ನವೀನ್ ಡಿಸೋಜ
ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ
ಮಡಿಕೇರಿ: ಮಂಜಿನ ನಗರಿಯ ಪ್ರಸಿದ್ಧ ಪ್ರವಾಸಿತಾಣ ರಾಜಾಸೀಟ್ನಲ್ಲಿ ಜ.೨೪ರಿಂದ ೩ ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಕೊಡಗಿನ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಲಾಕೃತಿಗಳು ಕಣ್ಮನ ಸೆಳೆಯಲಿವೆ.
ಗಣರಾಜ್ಯೋತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರೇ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಜ.೨೪ರಿಂದ ೨೬ರವರೆಗೆ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾ ಸೀಟ್ ಉದ್ಯಾನವನದಲ್ಲಿ ಸುಮಾರು ೮ ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ಗಳಲ್ಲಿ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್,ಡೇಲಿಯಾ ಮುಂತಾದ ೨೦ ಸಾವಿರ ವಿವಿಧ ಜಾತಿಯ ಹೂವುಗಳನ್ನು ಬೆಳೆಸಲಾಗಿದೆ.
ಕೊಡಗಿನ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ಈ ಬಾರಿ ಕಣ್ಮನ ಸೆಳೆಯಲಿದೆ. ೩೩ ಅಡಿ ಎತ್ತರ,೧೮ ಅಡಿ ಉದ್ದ, ೨೩ ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳನ್ನು ಬಳಸಿ ಈ ಕಲಾಕೃತಿಯನ್ನು ನಿರ್ಮಾಣ ಮಾಡಲಾಗಿದೆ. ಜೊತೆಗೆ ಭಾರತ ಏಕೀಕರಣದ ಸಂಕೇತವಾಗಿ ಕನ್ನಡ ಅಕ್ಷರಗಳ ೨.೫ ಅಡಿ ಮತ್ತು ೨.೦ ಅಡಿ ಎತ್ತರದಲ್ಲಿ ನಾಲ್ಕು ಕಲಾಕೃತಿಗಳು ಮತ್ತು ೪.೫ ಅಡಿ ಮತ್ತು ೪.೦ ಅಡಿ ಎತ್ತರದಲ್ಲಿ ೨ ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲು ಯೋಜಿಸಲಾಗಿದೆ.
ಇದರೊಂದಿಗೆ ಸಂಗೀತ ಪರಿಕರಗಳಾದ ೨ ತಬಲಾ ಕಲಾಕೃತಿಯನ್ನು ೨.೫ ಅಡಿ ಎತ್ತರ ಮತ್ತು ೩ ಅಡಿ ಎತ್ತರದಲ್ಲಿ, ೫ ಅಡಿ ಎತ್ತರ, ೪ ಅಡಿ ಅಗಲ ಮತ್ತು ೩ ಅಡಿ ಉದ್ದದ ಪಿಯಾನೊ ಕಲಾಕೃತಿ, ೬ ಅಡಿ ಎತ್ತರ, ೩ ಅಡಿ ಅಗಲದ ಹರ್ಪ್ ಕಲಾಕೃತಿಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
ಜೊತೆಗೆ ಗಣರಾಜ್ಯೋತ್ಸವದ ಅಂಗವಾಗಿ ಅಮರ್ ಜವಾನ್ ಕಲಾಕೃತಿಯನ್ನು ೮ ಅಡಿ ಎತ್ತರದಲ್ಲಿ ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೊತೆಗೆ ಹಾರುವ ಹಕ್ಕಿ, ಮೀನು, ಬಟರ್ಫ್ಲೈ, ಹಾರ್ಟ್ ಶೇಪ್, ಕರಡಿ ಕಲಾಕೃತಿ ರೂಪಿಸಲೂ ನಿರ್ಧರಿಸಲಾಗಿದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಬ್ಲೂವೇ, ಮಿಕ್ಕಿ ಮೌಸ್, ಡೊರೇಮ್ಯಾನ್ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ನಿರ್ಮಿಸಲು ಉದ್ದೇಶಿಸಲಾಗಿದೆ.
ದೇಶದ ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಹಣ್ಣು, ತರಕಾರಿಗಳಿಂದ ನಿರ್ಮಿಸಿ ಪ್ರದರ್ಶಿಸಲಾಗುತ್ತದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನ ಹೂವಿನ ಜೋಡಣೆಯ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತಿದೆ. ಒಟ್ಟಾರೆ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು ೮ ರಿಂದ ೧೦ ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳನ್ನು ಬಳಸಿ ನಿರ್ಮಾಣ ಮಾಡಲು ಇಲಾಖೆ ನಿರ್ಧರಿಸಿದೆ.
೬೦ ಮಳಿಗೆಗಳಲ್ಲಿ ಪ್ರದರ್ಶನ ಕೇಂದ್ರ..!:
ಫಲಪುಷ್ಪ ಪ್ರದರ್ಶನ ಅಂಗವಾಗಿ ಗಾಂಽ ಮೈದಾನದಲ್ಲಿ ೬೦ ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳಲ್ಲಿ ೧೦ ಮಳಿಗೆಗಳನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಪ್ಕಾಮ್ಸ್, ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. ೫೦ ಮಳಿಗೆಗಳಲ್ಲಿ ನರ್ಸರಿ ಗಿಡಗಳ ಮಾರಾಟ,ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರ ಬೆಳೆಗಳ ಪ್ರದರ್ಶನ ಏರ್ಪಡಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶನಗಳಿಗೆ ಬಹುಮಾನ ನೀಡಲಾಗುವುದು. ಆಸಕ್ತರು ಜ.೨೩ರಿಂದಲೇ ತೋಟಗಾರಿಕೆ ಇಲಾಖೆಗೆ ಪ್ರದರ್ಶಿಕೆಗಳನ್ನು ತಂದು ಹೆಸರನ್ನು ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ.
ವಿವಿಧ ಸ್ಪರ್ಧೆಗಳ ಆಯೋಜನೆ..!:
ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರು ಮತ್ತು ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುತ್ತದೆ. ಆಸಕ್ತರು ಜ.೨೪ರ ಬೆಳಿಗ್ಗೆ ೮ ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ ಮೊ.ಸಂ. ೯೪೪೮೬೧೩೩೫೫ ಅನ್ನು ಸಂಪರ್ಕಿಸಿ ನೋಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ.
” ತೋಟಗಾರಿಕೆ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಜ.೨೪ರಿಂದ ೨೬ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಜ.೨೪ರಂದು ಮಧ್ಯಾಹ್ನ ೩ ಗಂಟೆಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಶಾಲೆಯ ಸಮವಸ್ತ್ರದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಲಾಗುತ್ತದೆ.”
-ಎಸ್.ಜೆ.ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ಎಚ್.ಎಸ್.ದಿನೇಶ್ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…