Mysore
24
overcast clouds

Social Media

ಶುಕ್ರವಾರ, 17 ಜುಲೈ 2026
Light
Dark

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ  

ನವೀನ್ ಡಿಸೋಜ

ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಶೇ.೧೦೦ ನಮೂನೆಗಳನ್ನು ವಿತರಿಸಲಾಗಿದೆ.

ಮತದಾರರ ಪಟ್ಟಿಯನ್ನು ಹೆಚ್ಚು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ಎಲ್ಲಾ ಮತದಾರರಿಗೆ ನಮೂನೆಗಳನ್ನು ವಿತರಿಸಲಾಗಿದೆ. ಜೊತೆಗೆ ೧,೯೭,೯೭೬ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, ಇದು ಒಟ್ಟು ಮತದಾರರ ಶೇ.೪೨.೨೪ರಷ್ಟಾಗಿದೆ.

ಜೂನ್ ೩೦ರಿಂದ ಆರಂಭಗೊಂಡಿರುವ ಈ ವಿಶೇಷ ಅಭಿಯಾನ ಆ.೮ರವರೆಗೆ ಮುಂದುವರಿಯಲಿದೆ. ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ೫೫೨ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುವುದರೊಂದಿಗೆ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ. ಮತದಾರರು ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಲು ಹಾಗೂ ಆನ್ ಲೈನ್‌ನಲ್ಲಿಯೂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಮಡಿಕೇರಿ ಕ್ಷೇತ್ರದಲ್ಲಿ ೨,೩೮,೪೪೭ ಮತದಾರರಿದ್ದು, ೨,೩೮,೪೪೭ ಮಂದಿಗೆ ನಮೂನೆ ವಿತರಿಸುವ ಮೂಲಕ ಶೇ.೧೦೦ರಷ್ಟು ಸಾಧನೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಈಗಾಗಲೇ ೧,೦೮,೯೮೬ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ೨,೩೦,೨೧೦ ಮತದಾರರಿದ್ದು, ಎಲ್ಲಾ ಮತದಾರರಿಗೆ ನಮೂನೆಗಳನ್ನು ವಿತರಿಸಲಾಗಿದ್ದು, ೮೯,೦೨೦ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ.

ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ, ವಿರಾಜಪೇಟೆ ತಾಲ್ಲೂಕುಗಳಲ್ಲಿ ಶೇ.೧೦೦ರಷ್ಟು ನಮೂನೆ ವಿತರಿಸಲಾಗಿದೆ. ಕೆಲವು ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳಲ್ಲಿಯೂ ಅಽಕಾರಿಗಳು ಮನೆ ಮನೆಗೆ ತೆರಳಿ ಕಾರ್ಯ ನಿರ್ವಹಿಸಿದ್ದಾರೆ. ಇದುವರೆಗೆ ನಡೆದ ಪರಿಶೀಲನೆಯಲ್ಲಿ ೨,೭೨೮ ಮಂದಿ ಮತದಾರರು ಸ್ಥಳಾಂತರ ಗೊಂಡಿರುವುದು, ೨,೨೫೧ ಮಂದಿ ಮೃತಪಟ್ಟಿರುವುದು, ೩೭೭ ನಕಲಿ ಮತದಾರರ ನೋಂದಣಿಗಳು ಹಾಗೂ ೧೯ ಇತರೆ ಪ್ರಕರಣಗಳು ಪತ್ತೆಯಾಗಿವೆ. ಈ ಮಾಹಿತಿಗಳನ್ನು ದಾಖಲಿಸಿ ಮುಂದಿನ ಪರಿಶೀಲನೆಗೆ ಕಳುಹಿಸಲಾಗಿದೆ. ಪರಿಷ್ಕರಣೆ ಪೂರ್ಣಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಪ್ರಕ್ರಿಯೆ ನಡೆಯಲಿದೆ.

” ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು ೫೫೨ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿ ಸುವ ಕಾರ್ಯವನ್ನು ಶೇ.೧೦೦ರಷ್ಟು ಸಾಧಿಸಲಾಗಿದೆ. ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಿಸಿ ಬಿಎಲ್‌ಒ ಆಪ್‌ನಲ್ಲಿ ಡಿಜಿಟಲೀಕರಣ ಮಾಡಲಾಗುತ್ತಿದೆ.”

-ಎಸ್.ಜೆ.ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ

 

 

Tags:
error: Content is protected !!