Andolana originals

ಏ.೨೬ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ನವೀನ್ ಡಿಸೋಜ

ಪಶು ಇಲಾಖೆಯಿಂದ ೭೬,೯೨೦ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ

ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.೨೬ರಿಂದ ೪೫ ದಿನಗಳ ಕಾಲ ೭ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿ ೭೬,೯೨೦ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ. ಕಾಲು ಬಾಯಿ ಜ್ವರವು ಒಂದು ವೈರಾಣುರೋಗ ವಾಗಿದ್ದು, ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ.

ಕಾಲುಬಾಯಿ ರೋಗದಿಂದ ಗುಣಮುಖವಾದರೂ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭ ಕಟ್ಟುವಲ್ಲಿ ವಿಳಂಬ, ಎತ್ತು, ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ.

ಲಸಿಕೆ ಹಾಕಿಸುವುದೊಂದೇ ಕಾಲು ಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟ ಬಹುದಾಗಿರುತ್ತದೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ೬ ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕಿದೆ.

ವರ್ಷದಲ್ಲಿ ಕನಿಷ್ಠ ಎರಡು ಬಾರಿ ದನ ಮತ್ತು ಎಮ್ಮೆಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೇ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ ೩ ರಿಂದ ೫ ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸ ಬೇಕಿದೆ. ಹಾಗೆಯೇ ಗರ್ಭಧರಿಸಿದ ಹಸು ಮತ್ತು ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕಿದೆ.

ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಪಶುಪಾಲನಾ ಇಲಾಖೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ೭೫ ಲಸಿಕಾದಾರರನ್ನೊಳಗೊಂಡ ಲಸಿಕಾ ದಾರರು ರೈತರ, ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ.

ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆಬಂದಾಗ ಸಹಕಾರ ನೀಡಿ ೪ ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆ ಲಸಿಕೆ ಹಾಕಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ ೯೪೪೮೬೪೭೨೭೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ ೯೯೮೦೩೬೦೨೦೦, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ವಿರಾಜಪೇಟೆ ೯೯೦೧೩೦೩೯೯೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ ೯೪೪೮೪೨೨೨೬೯ ಸಹಾ ಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ ೯೭೪೦೫೫೬೩೧೧

” ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಕಾಯಿಲೆಯಾಗಿದೆ. ಇದು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದ್ದು, ಲಸಿಕೆ ಹಾಕುವುದರಿಂದ ಕಾಲುಬಾಯಿ ರೋಗವನ್ನು ನಿಯಂತ್ರಿಸಬಹುದಾಗಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರಿಗೆ ಆರ್ಥಿಕ ಸಂಕಷ್ಟ ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕು.”

-ಡಾ.ಲಿಂಗರಾಜ ದೊಡ್ಡಮನಿ, ಉಪ ನಿರ್ದೇಶಕರು, ಪಶುವೈದ್ಯಕೀಯ ಸೇವಾ ಇಲಾಖೆ 

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

1 hour ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

1 hour ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

1 hour ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago