Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ

ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲೂ ಕೊಡಗು ಜಿಲ್ಲೆಗೆ ತನ್ನದೇ ಆದ ಹೆಸರಿದೆ. ಕೊಡಗಿನ ಖ್ಯಾತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ ಮಂಡೇಪಂಡ ಪಿ.ಸುಜಾ ಕುಶಾಲಪ್ಪ ಹೇಳಿದರು.

ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿ. ಬಾಡಗದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಾನುವಾರ ನಡೆದ ೪ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-೨೦೨೫ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಕ್ರೀಡಾ ಇತಿಹಾಸದಿಂದ ಕೊಡಗು ಜಿಲ್ಲೆಯ ಕ್ರೀಡಾ ಸಾಧನೆಯನ್ನು ಹೊರತುಪಡಿ ಸಲು ಎಂದಿಗೂ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು. ವಿ.ಬಾಡಗ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದ ಅಭಿವೃದ್ಧಿಗಾಗಿ ತಮ್ಮ ಸರ್ಕಾರಿ ನಿಧಿಯಿಂದ ೩ ಲಕ್ಷ ರೂ. ಅನುದಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ದ.ಕೊಡಗಿನ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಐದು ದಿನಗಳ ಕಾಲ ನಡೆಯಲಿರುವ ಈ ಪಂದ್ಯಾವಳಿಯನ್ನು ಮೈದಾನದಲ್ಲಿ ಚೆಂಡು ತಳ್ಳುವ ಮೂಲಕ ವಿಧ್ಯುಕ್ತವಾಗಿಉದ್ಘಾಟಿಸಿ ಮಾತನಾಡಿದ ಭಾರತ ಹಾಕಿ ತಂಡದ ಮಾಜಿ ಆಟಗಾರರಾದ ಬಾಳೆಯಡ ಕಾಳಯ್ಯ ಸುಬ್ರಹ್ಮಣಿ, ದೇಶಸೇವೆ, ಕೃಷಿ ಮತ್ತು ಕ್ರೀಡೆಯನ್ನು ಹಿಂದಿನಿಂದಲೂ ತಮ್ಮ ರಕ್ತಗತವಾಗಿ ಮೈಗೂಡಿಸಿ ಕೊಂಡಿರುವ ಕೊಡವರು, ಈ ಮೂರು ಕ್ಷೇತ್ರಗಳ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅದರಲ್ಲೂ ದೇಶಸೇವೆ ಮತ್ತು ಕ್ರೀಡೆಯ ಅಭಿವೃದ್ಧಿಯಲ್ಲಿ ಕೊಡಗು ಜಿಲ್ಲೆ ನಿರ್ವಹಿಸಿದ ಪಾತ್ರವನ್ನು ರಾಜ್ಯದ ಬೇರೆ ಯಾವುದೇ ಜಿಲ್ಲೆ ನಿರ್ವಹಿಸಿಲ್ಲ. ಇದನ್ನು ಸರ್ಕಾರ ಪ್ರತ್ಯೇಕವಾಗಿ ಗುರುತಿಸುವಂತಾಗಬೇಕು ಎಂದರು.

ಹಾಕಿ ಕೂರ್ಗ್ ಅಧ್ಯಕ್ಷ ಪಳಂಗಂಡ ಲವ ಕುಮಾರ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಉತ್ತೇಜಿಸುವ ಕೆಲಸ ಕೊಡಗಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ. ಅದರಲ್ಲೂ ವಿಶೇಷವಾಗಿ ಹಾಕಿ ಕ್ರೀಡೆಯಲ್ಲಿ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಬೇಕು. ವಿದ್ಯಾರ್ಥಿಗಳನ್ನು ಪ್ರಾಥಮಿಕ ಹಂತದಿಂದಲೇ ಕ್ರೀಡಾ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗುವಂತೆ ಮಾಡಿದಲ್ಲಿ ಶ್ರೇಷ್ಠ ಕ್ರೀಡಾಪಟು ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿದ್ದ ವಿ.ಬಾಡಗ ಜಿಎಂಪಿ ಶಾಲಾ ಮುಖ್ಯ ಶಿಕ್ಷಕಿ ಕೆ.ಸಿ.ಗೀತಾಂಜಲಿ ಮಾತನಾಡಿದರು.

ಹೈಪ್ಲೈಯರ್ಸ್ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷರಾದ ಮಳವಂಡ ಗಿರೀಶ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲಿರ ಬೋಪಣ್ಣ, ಪ್ರಮುಖರಾದ ಕಂಜಿತಂಡ ಗಿಣಿ ಮೊಣ್ಣಪ್ಪ, ಪಂದ್ಯಾವಳಿಯ ನಿರ್ದೇಶಕರಾದ ಕುಪ್ಪಂಡ ದಿಲನ್ ಬೋಪಣ್ಣ ಉಪಸ್ಥಿತರಿದ್ದರು. ಉಳುವಂಗಡ ಲೋಹಿತ್ ಭೀಮಯ್ಯ ಪ್ರಾರ್ಥಿಸಿದರು. ಹೈಪ್ಲೈಯರ್ಸ್ ಸಂಸ್ಥೆಯ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಮಾತನಾಡಿದರು. ಹಿರಿಯ ವೀಕ್ಷಕ ವಿವರಣೆಗಾರರಾದ ಮಾಳೇಟಿರ ಶ್ರೀನಿವಾಸ್ ಕಾರ್ಯಕ್ರಮ ನಿರ್ವಹಿಸಿದರು.

ಪೆವಿಲಿಯನ್ ನಿರ್ಮಿಸಲು ಕ್ರಮ: ಎ.ಎಸ್.ಪೊನ್ನಣ್ಣ ಪಂದ್ಯಾವಳಿಯ ಪ್ರಥಮಾರ್ಧದ ಸಮಯದಲ್ಲಿ ಮೈದಾನಕ್ಕೆ ಬಂದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಆಟಗಾರರಿಗೆ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಕೂಟಗಳು ಜರುಗುತ್ತಿರುವುದು ಕ್ರೀಡೆಗೆ ದೊರೆಯುವ ಉತ್ತೇಜನವಾಗಿದೆ. ಇದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರಲ್ಲದೆ, ವಿ. ಬಾಡಗದ ಜಿಎಂಪಿ ಶಾಲಾ ಮೈದಾನಕ್ಕೆ ಪೆವಿಲಿಯನ್ ನಿರ್ಮಿಸಲು ಬೇಡಿಕೆ ಬಂದಿದೆ. ಅದರಿಂದ ಈ ಕುರಿತು ಅಗತ್ಯ ಪ್ರಸ್ತಾವನೆ ಸಲ್ಲಿಸಿದರೆ, ಮುಂದಿನ ವರ್ಷದೊಳಗಾಗಿ ಮೈದಾನಕ್ಕೆ ಪೆವಿಲಿಯನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Tags:
error: Content is protected !!