Mysore
18
few clouds

Social Media

ಮಂಗಳವಾರ, 27 ಜನವರಿ 2026
Light
Dark

ಕಟ್ಟಡ ತ್ಯಾಜ್ಯ ಸಮಸ್ಯೆಗೆ ಕೊನೆಗೂ ಪರಿಹಾರ!

೧೦ ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಸಿದ್ಧತೆ

ಮೈಸೂರು: ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿರುವ ಮೈಸೂರು ಹಲವಾರು ವರ್ಷಗಳಿಂದ ಕಟ್ಟಡ ತ್ಯಾಜ್ಯದ(ಡೆಬ್ರಿಸ್) ಸಮಸ್ಯೆಯನ್ನು ಎದುರಿಸುತ್ತಿದ್ದು, ಇದೀಗ ಮೈಸೂರು ಮಹಾನಗರಪಾಲಿಕೆ ಕಟ್ಟಡ ತ್ಯಾಜ್ಯಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡಿದೆ.

ರಾಜ್ಯ ಸರ್ಕಾರದ ವಿಶೇಷ ಅನುದಾನದಡಿ ಒಟ್ಟು ೧೦ ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಸದ್ಯ ಜಾಗದ ಸುತ್ತ ಫೆನ್ಸಿಂಗ್ ಅಳವಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಇನ್ನು ಘಟಕ ನಿರ್ಮಾಣ ಕಾರ್ಯ ಆಗಬೇಕಾಗಿದೆ.

ಘಟಕ ಕಾರ್ಯಾರಂಭಗೊಂಡ ನಂತರ ಕಟ್ಟಡ ತ್ಯಾಜ್ಯದಲ್ಲಿ ದೊರೆಯುವ ಮಣ್ಣು, ಕಲ್ಲು, ಕಬ್ಬಿಣಗಳನ್ನು ಬೇರ್ಪಡಿಸಿ ಮರುಬಳಕೆಗೆ ಸಿದ್ಧಪಡಿಸಲಾಗುವುದು. ಘಟಕ ಕಾರ್ಯಾರಂಭಗೊಂಡರೆ ನಗರದಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಸುರಿಯುವುದಕ್ಕೆ ಸಂಪೂರ್ಣ ಕಡಿವಾಣ ಬೀಳಲಿದೆ.

ಕಟ್ಟಡ ತ್ಯಾಜ ವಿಲೇವಾರಿಗೆ ಹಂಚ್ಯಾ-ಸಾತಗಳ್ಳಿಯಲ್ಲಿ ಕಟ್ಟಡ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಲು ಮೈಸೂರು ಅಭಿವೃದ್ಧಿ ಪ್ರಾಧಿಕಾರ ೯.೫ ಎಕರೆ ಜಾಗವನ್ನು ೩೦ ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಮಂಜೂರು ಮಾಡಿತ್ತು. ಆದರೆ, ಈ ಜಾಗದ ವಿಚಾರವಾಗಿ ಕೆಲವು ಗೊಂದಲಗಳಿದ್ದ ಹಿನ್ನೆಲೆಯಲ್ಲಿ ಘಟಕ ನಿರ್ಮಾಣ ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ. ಇದೀಗ ಗೊಂದಲಗಳೆಲ್ಲ ಪರಿಹರಿಸಿ ನಗರ ಪಾಲಿಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸಂಸ್ಥೆಯೊಂದಕ್ಕೆ ಘಟಕ ನಿರ್ಮಾಣಕ್ಕೆ ಕಾರ್ಯಾದೇಶ ನೀಡಿದೆ.

ಎಲ್ಲೆಂದರಲ್ಲಿ ಕಸ ಸುರಿದರೆ ಕ್ರಿಮಿನಲ್ ಕೇಸ್!:  ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ಸುರಿಯುವುದು ಕರ್ನಾಟಕ ಪೌರ ನಿಗಮಗಳ ಕಾಯ್ದೆ ಪ್ರಕರಣ ೨೫೬ಕ್ಕೆ ವಿರುದ್ಧವಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ, ದುರಸ್ತಿ ಹಾಗೂ ಕೆಡವುದರಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಹಂಚ್ಯಾ-ಸಾತಗಳ್ಳಿಯಲ್ಲಿ ಗುರುತಿಸಿರುವ ಖಾಲಿ ಜಾಗದಲ್ಲಿಯೇ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ(ಡೆಬ್ರಿಸ್) ಸುರಿದರೆ ಭಾರಿ ಪ್ರಮಾಣದ ದಂಡ ತೆರಬೇಕಾಗುತ್ತದೆ. ಮಾತ್ರವಲ್ಲ, ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗುವುದು ಎಂದು ಪಾಲಿಕೆ ಈ ಹಿಂದೆ ಎಚ್ಚರಿಕೆ ನೀಡಿತ್ತು. ಆದರೆ, ಹಂಚ್ಯಾ-ಸಾತಗಳ್ಳಿಯಲ್ಲಿ ಗುರುತಿಸಿರುವ ಜಾಗದಲ್ಲಿ ಘಟಕ ನಿರ್ಮಾಣ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಾಲಿಕೆ ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಘಟಕ ನಿರ್ಮಾಣವಾದ ನಂತರ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಸುರಿದರೆ ದೊಡ್ಡ ಪ್ರಮಾಣದಲ್ಲಿ ದಂಡ ಬೀಳುವುದು ನಿಶ್ಚಿತವಾಗಿದೆ.

” ನಗರದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿಗೆ ಹಂಚ್ಯಾ- ಸಾತಗಳ್ಳಿಯಲ್ಲಿ ಜಾಗ ಗುರುತಿಸಲಾಗಿದೆ. ಜಾಗದ ಗೊಂದಲದಿಂದ ಇದುವರೆಗೆ ಅಲ್ಲಿ ಘಟಕ ನಿರ್ಮಾಣ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಹಂಚ್ಯಾ-ಸಾತಗಳ್ಳಿಯಲ್ಲಿಯೇ ಘಟಕ ನಿರ್ಮಾಣ ಮಾಡಲು ತೀರ್ಮಾನಿಸಿ ಖಾಸಗಿ ಸಹಭಾಗಿತ್ವದಲ್ಲಿ ಘಟಕ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಜನರು ಇನ್ನು ಮುಂದೆ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಸುರಿಯುವುದನ್ನು ನಿಲ್ಲಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಆ ಮೂಲಕ ಸ್ವಚ್ಛ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು.”

-ಡಾ.ವೆಂಕಟೇಶ್, ನಗರಪಾಲಿಕೆ ಆರೋಗ್ಯಾಧಿಕಾರಿ

Tags:
error: Content is protected !!