಚಿಡಲು ಸಾಧ್ಯವಿಲ್ಲ. ಆಯುಕ್ತರಾಗಿ ಕೆಲಸ ಮಾಡಿದ್ದ ಡಾ. ಡಿ. ಬಿ. ನಟೇಶ್, ಜಿ. ಟಿ. ದಿನೇಶ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.

ಮುಡಾದಲ್ಲಿ ಕಡತಗಳನ್ನು ತಿದ್ದುವ, ನಾಶಪಡಿಸುವ ಕೆಲಸ ನಡೆದಿದೆ. ನಮಗೆ ಬಂದಿರುವ ಮಾಹಿತಿ ಪ್ರಕಾರ ಹಲವಾರು ದಾಖಲೆಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲಾಗಿದೆ. -ಟಿ. ಎಸ್. ಶ್ರೀವತ್ಸ, ಶಾಸಕ.

 

 

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

11 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

54 mins ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

4 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

4 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago